ವಿರಾಜಪೇಟೆ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜೀವಶಾಸ್ತ್ರ ಉಪನ್ಯಾಸಕಿಯಾಗಿ ಹಾಗೂ ಕಾಲೇಜಿನ ಪ್ರಾಂಶುಪಾಲರಾಗಿ ಸುದೀರ್ಘ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ತಾತಂಡ ಜ್ಯೋತಿ ಪ್ರಕಾಶ್ ಅವರನ್ನು ಕಾಲೇಜಿನ ವತಿಯಿಂದ ಬೀಳ್ಕೊಟ್ಟು, ಸನ್ಮಾನಿಸಲಾಯಿತು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಚಿಲ್ಲವಂಡ ಕಾವೇರಪ್ಪ ಮಾತನಾಡಿ, ಪ್ರಾಂಶುಪಾಲರ ಶಿಸ್ತು ಹಾಗೂ ಕರ್ತವ್ಯ ನಿಷ್ಠೆ ಸಂಸ್ಥೆಯ ಬೆಳವಣಿಗೆಗೆ ಭದ್ರ ಬುನಾದಿಯನ್ನು ಹಾಕಿದೆ. ಅವರ ಮಾರ್ಗದರ್ಶನದಲ್ಲಿ ಸಾವಿರಾರು ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ಕಂಡುಕೊಂಡಿದ್ದಾರೆ ಎಂದು ಶ್ಲಾಘಿಸಿದರು. ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಜ್ಯೋತಿ ಪ್ರಕಾಶ್, ತಮ್ಮ ಸುದೀರ್ಘ ವೃತ್ತಿ ಜೀವನದ ಅನುಭವಗಳನ್ನು ಹಂಚಿಕೊಳ್ಳುತ್ತಾ ಸಹೋದ್ಯೋಗಿಗಳ ಸಹಕಾರ ಹಾಗೂ ವಿದ್ಯಾರ್ಥಿಗಳ ಪ್ರೀತಿಯನ್ನು ಸ್ಮರಿಸಿದರು.ಉಪನ್ಯಾಸಕ ರೈಮಂಡ್ ಸ್ವಾಗತಿಸಿ, ಉಪನ್ಯಾಸಕಿ ಚೈತ್ರ ನಿರೂಪಿಸಿ , ಉಪನ್ಯಾಸಕಿ ಗಾಯತ್ರಿ ವಂದಿಸಿದರು. ಜ್ಯೋತಿ ಅವರ ತಾಯಿ ನಾಮೇರ ಜಾನಕಿ ಕುಟ್ಟಪ್ಪ, ಕುಟುಂಭಿಕರು, ಸಹ ಉಪನ್ಯಾಸಕರು, ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.