ಪುತ್ತೂರು: ಕಾನೂನು ಕ್ಷೇತ್ರದಲ್ಲಿ ಪ್ರಾಯೋಗಿಕ ಚಾಕಚಕ್ಯತೆಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಆರಂಭಗೊಂಡ ರಾಷ್ಟ್ರ ಮಟ್ಟದ ೩ನೇ ಅಣಕು ನ್ಯಾಯಾಲಯ ಸ್ಪರ್ಧೆ ವಿವೇಕಾನಂದ ಕಾನೂನು ಕಾಲೇಜಿನಲ್ಲಿ ಮೇ 8, 9 ಮತ್ತು 10ರಂದು ನಡೆಯಲಿದೆ ಎಂದು ಕಾನೂನು ಕಾಲೇಜಿನ ಆಡಳಿತ ಸಮಿತಿ ಸಂಚಾಲಕ ವಿಜಯನಾರಾಯಣ ಕೆ.ಎಂ. ತಿಳಿಸಿದ್ದಾರೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಅಣಕು ನ್ಯಾಯಾಲಯ ಸ್ಫರ್ಧೆಯಲ್ಲಿ ರಾಷ್ಟ್ರದ ೨೦ ತಂಡಗಳು ಭಾಗವಹಿಸಲಿವೆ. ಪ್ರತಿಯೊಂದು ತಂಡದಲ್ಲಿ ಮೂರು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಸ್ಪರ್ಧೆ ಮೇ ೯ ಮತ್ತು ೧೦ರಂದು ವಿವಿಧ ಹಂತಗಳಲ್ಲಿ ನಡೆಯಲಿದೆ ಎಂದು ತಿಳಿಸಿದರು. ೯ರಂದು ಸಂಜೆ ೪ ಗಂಟೆಗೆ ಆಂಧ್ರಪ್ರದೇಶದ ರಾಜ್ಯಪಾಲ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಎಸ್. ಅಬ್ದುಲ್ ನಝೀರ್ ಕಾರ್ಯಕ್ರಮ ಉದ್ಘಾಟಿಸುವರು. ಸುಪ್ರಿಂ ಕೋಟ್‌ನ ನ್ಯಾಯಮೂರ್ತಿ ಎನ್. ಕೋಟೀಶ್ವರ್ ಸಿಂಗ್, ರಾಜ್ಯ ಕಾನೂನು ವಿವಿಯ ಕುಲಪತಿ ಪ್ರೊ. ಸಿ. ಬಸವರಾಜು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್ ವಹಿಸುವರು. ಸರ್ವೋಚ್ಛ ನ್ಯಾಯಾಲಯದ ಹಿರಿಯ ನ್ಯಾಯವಾದಿ ಶೇಖರ್ ಜಿ. ದೇವಸ್ಯ ವಿಶೇಷ ಆಹ್ವಾನಿತರಾಗಿ ಭಾಗಿಯಾಗಲಿದ್ದಾರೆ.

10ರಂದು ಸಮಾರೋಪ:

ಮೇ ೧೦ರಂದು ಸಂಜೆ ೩ ಗಂಟೆಗೆ ಆಂಧ್ರಪ್ರದೇಶ ಹೈಕೋರ್ಟಿನ ಹಿರಿಯ ನ್ಯಾಯವಾದಿ, ಅಖಿಲ ಭಾರತೀಯ ಅಧಿವಕ್ತ ಪರಿಷತ್ ಅಧ್ಯಕ್ಷ ಶ್ರೀನಿವಾಸ್ ಮೂರ್ತಿ ಕೊಂಡಾ ಅಧ್ಯಕ್ಷತೆಯಲ್ಲಿ ಸಮಾರೋಪ ನಡೆಯಲಿದೆ. ಸಮಾರೋಪ ಭಾಷಣವನ್ನು ಹೈಕೋರ್ಟಿನ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಮಾಡಲಿದ್ದಾರೆ. ಹೈಕೋರ್ಟಿನ ನ್ಯಾಯಮೀರ್ತಿ ವಿ. ಶ್ರೀಶಾನಂದ ಮತ್ತು ತ್ಯಾಗರಾಜ ಎನ್. ಇನಾವಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪುತ್ತೂರಿನ ವಕೀಲರ ಸಂಘದ ಅಧ್ಯಕ್ಷ ಜಿ. ಜಗನ್ನಾಥ್ ವಿಶೇಷ ಆಹ್ವಾನಿತರಾಗಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೂ ಮುಕ್ತ ಅವಕಾಶ ನೀಡಲಾಗಿದೆ. ಅಣಕು ನ್ಯಾಯಾಲಯ ಸ್ಪರ್ಧೆಯ ಪ್ರಥಮ ಸ್ಥಾನಿಗೆ ೩೦ ಸಾವಿರ ರು. ಹಾಗೂ ಟ್ರೋಫಿ, ದ್ವಿತೀಯ ಸ್ಥಾನಿಗೆ ೨೦ ಸಾವಿರ ರು. ಮತ್ತು ಟ್ರೋಫಿ ಹಾಗೂ ಪ್ರೋತ್ಸಾಹಕ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.ಕಾನೂನು ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಪಿ.ಕೆ. ರವೀಂದ್ರ, ಕಾಲೇಜಿನ ಪ್ರಾಂಶುಪಾಲರಾದ ಡಾ. ಅಕ್ಷತಾ ಕೆ.ಪಿ., ಸಹಾಯಕ ಪ್ರಾಧ್ಯಾಪಕಿ ಸುಭಾಷಿಣಿ ಜೆ., ಸ್ಪರ್ಧಾ ಸಮಿತಿ ಅಧ್ಯಕ್ಷ ಮನೋಹರ್ ಕೆ.ವಿ., ವಕೀಲ ಸುರೇಶ್ ರೈ, ಲಕ್ಷ್ಮೀಕಾಂತ್ ಅನಿಕೂಟೇಲು ಇದ್ದರು.