ಕನ್ನಡಪ್ರಭ ವಾರ್ತೆ ಶಿರಾ ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ದೇಗುಲವಾದ ಸಂಸತ್ತು ಮತ್ತು ವಿಧಾನಸೌಧವನ್ನು ಭೇಟಿ ಮಾಡಿ ಅಲ್ಲಿ ನಡೆಯುವ ಅಧಿವೇಶನಗಳನ್ನು ವೀಕ್ಷಿಸಿ ಕಾರ್ಯ ಕಲಾಪಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.ಅವರು ಶಿರಾ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ಶೈಕ್ಷಣಿಕ ಪ್ರವಾಸದಲ್ಲಿ ಪ್ರಸಕ್ತ ಜರುಗುತ್ತಿರುವ (ಆಯವ್ಯಯ ಅಧಿವೇಶನ)ರಾಜ್ಯ ವಿಧಾನ ಮಂಡಲ ಅಧಿವೇಶನ ವೀಕ್ಷಣೆಗೆ ತೆರಳಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕಾಂಗ ಕಾರ್ಯಾಂಗ ಮತ್ತು ನ್ಯಾಯಾಂಗಗಳು ಭದ್ರ ಬುನಾದಿಯಾಗಿವೆ. ರಾಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ನಮ್ಮ ಪ್ರಜಾಪ್ರಭುತ್ವವನ್ನು ಹೆಚ್ಚು ಅಧ್ಯಯನ ಮಾಡಬೇಕು ಎಂದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ ಗೌಡ ಅವರು ಸಹ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದಂತಹ ಡಾ. ಹೊನ್ನಾಂಜನಯ್ಯ ಡಿ ಆರ್, ಕಾಲೇಜಿನ ಪತ್ರಾಂಕಿತ ವ್ಯವಸ್ಥಾಪಕರಾದ ಶ್ರೀನಿವಾಸ್ ಮೂರ್ತಿ ಕೆ ವಿ., ಸಹಾಯಕ ಪ್ರಾಧ್ಯಾಪಕರುಗಳಾದ ಪ್ರತಿಭಾ, ಕಾವ್ಯ, ಗಂಗಾಧರ್. ಹನುಮಂತರಾಜು. ವಿ ಎನ್, ಡಾ. ಎಮ್ ಆರ್ ರಂಗಸ್ವಾಮಿ ಸೇರಿದಂತೆ ಹಲವರು ಹಾಜರಿದ್ದರು. ಕಾಲೇಜಿನ ವತಿಯಿಂದ ಒಟ್ಟು ೩೧ ವಿದ್ಯಾರ್ಥಿಗಳು ರಾಜ್ಯ ವಿಧಾನ ಮಂಡಲ ವೀಕ್ಷಣೆಯಲ್ಲಿ ಭಾಗವಹಿಸಿದ್ದರು.