ಜನೌಷಧಿ ಕೇಂದ್ರಗಳನ್ನು ಮುಚ್ಚಿದರೆ ಉಗ್ರ ಹೋರಾಟ

| Published : May 31 2025, 12:28 AM IST

ಸಾರಾಂಶ

ಕೇಂದ್ರ ಸರ್ಕಾರದ ಜನಪರ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಭಾರತೀಯ ಜನೌಷಧಿ ಕೇಂದ್ರಗಳನ್ನು ಬಂದ್ ಮಾಡಿರುವ ರಾಜ್ಯ ಸರ್ಕಾರದ ವಿರುದ್ದ ಶುಕ್ರವಾರ ತಾಲೂಕು ಭಾರತೀಯ ಜನತಾ ಪಾರ್ಟಿ ವತಿಯಿಂದ ನಗರದ ಸಾರ್ವಜನಿಕ ಆಸ್ಪತ್ರೆಯ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ತಿಪಟೂರು

ಕೇಂದ್ರ ಸರ್ಕಾರದ ಜನಪರ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಭಾರತೀಯ ಜನೌಷಧಿ ಕೇಂದ್ರಗಳನ್ನು ಬಂದ್ ಮಾಡಿರುವ ರಾಜ್ಯ ಸರ್ಕಾರದ ವಿರುದ್ದ ಶುಕ್ರವಾರ ತಾಲೂಕು ಭಾರತೀಯ ಜನತಾ ಪಾರ್ಟಿ ವತಿಯಿಂದ ನಗರದ ಸಾರ್ವಜನಿಕ ಆಸ್ಪತ್ರೆಯ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾಜಿ ಸಚಿವ ಬಿ.ಸಿ. ನಾಗೇಶ್ ಮಾತನಾಡಿ, ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಮಳಿಗೆಗಳನ್ನು ಸಿದ್ದರಾಮಯ್ಯ ಸರ್ಕಾರ ಮುಚ್ಚಿಸುವ ಆದೇಶ ನೀಡಿರುವುದು ಖಂಡನೀಯ. ಪ್ರಧಾನಿ ನರೇಂದ್ರ ಮೋದಿಯವರು ಜನಸಾಮಾನ್ಯರು, ಕಡು ಬಡವರಿಗಾಗಿಯೇ ಕಡಿಮೆ ದರದಲ್ಲಿ ಔಷಧಿಗಳು ಸಿಗಬೇಕೆಂಬ ಉದ್ದೇಶದಿಂದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನೌಷಧಿ ಕೇಂದ್ರಗಳನ್ನು ತೆರೆದಿದ್ದರು. ಆದರೆ ರಾಜ್ಯ ಸರ್ಕಾರ ಏಕಾಏಕಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಬಂದ್ ಮಾಡುವ ಮೂಲಕ ಜನರ ಆರೋಗ್ಯದ ಮೇಲೂ ರಾಜಕೀಯ ಮಾಡುತ್ತಿದೆ. ಸಕ್ಕರೆ ಕಾಯಿಲೆ, ಬಿಪಿ, ಕ್ಯಾನ್ಸರ್ ನಂತಹ ರೋಗಗಳಿಗೆ ಇಲ್ಲಿ ಕಡಿಮೆ ಹಣದಲ್ಲಿ ಔಷಧಿಗಳು ದೊರೆಯುತ್ತಿದ್ದವು. ಈ ಕೇಂದ್ರಗಳನ್ನು ಮುಚ್ಚಿದರೆ ಬಡವರು ಎಲ್ಲಿ ಹೋಗಬೇಕು. ಇದೇ ರೀತಿ ಮುಂದುವರೆದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ತಿಳಿಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಂಗರಾಜು ಮಾತನಾಡಿ, ಪ್ರಧಾನಿ ಮೋದಿಯವರ ಅಭಿವೃದ್ದಿ ಕಾರ್ಯಗಳನ್ನು ಸಹಿಸದ ರಾಜ್ಯ ಸರ್ಕಾರ ಇಂತಹ ನೀಚ ಕೆಲಸಕ್ಕೆ ಮುಂದಾಗಿದೆ. ರಾಜಕೀಯ ದುರುದ್ದೇಶದಿಂದ ಸರ್ಕಾರದ ಈ ತೀರ್ಮಾನ ರಾಜ್ಯದ ಬಡ ರೋಗಿಗಳಿಗೆ, ಆರ್ಥಿಕವಾಗಿ ಹಿಂದುಳಿದವರಿಗೆ ಮಾರಕವಾಗಲಿದೆ. ಈಗಾಗಲೇ ವಿವಿಧ ಕಡೆಗಳಲ್ಲಿ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಮೂಲಕ ಬಡವರಿಗೆ ಅನ್ಯಾಯ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಎಲ್ಲಾ ವಸ್ತುಗಳ ಬೆಲೆ ಹೆಚ್ಚಳ ಮಾಡಿ ಈಗ ಏಕಾಏಕಿ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಮೂಲಕ ಬಡವರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿರುವುದು ನಾಚಿಕೆ ಗೇಡಿನ ಸಂಗತಿ ಎಂದರು. ಪ್ರತಿಭಟನೆಯಲ್ಲಿ ಮಾಜಿ ಪುರಸಭಾಧ್ಯಕ್ಷ ಟಿ.ಜಿ. ಲಿಂಗರಾಜು, ಮುಖಂಡರಾದ ಸಿಂಗ್ರಿದತ್ತಪ್ರಸಾದ್, ಆಯರಹಳ್ಳಿ ಶಂಕರಪ್ಪ, ಬಿಸಲೇಹಳ್ಳಿ ಜಗದೀಶ್, ನಗರಸಭೆ ಸದಸ್ಯರಾದ ಪದ್ಮಾ, ಸಂಧ್ಯಾಕಿರಣ್, ಜಯಲಕ್ಷ್ಮಿ, ಸಂಗಮೇಶ್, ಮೋಹನ್‌ರಾಜ್, ಮಾಜಿ ಸದಸ್ಯರಾದ ಪ್ರಸನ್ನಕುಮಾರ್, ತರಕಾರಿ ಗಂಗಾಧರ್, ಲೋಕೇಶ್ ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.