ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಜಿಲ್ಲೆಯ ಬಾಲಕ ಹಾಗೂ ಬಾಲಕಿಯರ ವಸತಿ ನಿಲಯ ಹಾಗೂ ವಸತಿ ಶಾಲೆಗಳ ವಿದ್ಯಾರ್ಥಿಗಳ ಭವಿಷ್ಯ ಹಾಗೂ ಜೀವನ ಸುಂದರಗೊಳಿಸಲು ಸರ್ಕಾರ ನೀಡಿರುವ ಸೌಲಭ್ಯಗಳು ಸಮರ್ಪಕವಾಗಿ ದೊರಕುತ್ತಿರುವ ಕುರಿತು ಅಧಿಕಾರಿಗಳು ಸ್ವಯಂಪ್ರೇರಿತವಾಗಿ ವಾರಕ್ಕೊಂದು ಸಲ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಅಧಿಕಾರಿಗಳಿಗೆ ಸಲಹೆ ನೀಡಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಜಿಲ್ಲೆಯ ಬಾಲಕ ಹಾಗೂ ಬಾಲಕಿಯರ ವಸತಿ ನಿಲಯ ಹಾಗೂ ವಸತಿ ಶಾಲೆಗಳ ವಿದ್ಯಾರ್ಥಿಗಳ ಭವಿಷ್ಯ ಹಾಗೂ ಜೀವನ ಸುಂದರಗೊಳಿಸಲು ಸರ್ಕಾರ ನೀಡಿರುವ ಸೌಲಭ್ಯಗಳು ಸಮರ್ಪಕವಾಗಿ ದೊರಕುತ್ತಿರುವ ಕುರಿತು ಅಧಿಕಾರಿಗಳು ಸ್ವಯಂಪ್ರೇರಿತವಾಗಿ ವಾರಕ್ಕೊಂದು ಸಲ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಅಧಿಕಾರಿಗಳಿಗೆ ಸಲಹೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಇದು ಸ್ವಯಂ ಪ್ರೇರಿತ ಕಾರ್ಯವಾಗಿದೆ. ಸಾಮಾಜಿಕ ಜವಾಬ್ದಾರಿಯೊಂದಿಗೆ ಅಧಿಕಾರಿಗಳು ಮೇಲಿಂದ ಮೇಲೆ ಹಾಸ್ಟೇಲ್ಗಳಿಗೆ ಭೇಟಿ ನೀಡಬೇಕು. ಅಲ್ಲಿ ಕಲ್ಪಿಸಲಾಗಿರುವ ಮೂಲಭೂತ ಸೌಲಭ್ಯ, ಮಕ್ಕಳ ಜ್ಞಾನಾರ್ಜನೆ, ಕಲಿಕಾ ಸಂದರ್ಭದಲ್ಲಿ ಅನುಭವಿಸುತ್ತಿರುವ ಸಮಸ್ಯೆಗಳು ವಿಷಯಗಳ ಮನನ ಮುಂತಾದ ವಿಷಯಗಳ ಪರಿಹಾರ ಒದಗಿಸುವ ನಿಟ್ಟಿನಲ್ಲಿ ವಾರದಲ್ಲಿ ಒಂದು ಬಾರಿ ಒಂದು ವಸತಿ ನಿಲಯ ಹಾಗೂ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲಿಸಬೇಕು. ಅವರ ಕಷ್ಟ ಕಾರ್ಪಣ್ಯಗಳನ್ನು ತಿಳಿದುಕೊಂಡು ಸಾಧ್ಯವಾದಷ್ಟು ಪರಿಹರಿಸುವ ನಿಟ್ಟಿನಲ್ಲಿ ಸ್ವಯಂ ಪ್ರೇರಿತರಾಗಿ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಅಧಿಕಾರಿಗಳು ತಮ್ಮ ದೈನಂದಿನ ವೃತ್ತಿ ಬದುಕಿನಲ್ಲಿ ಅನೇಕ ವಿಷಯಗಳನ್ನು ತಿಳಿದುಕೊಳ್ಳುತ್ತೀರಿ. ಇಲ್ಲಿನ ವಿದ್ಯಾರ್ಥಿಗಳಿಗೆ ತಮ್ಮ ಆಸಕ್ತಿಯ ವಿಷಯಗಳ ಬಗ್ಗೆಯೂ ತಿಳಿಸಿ, ಪರಿಸರ ಅಧ್ಯಯನ, ಭೂಗೋಳ, ಸಂವಿಧಾನ, ಗಣಿತ, ವಿಜ್ಞಾನ ವಿಷಯಗಳ ಬಗ್ಗೆ ಮಕ್ಕಳಿಗೆ ಪಾಠ ಮಾಡುವುದರ ಮೂಲಕ ಮಕ್ಕಳಿಗೆ ಜ್ಞಾನ ಉಣಬಡಿಸಬೇಕು ಎಂದರು.ಈ ಸಭೆಯಲ್ಲಿ ಅಪರ ಡಿಸಿ ಸೋಮಲಿಂಗ ಗೆಣ್ಣೂರ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ
ರಾಮಣ್ಣಗೌಡ ಹಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸೇರಿ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.