ಸಾರಾಂಶ
ಡಿಸಿ ಕಚೇರಿ ಎದುರು ಹಣೆಗೆ ಕಪ್ಪು ಪಟ್ಟಿ ಕಟ್ಟಿ ಕರವೇ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಬೀದರ್
ಕೇಂದ್ರ ಸರ್ಕಾರದ ಸ್ವಾಮ್ಯದ ಕಚೇರಿಗಳಲ್ಲಿ ಹಿಂದಿ ದಿವಸ್ ಆಚರಣೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.ಹಣೆಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಹಿಂದಿ ಅಧಿಕೃತ ರಾಷ್ಟ್ರೀಯ ಭಾಷೆಯಲ್ಲ. ಸಂವಿಧಾನದ 8ನೇ ಪರಿಚ್ಛೇದದಲ್ಲಿರುವ ಕನ್ನಡ ಸೇರಿದಂತೆ 22 ಭಾಷೆಗಳಲ್ಲಿ ಅದು ಕೂಡ ಒಂದು. ಆದರೆ, ದೇಶದ ಎಲ್ಲೆಡೆ ಹಿಂದಿ ಭಾಷೆ ಹೇರಲು ಕೇಂದ್ರ ಸರ್ಕಾರದ ಜನರ ತೆರಿಗೆ ಹಣದಲ್ಲಿ ಹಿಂದಿ ಭಾಷೆಗೆ ಉತ್ತೇಜನ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಸರಿಯಲ್ಲ ಎಂದು ವೇದಿಕೆಯ ಜಿಲ್ಲಾಧ್ಯಕ್ಷ ಸೋಮನಾಥ ಮುಧೋಳ ಹೇಳಿದರು.ಕೇಂದ್ರ ಸರ್ಕಾರ ಕೂಡಲೇ ಸಂವಿಧಾನಕ್ಕೆ ತಿದ್ದುಪಡಿ ತಂದು ಸಂವಿಧಾನದ 8ನೇ ಪರಿಚ್ಛೇದದಲ್ಲಿ ಉಲ್ಲೇಖಿಸಿರುವ ಎಲ್ಲ 22 ಭಾಷೆಗಳನ್ನೂ ಅಧಿಕೃತ ಆಡಳಿತ ಭಾಷೆಗಳನ್ನಾಗಿ ಮಾಡಬೇಕು. ಹಿಂದಿಗೆ ವಿಶೇಷ ಮನ್ನಣೆ ನೀಡುವ 343 ರಿಂದ 351ನೇ ವಿಧಿಗಳನ್ನು ರದ್ದುಪಡಿಸಿ ಎಲ್ಲ ಭಾಷೆಗಳು ಸಮಾನ ಎಂದು ಸಾರಬೇಕು ಎಂದು ಆಗ್ರಹಿಸಿದರು.
ಕರ್ನಾಟಕದಲ್ಲಿನ ಎಲ್ಲ ಕೇಂದ್ರ ಸರ್ಕಾರದ ಇಲಾಖೆಗಳು, ಉದ್ಯಮಗಳಲ್ಲಿ ಕನ್ನಡವೇ ಆಡಳಿತ ಭಾಷೆಯಾಗಬೇಕು. ಎಲ್ಲ ಬಗೆಯ ಪತ್ರ ವ್ಯವಹಾರ ಕನ್ನಡದಲ್ಲೇ ನಡೆಸಬೇಕು. ಸರ್ಕಾರದಲ್ಲಿ ತ್ರಿ ಭಾಷಾ ಸೂತ್ರದ ಬದಲು ದ್ವಿಭಾಷಾ ಸೂತ್ರ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಗೌಡ, ಮುಖಂಡರಾದ ಸೋಮಶೇಖರ ಸಜ್ಜನ್, ಉದಯಕುಮಾರ ಅಷ್ಟೂರೆ, ಶಿವರುದ್ರ ತೀರ್ಥ, ಮಲ್ಲಿಕಾರ್ಜುನ ಸಿಕೇನಪುರೆ, ಗೋಪಾಲ ಕುಲಕರ್ಣಿ, ವೀರಶೆಟ್ಟಿ ಗೌಸಪುರೆ, ವಿರೇಶ ರೆಡ್ಡಿ, ಮಹೇಶ ಕಾಪಸೆ ಹಾಗೂ ತುಕಾರಾಮ ಜೈರಾಮ್ ಮತ್ತಿತರರು ಭಾಗವಹಿಸಿದ್ದರು.