ಭಾರತೀಯ ಸಂಸ್ಕೃತಿ, ಪುರಾಣ, ಧಾರ್ಮಿಕ ಪರಂಪರೆ ಹಾಗೂ ಶಿಲ್ಪಕಲೆಯ ಇತಿಹಾಸ ಗಮನಿಸಿದಾಗ ವಿಶ್ವಕರ್ಮ ಹೆಸರಿಗೆ ಅತ್ಯಂತ ಮಹತ್ವ ಕಾಣಿಸುತ್ತದೆ. ತಂತ್ರಜ್ಞಾನದ ಪರಿವೇ ಇಲ್ಲದ ಸಾವಿರಾರು ವರ್ಷಗಳ ಹಿಂದೆ ವಿಶ್ವಕರ್ಮರು ತಮ್ಮ ಕೈಚಳಕದಿಂದಲೇ ವಿಶ್ವವನ್ನೇ ನಿರ್ಮಾಣ ಮಾಡಿದ್ದಾರೆ ಎಂದು ಶಾಸಕ ಯಶ್ಪಾಲ್ ಎ. ಸುವರ್ಣ ಹೇಳಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಭಾರತೀಯ ಸಂಸ್ಕೃತಿ, ಪುರಾಣ, ಧಾರ್ಮಿಕ ಪರಂಪರೆ ಹಾಗೂ ಶಿಲ್ಪಕಲೆಯ ಇತಿಹಾಸ ಗಮನಿಸಿದಾಗ ವಿಶ್ವಕರ್ಮ ಹೆಸರಿಗೆ ಅತ್ಯಂತ ಮಹತ್ವ ಕಾಣಿಸುತ್ತದೆ. ತಂತ್ರಜ್ಞಾನದ ಪರಿವೇ ಇಲ್ಲದ ಸಾವಿರಾರು ವರ್ಷಗಳ ಹಿಂದೆ ವಿಶ್ವಕರ್ಮರು ತಮ್ಮ ಕೈಚಳಕದಿಂದಲೇ ವಿಶ್ವವನ್ನೇ ನಿರ್ಮಾಣ ಮಾಡಿದ್ದಾರೆ ಎಂದು ಶಾಸಕ ಯಶ್ಪಾಲ್ ಎ. ಸುವರ್ಣ ಹೇಳಿದರು.ಅವರು ನಗರದ ಕುಂಜಿಬೆಟ್ಟು ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತದ ಆಶ್ರಯದಲ್ಲಿ ನಡೆದ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಕೇಂದ್ರ ಸರ್ಕಾರವು ವಿಶ್ವಕರ್ಮ ಸಮುದಾಯದ ಅಭಿವೃದ್ಧಿಗಾಗಿ ಪಿ.ಎಂ ವಿಶ್ವಕರ್ಮ ಯೋಜನೆಯನ್ನು ಅನುಷ್ಠಾನಗೊಳಿಸಿ, ಆ ಮೂಲಕ ಸಮುದಾಯದವರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ. ದೇಶದ ಪಾರಂಪರಿಕ ಕುಲ ಕಸುಬುಗಳಿಗೆ ಬಲ ತುಂಬುವಲ್ಲಿ ಈ ಯೋಜನೆ ಸಹಕಾರಿಯಾಗಿದ್ದು, ಯೋಜನೆಗಳ ಲಾಭ ಪಡೆದುಕೊಳ್ಳುವುದರ ಮೂಲಕ ಸಮುದಾಯದ ಬಹಳಷ್ಟು ಜನರು ಬದುಕು ಕಟ್ಟಿಕೊಂಡಿದ್ದಾರೆ ಎಂದ ಅವರು, ವಿಶ್ವಕರ್ಮ ಜಯಂತಿಯನ್ನು ಆಚರಿಸುವ ಮೂಲಕ ವಿಶ್ವಕರ್ಮರು ಸಮಾಜಕ್ಕೆ ನೀಡಿರುವ ಕೊಡುಗೆಯನ್ನು ಸ್ಮರಿಸಲಾಗುತ್ತಿದೆ ಎಂದರು.ಜಿಪಂ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೋಳ್ಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಮಾತನಾಡಿದರು, ಪಡುಕುತ್ಯಾರು ಆನೆಗುಂದಿ ಮಠದ ಲೋಲಾಕ್ಷ ಶರ್ಮ ವಿಶ್ವಕರ್ಮರ ಕುರಿತು ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ವೃತ್ತಿ ಸಾಧನೆಗೈದ ವಿಶ್ವಕರ್ಮ ಸಮಾಜದ ಐದು ಮಂದಿ ಹಿರಿಯರನ್ನು ಸನ್ಮಾನಿಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಇಲಾಖೆಯ ಸಿಬ್ಬಂದಿ ವರ್ಷಾ ಬಿ. ಕೋಟ್ಯಾನ್ ನಿರೂಪಿಸಿ, ವಂದಿಸಿದರು.