ಸರ್ಕಾರದ ಯೋಜನೆ ಜನರಿಗೆ ತಲುಪಿಸುವಲ್ಲಿ ಗ್ರಾಮ ಒನ್ ಸಹಕಾರಿ: ಡಿಸಿ ಡಾ. ಕೆ.ವಿದ್ಯಾಕುಮಾರಿ

| Published : Dec 22 2024, 01:32 AM IST

ಸರ್ಕಾರದ ಯೋಜನೆ ಜನರಿಗೆ ತಲುಪಿಸುವಲ್ಲಿ ಗ್ರಾಮ ಒನ್ ಸಹಕಾರಿ: ಡಿಸಿ ಡಾ. ಕೆ.ವಿದ್ಯಾಕುಮಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ ಉಡುಪಿ ಹಾಗೂ ಸೇವಾ ಸಿಂಧು / ಗ್ರಾಮ ಒನ್‌ಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಗ್ರಾಮ ಒನ್ ಕೇಂದ್ರಗಳ ನಿರ್ವಾಹಕರ ಗ್ರಾಮ ಒನ್ ಸಮ್ಮಿಲನ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಮಟ್ಟದಲ್ಲಿ ಸಾರ್ವಜನಿಕರಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗ್ರಾಮ ಒನ್ ಸೇವಾ ಕೇಂದ್ರಗಳು ಸಹಕಾರಿಯಾಗಿವೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು.ಅವರು ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ ಉಡುಪಿ ಹಾಗೂ ಸೇವಾ ಸಿಂಧು / ಗ್ರಾಮ ಒನ್‌ಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಗ್ರಾಮ ಒನ್ ಕೇಂದ್ರಗಳ ನಿರ್ವಾಹಕರ ಗ್ರಾಮ ಒನ್ ಸಮ್ಮಿಲನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯಲ್ಲಿ 208ಕ್ಕೂ ಹೆಚ್ಚು ಗ್ರಾಮ ಒನ್ ಕೇಂದ್ರಗಳೂ ಕಾರ್ಯನಿರ್ವಹಿಸುತ್ತಿದ್ದು, ಇದರಿಂದ ಸ್ಥಳೀಯ ನಿರುದ್ಯೋಗಿಗಳಿಗೆ ಉದ್ಯೋಗ ಲಭಿಸಿದಂತಾಗಿದೆ. ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಗ್ರಾಮ ಒನ್ ಸೇವಾ ಕೇಂದ್ರಗಳ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುತ್ತಿರುವುದಕ್ಕೆ ಶ್ಲಾಘನೆ ವ್ಯಕ್ತಪಡಿಸಿದ ಅವರು, ಮುಂದಿನ ದಿನಗಳಲ್ಲಿ ಗ್ರಾಮ ಒನ್ ಕೇಂದ್ರಗಳು ಇಲಾಖೆಗಳ ಸಮನ್ವಯೊಂದಿಗೆ ಇನ್ನಷ್ಟು ಉತ್ಸುಕತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.ಆಯುಷ್ಮಾನ್ ಭಾರತ, ಗ್ಯಾರಂಟಿ ಯೋಜನೆಗಳು ಸೇರಿದಂತೆ ಮತ್ತಿತರರ ಸರ್ಕಾರ ಯೋಜನೆಗಳಿಗೆ ಗ್ರಾಮ ಒನ್ ನಿರ್ವಾಹಕರುಗಳು ಸಾರ್ವಜನಿಕರಿಂದ ಹೆಚ್ಚುವರಿ ಶುಲ್ಕವನ್ನು ಪಡೆಯದೇ ಸರ್ಕಾರ ನಿಗದಿಪಡಿಸಿದ ಶುಲ್ಕವನ್ನು ಪಡೆಯುವ ಮೂಲಕ ಸಾರ್ವಜನಿಕರಿಗೆ ತಮ್ಮ ಪ್ರಾಮಾಣಿಕ ಸೇವೆಯನ್ನು ನೀಡಬೇಕು ಎಂದು ಹೇಳಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಭಾಗದ ಜನರು ಸರ್ಕಾರದ ಯೋಜನೆಗಳ ಸದುಪಯೋಗ ಪಡೆಯಲು ಅನುಕೂಲವಾಗುವಂತೆ ಗ್ರಾಮ ಮಟ್ಟದಲ್ಲಿ ಸ್ಥಾಪನೆಯಾಗಿರುವ ಗ್ರಾಮ ಒನ್ ಸೆಂಟರ್‌ಗಳ ಲಾಭ ಪಡೆಯಬಹುದಾಗಿದೆ ಎಂದರು.ಗ್ರಾಮ ಒನ್‌ನ ಜಿಲ್ಲಾ ಯೋಜನಾ ವ್ಯವಸ್ಥಾಪಕ ನವೀಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಾರ್ವಜನಿಕರಿಗೆ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಗ್ರಾಮ ಒನ್ ಕೇಂದ್ರಗಳು ವಾರದ ಏಳು ದಿನಗಳು ಸಹ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದು, ಗ್ರಾಮ ಒನ್ ಕೇಂದ್ರಗಳಲ್ಲಿ ಯೋಜನೆಗಳ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ಉತ್ತಮ ಸಮಾಜ ಸೇವೆಗಾಗಿ ನಂದಾ ಕಿಶೋರ್ ಬ್ರಹ್ಮಾವರ ಇವರನ್ನು ಸನ್ಮಾಯಿಸಲಾಯಿತು. ಕಾರ್ಯಕ್ರಮದಲ್ಲಿ ಇಡಿಸಿಎಸ್ ನಿರ್ದೇಶನಾಲಯದ ಉಪ ನಿರ್ದೇಶಕ ಮಹವೀರ್ ಮತ್ತಿತರರು ಉಪಸ್ಥಿತರಿದ್ದರು. ಸುಷ್ಮಾ ಉದ್ಯಾವರ ಸ್ವಾಗತಿಸಿ, ವಿಕಾಸ್ ಕಡೆಕಾರ್ ನಿರೂಪಿಸಿ, ಗಣೇಶ್ ವಂದಿಸಿದರು.