ಕನ್ನಡಪ್ರಭ ವಾರ್ತೆ ಟಿ. ನರಸೀಪುರ
ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ತಾವು ಯಾವುದೇ ನಿರ್ದಿಷ್ಟ ಖಾತೆಗಾಗಿ ಬೇಡಿಕೆ ಇಟ್ಟಿಲ್ಲ. ಕಾಂಗ್ರೆಸ್ ಹೈಕಮಾಂಡ್ ಯಾವುದೇ ಖಾತೆಯ ಜವಾಬ್ದಾರಿ ನೀಡಿದರೂ ಅದನ್ನು ಪ್ರಾಮಾಣಿಕವಾಗಿ ಹಾಗೂ ಸಮರ್ಪಕವಾಗಿ ನಿರ್ವಹಿಸುವುದಾಗಿ ಸಚಿವ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು.ಸಚಿವರಾದ ಬಳಿಕ ಟಿ. ನರಸೀಪುರ ತಾಲೂಕಿನ ವಾಟಾಳು ಗ್ರಾಮದಲ್ಲಿರುವ ಸೂರ್ಯ ಸಿಂಹಾಸನ ಮಠಕ್ಕೆ ಭಾನುವಾರ ಭೇಟಿ ನೀಡಿ ಶ್ರೀ ಸಿದ್ದಲಿಂಗಶಿವಾಚಾರ್ಯ ಸ್ವಾಮೀಜಿಗಳ ಆಶೀರ್ವಾದ ಪಡೆದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಇದು ತಮ್ಮ ಎರಡನೇ ಸಚಿವ ಸ್ಥಾನವಾಗಿದೆ. ಈ ಹಿಂದೆ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸುವ ಅವಕಾಶ ದೊರೆತಿತ್ತು. ಆಗ ನೀಡಿದ್ದ ಖಾತೆಯ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದೇನೆ. ಇದೀಗ ಡಿ.ಕೆ. ಶಿವಕುಮಾರ್ ಅವರು ಮತ್ತೊಮ್ಮೆ ಸಚಿವ ಸ್ಥಾನ ನೀಡುವ ಮೂಲಕ ಜನಸೇವೆ ಮಾಡಲು ಅವಕಾಶ ಕಲ್ಪಿಸಿದ್ದಾರೆ ಎಂದು ಹೇಳಿದರು.ಸಚಿವ ಸಂಪುಟದಲ್ಲಿ ತಮಗೆ ಯಾವ ಖಾತೆ ನೀಡಬೇಕು ಎಂಬುದರ ಕುರಿತು ಹೈಕಮಾಂಡ್ ಮುಂದೆ ಯಾವುದೇ ಬೇಡಿಕೆಯನ್ನು ಇಟ್ಟಿಲ್ಲ. ಪಕ್ಷದ ಹೈಕಮಾಂಡ್ ಯಾವುದೇ ಖಾತೆ ನೀಡಿದರೂ ಅದನ್ನು ಜವಾಬ್ದಾರಿಯುತವಾಗಿ ನಿರ್ವಹಿಸುವೆ. ವಹಿಸಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವುದು ತಮ್ಮ ಕರ್ತವ್ಯವಾಗಿದ್ದು, ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಅವರು ತಿಳಿಸಿದರು.
ಉತ್ತಮ ಖಾತೆ ಸಿಗಲಿ
ವಾಟಾಳು ಸೂರ್ಯ ಸಿಂಹಾಸನ ಮಠದ ಪೀಠಾಧ್ಯಕ್ಷ ಶ್ರೀ ಸಿದ್ದಲಿಂಗಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿ, ಪುಟ್ಟರಂಗಶೆಟ್ಟರು ಮತ್ತಷ್ಟು ಉನ್ನತ ಸ್ಥಾನಕ್ಕೇರಬೇಕು. ಅವರಿಗೆ ಉತ್ತಮ ಖಾತೆ ದೊರೆತು ಜನಸೇವೆ ಮಾಡಲು ಹೆಚ್ಚಿನ ಅವಕಾಶ ಸಿಗಲಿ ಎಂದು ಹಾರೈಸಿದರು.
ಭಗೀರಥ ಉಪ್ಪಾರ ಮಹಾಸಭಾ ಅಧ್ಯಕ್ಷ ಕಾವೇರಿಪುರ ಮಹದೇವಶೆಟ್ಟಿ, ಎಪಿಎಂಸಿ ಮಾಜಿ ಅಧ್ಯಕ್ಷ ಆಲ್ದೂರು ರಾಜಶೇಖರ್, ನಗರಸಭೆ ಮಾಜಿ ಅಧ್ಯಕ್ಷ ರಾಜಪ್ಪ, ಕಾರ್ಮಿಕ ವಿಭಾಗದ ಸದಸ್ಯ ಉಮೇಶ್, ಕೆಡಿಪಿ ಸದಸ್ಯ ಶ್ರೀನಿವಾಸ್, ಮುಖಂಡರಾದ ಪ್ರಸನ್ನಕುಮಾರ್, ಬಸವರಾಜು, ಇರ್ಷಾದ್, ಶಂಭಪ್ಪ, ಶೇಖರ್ ಬುದ್ಧಿ, ರಾಜು, ಕುಮಾರ್, ವಿನೋದ್ ಇದ್ದರು.