ಸಾರಾಂಶ
ಸಾರ್ವಜನಿಕರಿಗೆ ಜಾಗೃತಿ ಜಾಥಾ । ಪ್ರತಿಜ್ಞಾ ವಿಧಿ ಬೋಧಿಸಿದ ನ್ಯಾಯಾಧೀಶ ಕೆ.ಎಂ. ಹರೀಶ್
ಕನ್ನಡಪ್ರಭ ವಾರ್ತೆ ಗುಡಿಬಂಡೆಪಟ್ಟಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ಆಡಳಿತ, ತಾಪಂ, ವಕೀಲರ ಸಂಘ ಸೇರಿ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಜಾಗೃತಿ ಜಾಥಾ ಹಾಗೂ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಈ ವೇಳೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿ ಮಾತನಾಡಿದ ಜೆಎಂಎಫ್ಸಿ ನ್ಯಾಯಾಧೀಶ ಕೆ.ಎಂ. ಹರೀಶ್, ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ರಚನೆಯಾದ ರಾಷ್ಟ್ರ ಉಳಿಯಬೇಕಾದರೆ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಲೇಬೇಕು. ಚುನಾವಣೆಗಳು ಬಂದಾಗ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವಾಗ ಯಾವುದೇ ಜಾತಿ, ಧರ್ಮ, ಇತರೆ ಆಮಿಷಗಳಿಗೆ ಒಳಗಾಗದೆ ಮತದಾರರು ಪ್ರಾಮಾಣಿಕ ಮತ ಚಲಾಯಿಸಬೇಕಿದೆ. ಒಳ್ಳೆಯ ವ್ಯಕ್ತಿಗಳನ್ನು ಆಯ್ಕೆ ಮಾಡಿ ಸುಭದ್ರ ಸರ್ಕಾರ ನಿರ್ಮಿಸುವಲ್ಲಿ ನಾವೆಲ್ಲ ಕಡ್ಡಾಯವಾಗಿ ಮತದಾನ ಮಾಡಬೇಕು. ಜೊತೆಗೆ ಪೋಷಕರಿಗೂ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು ಎಂದರು.
ತಾಪಂ ಇಒ ಹೇಮಾವತಿ ಮಾತನಾಡಿ, ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದಲ್ಲಿ 18 ವರ್ಷ ತುಂಬಿದ ಪ್ರತಿಯೊಬ್ಬರಿಗೂ ಮತದಾನದ ಹಕ್ಕನ್ನು ನೀಡಲಾಗಿದ್ದು, ನಮ್ಮ ಭವಿಷ್ಯ ರೂಪಿಸುವ ಉತ್ತಮ ನಾಯಕರನ್ನು ಆಯ್ಕೆ ಮಾಡಿಕೊಳ್ಳಲು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕಾಗಿದೆ ಎಂದರು.ತಹಸೀಲ್ದಾರ್ ಎನ್. ಮನಿಷಾ, ಮುಖ್ಯ ಭಾಷಣಕಾರರಾಗಿ ರಾಜ್ಯಶಾಸ್ತ್ರ ಉಪನ್ಯಾಸಕಿ ಎಸ್.ಜೆ. ನಾಗರತ್ನ, ಪ್ರಾಂಶುಪಾಲ ಎ. ರವೀಂದ್ರ ಸಂವಿಧಾನದ ಆಶಯ ಹಾಗೂ ಮಹತ್ವದ ಬಗ್ಗೆ ಮಾತನಾಡಿದರು. ಕಾರ್ಯಕ್ರಮದ ಅಂಗವಾಗಿ ಅಂಬೇಡ್ಕರ್ ವೃತ್ತದ ಬಳಿಯ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ನೆರವೇರಿಸಲಾಯಿತು. ರಾಷ್ಟ್ರೀಯ ಮತದಾರ ದಿನಾಚರಣೆಯ ಪ್ರಯುಕ್ತ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿಗಳನ್ನು ವಿತರಿಸಿದರು.
ಬಿಇಒ ಮುನೇಗೌಡ, ಚುನಾವಣಾ ಶಿರಸ್ತೇದಾರ್ ನಟರಾಜ್, ಇಸಿಒ ಚಂದ್ರಶೇಖರ್, ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಕೃಷ್ಣಪ್ಪ, ಪಿಯು ಕಾಲೇಜಿನ ಉಪನ್ಯಾಸಕರಾದ ಸೋಮಶೇಖರ್, ರಾಮಣ್ಣ, ನರೇಶ್, ಮೋಹನ್ ಕುಮಾರ್, ರಾಮಾಂಜಿನಪ್ಪ, ವಿವಿಧ ಇಲಾಖೆಯ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.------
ಪಟ್ಟಣದ ಮುಖ್ಯ ರಸ್ತೆಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಜಾಗೃತಿ ಜಾಥ ಹಮ್ಮಿಕೊಳ್ಳಲಾಗಿತ್ತು.