ಎಸ್.ಬಂಗಾರಪ್ಪರ ಋಣ ತೀರಿಸಲು ಗೀತಾಗೆ ಮತ ನೀಡಿ : ಸಚಿವ ಮಧು

| Published : May 04 2024, 12:32 AM IST

ಸಾರಾಂಶ

ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ರೋಡ್ ಶೋ ನಡೆಸಿ ಮತಯಾಚಿಸಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಅವರನ್ನು ಬಹುಮತದಿಂದ ಆಯ್ಕೆ ಮಾಡಬೇಕು ಎಂದು ಸಚಿವ ಎಸ್.ಮಧು ಬಂಗಾರಪ್ಪ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಸೊರಬ

ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಬಡವರ ಪರವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅವರ ಋಣವನ್ನು ತೀರಿಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಗೀತಾ ಅವರನ್ನು ಬಹುಮತದಿಂದ ಆಯ್ಕೆ ಮಾಡಬೇಕು ಎಂದು ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಕರೆ ನೀಡಿದರು.

ಗುರುವಾರ ರಾತ್ರಿ ಚಂದ್ರಗುತ್ತಿ ಗ್ರಾಮದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಪರವಾಗಿ ಹಮ್ಮಿಕೊಂಡ ರೋಡ್ ಶೋ ಕಾರ್ಯಕ್ರಮದಲ್ಲಿ ಮತಯಾಚಿಸಿ ಅವರು ಮಾತನಾಡಿದರು.

ಗೀತಾ ಅವರನ್ನು ಸೊರಬ ಕ್ಷೇತ್ರದ ಜನತೆ ಸುಮಾರು ೭೫ ಸಾವಿರ ಮತಗಳ ಅಂತರದಿಂದ ಸಂಸದರಾಗಿ ಆಯ್ಕೆ ಮಾಡಿದರೆ ಕೇಂದ್ರದಲ್ಲಿ ಈ ಬಗ್ಗೆ ಧ್ವನಿ ಎತ್ತಲಿದ್ದಾರೆ. ಜೊತೆಗೆ ತಮಗೂ ಸಹ ಶಕ್ತಿ ದೊರೆಯಲಿದೆ ಎಂದ ಅವರು, ಕಾಂಗ್ರೆಸ್ ಅಭ್ಯರ್ಥಿ ವಿರುದ್ಧವಾಗಿ ಹಗುರವಾಗಿ ಮಾತನಾಡುವವರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲಾರೆ. ಈಗಾಗಲೇ ಅವರು ಸೋತು ಸುಣ್ಣವಾಗಿದ್ದಾರೆ ಎಂದು ಲೇವಡಿ ಮಾಡಿದರು.

ಕ್ಷೇತ್ರದ ಅಭ್ಯರ್ಥಿ ಗೀತಾ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಚುನಾವಣೆ ಪೂರ್ವದಲ್ಲಿ ನುಡಿದಂತೆ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ತಂದೆ ಹಾಗೂ ಸಹೋದರನಂತೆ ನನಗೂ ಸಹ ಕ್ಷೇತ್ರದ ಜನತೆಯ ಸೇವೆ ಮಾಡಲು ಅವಕಾಶ ಕಲ್ಪಿಸುವಂತೆ ಮನವಿ ಮಾಡಿದರು.

ಚಲನ ಚಿತ್ರನಟ ದುನಿಯಾ ವಿಜಯ್ ಮಾತನಾಡಿ, ಧರ್ಮದ ಆಧಾರದ ಮೇಲೆ ರಾಜಕೀಯ ಸಲ್ಲದು. ದೇಶದಲ್ಲಿ ಎಲ್ಲಾ ಧರ್ಮಿಯರು ಸಹೋದರಂತೆ ಸಹಬಾಳ್ವೆಯಿಂದ ಬದುಕು ಕಟ್ಟಿಕೊಂಡಿದ್ದಾರೆ. ಆದರೆ, ಕೆಲ ರಾಜಕೀಯ ಪಕ್ಷಗಳು ಭಾವನಾತ್ಮಕವಾಗಿ ಧರ್ಮ-ಧರ್ಮಗಳ ಬಿರುಕು ಮೂಡಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದರು.

ಕಾಂಗ್ರೆಸ್ ಮುಖಂಡರಾದ ಎಚ್. ಗಣಪತಿ ಹುಲ್ತಿಕೊಪ್ಪ, ತಬಲಿ ಬಂಗಾರಪ್ಪ, ಆರ್.ಶ್ರೀಧರ್ ಹುಲ್ತಿಕೊಪ್ಪ, ಎಂ.ಬಿ. ರೇಣುಕಾಪ್ರಸಾದ್, ಎಂ.ಪಿ. ರತ್ನಾಕರ, ಸುನೀಲ್‌ಗೌಡ, ಎನ್.ಜಿ. ನಾಗರಾಜ್, ಮರ‍್ಯಪ್ಪ ಬೆನ್ನೂರು, ಕೆ.ವಿ. ಗೌಡ್ರು, ಜಯಶೀಲಗೌಡ್ರು, ಪ್ರದೀಪ್ ಬಾಡದಬೈಲು, ಷಣ್ಮುಖಪ್ಪ ಚನ್ನಪಟ್ಟಣ, ದರ್ಶನ್ ಚಿಕ್ಕಮಾಕೊಪ್ಪ ಸೇರಿದಂತೆ ಚಂದ್ರಗುತ್ತಿ ಹೋಬಳಿ ವ್ಯಾಪ್ತಿಯ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.