ಕನ್ನಡಪ್ರಭ ವಾರ್ತೆ ತಿಪಟೂರು
ಒಂದು ದೇಶದ ಪೌರತ್ವದ ಹೆಗ್ಗುರುತು ಎಂದರೆ ಆ ದೇಶದ ಮತದಾರರಾಗಿರುವುದು. ಮತದಾನದ ಮೂಲಕ ತಮ್ಮ ಪ್ರಜಾಪ್ರತಿನಿಧಿಗಳನ್ನು ಆಯ್ಕೆ ಮಾಡಿ, ಜವಾಬ್ದಾರಿಯುತ ಸರ್ಕಾರವನ್ನು ರಚಿಸುವಂತೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಹಕ್ಕು ಮತ್ತು ಕರ್ತವ್ಯವಾಗಿದ್ದು, ಇದಕ್ಕಾಗಿ ಮತಪಟ್ಟಿಯಲ್ಲಿ ಹೆಸರು ದಾಖಲಾಗಬೇಕಾಗಿರುವುದು ಅತ್ಯವಶ್ಯಕವಾಗಿದೆ ಎಂದು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ.ಡಿ. ಶಿವಕುಮಾರ್ ತಿಳಿಸಿದರು.ರಾಜ್ಯಾದ್ಯಂತ ವಿಶೇಷ ಮತಪಟ್ಟಿ ಪರಿಷ್ಕರಣೆ (ಎಸ್ಐಆರ್ ) ಬಗ್ಗೆ ಜಾಗೃತಿ ಮೂಡಿಸಲು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಜಾಪ್ರಭುತ್ವ ಉಳಿವಿಗೆ ಮತದಾನದ ಮಹತ್ವ ಎಂಬ ವಿಷಯದ ಬಗ್ಗೆ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿ. ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಸ್.ಐ.ಆರ್. ನಲ್ಲಿ ಯಾವುದೇ ಅರ್ಹ ಮತದಾರ ಬಿಟ್ಟು ಹೋಗದಂತೆ ಹಾಗೂ ಅನರ್ಹ ಮತದಾರ ಸೇರದಂತೆ ನೋಡಿಕೊಳ್ಳುವ ಹೊಣೆ ನಮ್ಮೆಲ್ಲರ ಮೇಲಿದೆ. ಇದು ಯಶಸ್ವಿಯಾಗಲು ಅಧಿಕಾರಿಗಳು. ರಾಜಕೀಯ ಪಕ್ಷಗಳು ಜೊತೆಗೆ ಮತದಾರರು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕೆಂದು ತಿಳಿಸಿದರು.
ಪ್ರಜಾಪ್ರಭುತ್ವ ಉಳಿವಿಗೆ ಮತದಾನದ ಮಹತ್ವ ಎಂಬ ವಿಷಯದ ಬಗ್ಗೆ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಬಹುಮಾನ ವಿತರಿಸಿ ಮಾತನಾಡಿದ ತಾಲೂಕು ಕ.ಸಾ.ಪ. ಅಧ್ಯಕ್ಷ ಎಂ. ಬಸವರಾಜಪ್ಪನವರು, ಪ್ರಸ್ತುತ ನಡೆಯುತ್ತಿರುವ ಎಸ್.ಐ.ಆರ್. ಪ್ರಕ್ರಿಯೆಯನ್ನು ನಿರ್ಲಕ್ಷಿಸದೆ ಮತಪಟ್ಟಿಯಲ್ಲಿ ನಿಮ್ಮ ಪೋಷಕರ, ಬಂಧುಗಳ ಹೆಸರು ಕಡ್ಡಾಯವಾಗಿ ಇರುವಂತೆ ನೋಡಿಕೊಳ್ಳುವ ಜವಾಬ್ದಾರಿ ವಿದ್ಯಾರ್ಥಿಗಳದ್ದಾಗಿದ್ದು, ಈ ಬಗ್ಗೆ ತಮ್ಮ ಪೋಷಕರಲ್ಲಿ ಜಾಗೃತಿ ಮೂಡಿಸಬೇಕಿದೆ. ಪ್ರಬಂಧ ಸ್ಪರ್ಧೆಯಲ್ಲಿ ಹೆಚ್ಚು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿರುವುದು ಉತ್ತಮ ಪ್ರತಿಕ್ರಿಯೆ ಮೂಡಿಬಂದಿದೆ. ಮುಂದಿನ ದಿನಗಳಲ್ಲಿ ಇದೇ ಕಾಲೇಜಿನಲ್ಲಿ ತಾಲೂಕು ಮಟ್ಟದ ಚರ್ಚಾಸ್ಪರ್ಧೆಯನ್ನು ಆಯೋಜಿಸುವ ಆಲೋಚನೆ ಇದೆ ಎಂದರು.ತಾಲೂಕು ಕ.ಸಾ.ಪ. ಕಾರ್ಯದರ್ಶಿಗಳಾದ ಎಚ್.ಎಸ್. ಮಂಜಪ್ಪ, ಬಿ. ನಾಗರಾಜು ಎಸ್.ಐ.ಆರ್. ನ ಮಹತ್ವದ ಬಗ್ಗೆ ವಿವರಿಸಿದರು.
ಕ್ರಮವಾಗಿ ಪ್ರಥಮ, ದ್ವಿತಿಯ, ತೃತೀಯ ಬಹುಮಾನ ವಿಜೇತರಾದ ಕು. ವಿದ್ಯಾ, ಕು. ನವ್ಯಶ್ರೀ ಹಾಗೂ ಕು. ಗುರುಪ್ರಸಾದ್ ರವರಿಗೆ ಪರಿಷತ್ತಿನ ಹೆಮ್ಮೆಯ ಪ್ರಕಟಣೆ ಗಂಗಾಪಾನಿಯೊಂದಿಗೆ ನಗದು ಬಹುಮಾನ ವಿತರಿಸಲಾಯಿತು.
ಸಮಾರಂಭದಲ್ಲಿ ಕಾಲೇಜು ಉಪನ್ಯಾಸಕ ಸಿಬ್ಬಂದಿ ಉಪಸ್ಥಿತರಿದ್ದರು. ಷಡಕ್ಷರಪ್ಪನವರು ಕಾರ್ಯಕ್ರಮ ನಿರೂಪಿಸಿ, ನಿರ್ವಹಿಸಿದರು.