ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಯನ್ನು (BSSK) ಯಾವುದೇ ಕಾರಣಕ್ಕೂ ಹರಾಜು ಹಾಕಬಾರದು, ಒಂದು ವೇಳೆ ಮತ್ತೆ ಹರಾಜು ಪ್ರಕ್ರಿಯೆಗೆ ಮುಂದಾದರೆ ತಮ್ಮ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಡಿಸಿಸಿ ಬ್ಯಾಂಕ್ ನಿರ್ದೇಶಕಿ ಶಕುಂತಲಾ ಕೆ. ಬೆಲ್ದಾಳೆ ಬ್ಯಾಂಕ್ ಆಡಳಿತ ಮಂಡಳಿ ಹಾಗೂ ಅಧ್ಯಕ್ಷ ಅಮರ ಖಂಡ್ರೆ ಅವರಿಗೆ ನೇರ ಎಚ್ಚರಿಕೆ ನೀಡಿದ್ದಾರೆ.
ಕನ್ನಡಪ್ರಭ ವಾರ್ತೆ ಬೀದರ್
ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಯನ್ನು (BSSK) ಯಾವುದೇ ಕಾರಣಕ್ಕೂ ಹರಾಜು ಹಾಕಬಾರದು, ಒಂದು ವೇಳೆ ಮತ್ತೆ ಹರಾಜು ಪ್ರಕ್ರಿಯೆಗೆ ಮುಂದಾದರೆ ತಮ್ಮ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಡಿಸಿಸಿ ಬ್ಯಾಂಕ್ ನಿರ್ದೇಶಕಿ ಶಕುಂತಲಾ ಕೆ. ಬೆಲ್ದಾಳೆ ಬ್ಯಾಂಕ್ ಆಡಳಿತ ಮಂಡಳಿ ಹಾಗೂ ಅಧ್ಯಕ್ಷ ಅಮರ ಖಂಡ್ರೆ ಅವರಿಗೆ ನೇರ ಎಚ್ಚರಿಕೆ ನೀಡಿದ್ದಾರೆ.ಅವರು ಈ ಕುರಿತು ಪತ್ರ ಬರೆದಿದ್ದು, ಕಾರ್ಖಾನೆಯನ್ನು ಹರಾಜು ಹಾಕುವುದಕ್ಕೆ ಜಿಲ್ಲೆಯ ರೈತರು ಹಾಗೂ ಕಾರ್ಮಿಕರಿಂದ ಈಗಾಗಲೇ ಪ್ರಬಲ ವಿರೋಧ ವ್ಯಕ್ತ ವಾಗುತ್ತಿದೆ. ರೈತಪರ ಕಾಳಜಿ ಹೊಂದಿರುವ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಯು ರೈತರ ಹಿತವನ್ನು ಕಾಪಾಡುವುದು ಮುಖ್ಯ ಕರ್ತವ್ಯವಾಗಿದೆ ಎಂದಿದ್ದಾರೆ.
ಕಾರ್ಖಾನೆಯನ್ನು ಖಾಸಗಿಯವರಿಗೆ ಗುತ್ತಿಗೆ ನೀಡುವ ಪ್ರಕ್ರಿಯೆ ಈಗಾಗಲೇ ಸರ್ಕಾರದ ಮಟ್ಟದಲ್ಲಿದೆ. ಹೀಗಾಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬ್ಯಾಂಕ್ ಅಧ್ಯಕ್ಷರು ಜಂಟಿಯಾಗಿ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ಗುತ್ತಿಗೆ ಪ್ರಕ್ರಿಯೆಯನ್ನು ತಕ್ಷಣವೇ ಅಂತಿಮಗೊಳಿಸಬೇಕು ಎಂದು ತಿಳಿಸಿದ್ದಾರೆ.ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಜಿಲ್ಲೆಯ ರೈತರ ಜೀವನಾಡಿ. 1969ರಲ್ಲಿ ಸ್ಥಾಪನೆಯಾದ ಈ ಕಾರ್ಖಾನೆ ಜಿಲ್ಲೆಯ ಹಳೆಯ ಸಹಕಾರ ಕ್ಷೇತ್ರದ ಸಕ್ಕರೆ ಕಾರ್ಖಾನೆಯಾಗಿದೆ. ಈ ಕಾರ್ಖಾನೆ ಡಿಸಿಸಿ ಬ್ಯಾಂಕ್ಗೆ ಖಟ್ ಬಾಕಿ ಸಾಲ ಉಳಿಸಿಕೊಂಡಿದೆ. ಕಳೆದ ಕೆಲವು ವರ್ಷಗಳಿಂದ ಬಾಕಿ ವಸೂಲಿ ಆಗದಿರುವ ಕಾರಣ ಬ್ಯಾಂಕ್ ಆರ್ಥಿಕ ವ್ಯವಹಾರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿರುವುದು ನಿಜ. ಹೀಗಾಗಿ ಸಾಲ ವಸೂಲಿ ಜೊತೆಗೆ ಕಾರ್ಖಾನೆಯನ್ನು ಪುನಶ್ಚೇತನ ಮಾಡುವುದು ಬಹಳ ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.
ಆಗಷ್ಟ 27ರಂದು ಸರ್ಕಾರದ ವಾಣಿಜ್ಯ ಇಲಾಖೆ ಕಾರ್ಯದರ್ಶಿಗಳು ಡಿಸಿಸಿ ಬ್ಯಾಂಕ್ ಸಿಇಒ ಅವರಿಗೆ ಬರೆದ ಪತ್ರದಲ್ಲಿಯೂ ಸಹ ಬಿಎಸ್ಎಸ್ಕೆ ಖಾಸಗಿಯವರಿಗೆ ಗುತ್ತಿಗೆ ವಹಿಸಿ ಪುನಶ್ಚೇತನ ಮಾಡುವ ಪ್ರಕ್ರಿಯೆ ಸರ್ಕಾರದ ಮಟ್ಟದಲ್ಲಿ ಅಂತಿಮ ಹಂತದಲ್ಲಿದೆ ಎಂಬ ಅಂಶ ಉಲ್ಲೇಖಿಸಿದ್ದಾರೆ. ಹೀಗಾಗಿ ಕಾರ್ಖಾನೆಯನ್ನು ಗುತ್ತಿಗೆ ವಹಿಸುವ ಸರ್ಕಾರದ ಪ್ರಯತ್ನಕ್ಕೆ ಬ್ಯಾಂಕ್ ಕೈಜೋಡಿಸಬೇಕು ಎಂದು ತಿಳಿಸಿದ್ದಾರೆ.ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಅಮರ ಖಂಡ್ರೆ ಅವರು ತಮ್ಮ ಸಹೋದರರಾದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರೊಟ್ಟಿಗೆ ಸರ್ಕಾರದ ಮಟ್ಟದಲ್ಲಿ ಕುಳಿತು, ಆದಷ್ಟು ಬೇಗ BSSK ಕಾರ್ಖಾನೆಯನ್ನು ಖಾಸಗಿಯವರಿಗೆ ಗುತ್ತಿಗೆ ಕೊಡುವ ಪ್ರಕ್ರಿಯೆಯನ್ನು ಅಂತಿಮಗೊಳಿಸಬೇಕು. ಇದು ರೈತರ ಹಿತದಿಂದ ನಿಮ್ಮ ಜವಾಬ್ದಾರಿ ಸಹ ಆಗಿದೆ ಎಂದು ತಿಳಿಸಿದ್ದಾರೆ.