ವಿಶೇಷ ಕಲೆಗಳನ್ನು ಸಮಾಜಕ್ಕೆ ನೀಡಿದ ವಿಶ್ವಕರ್ಮ ಸಮುದಾಯ

| Published : Sep 18 2024, 01:48 AM IST

ಸಾರಾಂಶ

ವಿಶ್ವಕರ್ಮ ಸಮಾಜದವರು ಕಠಿಣ ಪರಿಶ್ರಮ ಮತ್ತು ಶ್ರದ್ಧೆಯಿಂದ ಕೆಲಸ ನಿರ್ವಹಿಸಿ ವಿಶೇಷ ಕಲೆಗಳನ್ನು ಸಮಾಜಕ್ಕೆ ನೀಡಿದ್ದಾರೆ. ಪ್ರತಿಯೊಂದು ಸಮುದಾಯದ ವೃತ್ತಿಗೆ ಬೇಕಾದ ಪರಿಕರಗಳ ನಿರ್ಮಾಣದಲ್ಲಿ ವಿಶ್ವಕರ್ಮ ಸಮುದಾಯದ ಕೊಡುಗೆ ಮಹತ್ವದ್ದಾಗಿದೆ ಎಂದು ಚಿಕ್ಕೋಡಿ ಲೋಕಸಭೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ವಿಶ್ವಕರ್ಮ ಸಮಾಜದವರು ಕಠಿಣ ಪರಿಶ್ರಮ ಮತ್ತು ಶ್ರದ್ಧೆಯಿಂದ ಕೆಲಸ ನಿರ್ವಹಿಸಿ ವಿಶೇಷ ಕಲೆಗಳನ್ನು ಸಮಾಜಕ್ಕೆ ನೀಡಿದ್ದಾರೆ. ಪ್ರತಿಯೊಂದು ಸಮುದಾಯದ ವೃತ್ತಿಗೆ ಬೇಕಾದ ಪರಿಕರಗಳ ನಿರ್ಮಾಣದಲ್ಲಿ ವಿಶ್ವಕರ್ಮ ಸಮುದಾಯದ ಕೊಡುಗೆ ಮಹತ್ವದ್ದಾಗಿದೆ ಎಂದು ಚಿಕ್ಕೋಡಿ ಲೋಕಸಭೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಮಂಗಳವಾರ ನಗರದ ಕುಮಾರ ಗಂಧರ್ವ ಕಲಾರಂಗ ಮಂದಿರದಲ್ಲಿ ಜರುಗಿದ ವಿಶ್ವಕರ್ಮ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಂಪ್ರದಾಯಿಕ ಕಸುಬುಗಳಲ್ಲಿ ತೊಡಗಿರುವ ಜನರಿಗೆ ಬೆಂಬಲ ಕೊಡಬೇಕು. ಕುಶಲಕರ್ಮಿಗಳು ಆರ್ಥಿಕವಾಗಿ ಬೆಂಬಲ ನೀಡುವುದರ ಮೂಲಕ ಪ್ರಾಚೀನ ಸಂಪ್ರದಾಯ, ಸಂಸ್ಕೃತಿ ಮತ್ತು ವೈವಿದ್ಯಮಯ ಪರಂಪರೆಯನ್ನು ಜೀವಂತವಾಗಿಡಲು ನೆರವಾಗಲಿದೆ. ವಿಶ್ವಕರ್ಮ ಸಮಾಜದವರು ಏಕಾಗ್ರತೆಯಿಂದ ಅನೇಕ ವಿಶೇಷ ಕಲೆಯನ್ನು ಕಲೆತು ಉತ್ತಮ ಪ್ರತಿಭೆಯನ್ನುಹೊಂದುವುದರ ಮೂಲಕ ಸುಂದರವಾದ ರೂಪ ನೀಡುತ್ತಾರೆ ಎಂದು ತಿಳಿಸಿದರು.ಕಾರ್ಯಕ್ರಮ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಗಜಾನನ ಸಾಬಣ್ಣವರ ಮಾತನಾಡಿ, ವಿಶ್ವಕರ್ಮ ಸಮಾಜ ಬಾಂಧವರು ಸ್ಥಳೀಯ ಉತ್ಪನ್ನಗಳು, ಕಲೆ ಮತ್ತು ಕರಕುಶಲ ವಸ್ತುಗಳ ಮೂಲಕ ಆರ್ಥಿಕವಾಗಿ ಮುಂದೆ ಬರಲು ಹೆಚ್ಚಿನ ಆದ್ಯತೆ ನೀಡಬೇಕು. ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಪ್ರತಿಯೊಬ್ಬರು ಸಮಾಜಕ್ಕೆ ತಮ್ಮದೆ ಆದ ಕೊಡುಗೆಯನ್ನು ನೀಡಬೇಕು. ಸರ್ಕಾರದಿಂದ ಬರುವ ಸೌಲಭ್ಯವನ್ನು ಪಡೆದುಕೊಳ್ಳಬೇಕು. ಪಂಚ ಕಸುಬುಗಳನ್ನು ಅಧ್ಯಯನ ಮಾಡಿ ಆರ್ಥಿಕವಾಗಿ ಪ್ರತಿಯೊಂದು ಕ್ಷೇತ್ರದಲ್ಲಿ ಮುಂದುವರೆಯುವುದರ ಜೊತೆಗೆ ಎಲ್ಲವನ್ನು ನಾವು ಬಲ್ಲವರು ಎಂದು ಕೊಂಡು ನಾವು ಕಲಿಕೆಯಿಂದ ದೂರವಾಗುತ್ತ ಬರುತ್ತಿದ್ದೇವೆ. ಕಲಿಕೆಗೆ ಮಹತ್ವದ ಸ್ಥಾನ ನೀಡಬೇಕು ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಬುಡಾ ಅಧ್ಯಕ್ಷ ಲಕ್ಷ್ಮಣರಾವ್‌ ಚಿಂಗಳೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಜಿ.ಪಂ ವ್ಯವಸ್ಥಾಪಕ ಶ್ರೀಕಾಂತ ಸಪಡ್ಲ, ವಿಶ್ವಕರ್ಮ ಸಮಾಜದ ಬಸವರಾಜ ಸುತಾರ, ಲೀಲಾವತಿ ಪತ್ತಾರ ಸೇರಿದಂತೆ ಸಮಾಜದ ಗಣ್ಯರುಗಳು, ಮುಖಂಡರುಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ಶ್ರೀ ವಿಶ್ವಕರ್ಮ ಜಯಂತ್ಯುತ್ಸವ ಮೆರವಣಿಗೆ

ಶ್ರೀ ವಿಶ್ವಕರ್ಮ ಜಯಂತ್ಯುತ್ಸವದ ಅಂಗವಾಗಿ ನಗರದ ಅಶೋಕ ವೃತ್ತದಿಂದ ಕುಮಾರ ಗಂಧರ್ವ ರಂಗಮಂದಿರದವರೆಗೆ ಮೆರವಣಿಗೆ ಆಯೋಜಿಸಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಅಶೋಕ ವೃತ್ತದಲ್ಲಿ ಶ್ರೀ ವಿಶ್ವಕರ್ಮ ಅವರ ಭಾವಚಿತ್ರಕ್ಕೆ ಪುಷ್ಪನ ನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ಲಕ್ಷ್ಮಣರಾವ್‌ ಚಿಂಗಳೆ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯತ ಸಿಇಒ ರಾಹುಲ ಶಿಂಧೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಸಮಾಜದ ಗಣ್ಯರು, ಮುಖಂಡರುಗಳು ಉಪಸ್ಥಿತರಿದ್ದರು. ವಿವಿಧ ಜಾನಪದ ಕಲಾತಂಡಗಳು ಮೆರವಣಿಗೆಗೆ ಸಾಥ ನೀಡಿದವು.ಪೂರ್ವಜರ ವಿದ್ಯೆಯನ್ನು ಇಂದಿನ ಯುವ ಪೀಳಿಗೆಗೆ ಕಲಿಸಿ ಈ ಕಲೆಯನ್ನು ಉತ್ತುಂಗಗಕ್ಕೆ ಬೆಳೆಸಬೇಕು. ವಿಶ್ವಕರ್ಮ ಸಮುದಾಯದವರು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಸರ್ಕಾರ ನೀಡಿದಂತಹ ವಿವಿಧ ಸೌಲಭ್ಯಗಳನ್ನು ಬಳಿಸಿಕೊಂಡು ಆರ್ಥಿಕ, ಶೈಕ್ಷಣಿಕವಾಗಿ ಮುಂದೆ ಬರಬೇಕು.

- ಪ್ರಿಯಾಂಕಾ ಜಾರಕಿಹೊಳಿ, ಸಂಸದೆ.