ಕನ್ನಡಪ್ರಭ ವಾರ್ತೆ ಪಾಂಡವಪುರ

ಕೆಆರ್‌ಎಸ್ ಅಚ್ಚುಕಟ್ಟು ವ್ಯಾಪ್ತಿ ಪ್ರದೇಶದ ರೈತರ ಹೊಸ ಬೆಳೆಗಳಿಗೆ ನೀರು ಹರಿಸುವ ಸಂಬಂಧ ಶೀಘ್ರ ಜಿಲ್ಲೆಯ ಶಾಸಕರು, ಅಧಿಕಾರಿಗಳೊಂದಿಗೆ ಐಸಿಸಿ ಸಭೆ ಕರೆದು ಚರ್ಚಿಸಿ ಕ್ರಮವಹಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ತಾಲೂಕಿನ ಮಂಡಿಬೆಟ್ಟಹಳ್ಳಿ ರೈತ, ಹೋರಾಟಗಾರ ಎಂ.ಎಸ್.ಮಂಜುನಾಥ್ ಅವರು ಸಾಲಭಾದೆಯಿಂದ ಡೆಟ್ ನೋಟ್ ಬರೆದಿಟ್ಟು ವಿಸಿ ನಾಲೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಅವರ ಮನೆಗೆ ಭೇಟಿ ಕೊಟ್ಟುಕುಟುಂಬಸ್ಥರಿಗೆ ಸಾಂತ್ವನ ಹೇಳಿ ಸರ್ಕಾರದಿಂದ 5 ಲಕ್ಷ ರು. ಪರಿಹಾರದ ಚೆಕ್ ವಿತರಿಸಿ ಮಾತನಾಡಿದರು.

ಮಂಜುನಾಥ್ ಸಾಲಭಾದೆಯಿಂದ ಆತ್ಮಹತ್ಯೆಗೆ ಶರಣಾದ ಹಿನ್ನೆಲೆಯಲ್ಲಿ ಅವರ ಮನೆಗೆ ಭೇಟಿಕೊಟ್ಟು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಪರಿಹಾರ ವಿತರಿದ್ದೇವೆ. ಸಾಲಭಾದೆಗೆ ಹೆದರಿ ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು. ಸಾಲಕ್ಕೆ ಆತ್ಮಹತ್ಯೆಯೇ ಪರಿಹಾರವಲ್ಲ ಎಂದರು.

ರೈತರ ಅನುಕೂಲಕ್ಕಾಗಿಯೇ ರಾಜ್ಯ ಸರ್ಕಾರ ಐದು ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಸಮಸ್ಯೆಗಳು ಇದ್ದರೆ ರೈತರು ಅಧಿಕಾರಿಗಳೊಂದಿಗೆ ಚರ್ಚಿಸಿದರೆ ಒಂದಲ್ಲಾ ಒಂದು ಪರಿಹಾರ ಒದಗಿಸಲಾಗುವುದು. ಹಾಗಾಗಿ ರೈತರು ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕು ಎಂದು ಮನವಿ ಮಾಡಿದರು.


ಅಕ್ಕಕೆಫೆಗೆ ಭೇಟಿ:

ಪಟ್ಟಣದ ತಾಪಂ ಆವರಣದಲ್ಲಿ ಜಿಪಂ ವತಿಯಿಂದ ನಿರ್ಮಾಣ ಮಾಡಲಾಗಿರುವ ಅಕ್ಕಕೆಫೆಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಭೇಟಿಕೊಟ್ಟು ಪರಿಶೀಲನೆ ನಡೆಸಿದರು.

ನಂತರ ಜಿಪಂ ಸಿಇಒ ನಂದಿನಿ ಅವರ ಬಳಿ ಮಾಹಿತಿ ಪಡೆದು ಇಲಾಖೆ ವತಿಯಿಂದ ಅಕ್ಕಕೆಫೆ ನಿರ್ಮಿಸಲಾಗಿದೆ. ಇದರಿಂದ ಮಹಿಳೆಯರಿಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಸಾಧ್ಯವಾಗಿದೆ. ಇದರ ನಿರ್ವಹಣೆಯನ್ನು ಸ್ವಸಹಾಯ ಗುಂಪಿನ ಮಹಿಳಾ ಸದಸ್ಯರಿಗೆ ನೀಡಲಾಗಿದೆ. ಜಿಲ್ಲೆಯ ಹಲವು ತಾಲೂಕುಗಳಲ್ಲಿ ಕೆಫೆ ನಿರ್ಮಿಸಲಾಗಿದೆ ಎಂಬ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ತ್ಯಾಗರಾಜು, ಕೆಪಿಸಿಸಿ ಸದಸ್ಯ ಬಿ.ರೇವಣ್ಣ, ಡಿಸಿಸಿ ಬ್ಯಾಂಕ್ ನಿರ್ದೇಶಕ ವಿಜಯೇಂದ್ರಮೂರ್ತಿ, ಉಪವಿಭಾಗಾಧಿಕಾರಿ ಕೆ.ಆರ್.ಶ್ರೀನಿವಾಸ್, ತಹಸೀಲ್ದಾರ್ ಆದರ್ಶ, ತಾಪಂ ಇಒ ವೀಣಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಭರತ್ ಪಟೇಲ್, ತಾಪಂ ಮಾಜಿ ಸದಸ್ಯ ರಾಮೇಗೌಡ ಮುಖಂಡರಾದ ರಾಘವ, ದೀಪು, ಬಿ.ಟಿ.ಮಂಜುನಾಥ್ ಸೇರಿದಂತೆ ಹಲವರು ಹಾಜರಿದ್ದರು.