ಈ ವರ್ಷ ವಾಡಿಕೆಗಿಂತ ಮಳೆ ಪ್ರಮಾಣ ಕಡಿಮೆಯಾಗಿದೆ. ಅಣೆಕಟ್ಟಿನಲ್ಲಿ ನೀರಿನ ಸಂಗ್ರಹ ಪ್ರಮಾಣದ ಬಗ್ಗೆ ಈಗಾಗಲೇ ಮಾಹಿತಿ ಪಡೆದಿದ್ದೇನೆ. ಆದ್ದರಿಂದ ಹೇಮಾವತಿ ನದಿಯಿಂದ ತಾಲೂನ ಎಲ್ಲಾ ಕೆರೆಕಟ್ಟೆಗಳಿಗೆ ನೀರು ತುಂಬಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ.
ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಹೇಮಾವತಿ ಜಲಾಶಯದಿಂದ ಸಾಹುಕಾರ್ ಚೆನ್ನಯ್ಯ ಮುಖ್ಯ ನಾಲೆ ಮೂಲಕ ತಾಲೂಕಿನ ಕೆರೆಕಟ್ಟೆಗಳಿಗೆ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಎಚ್.ಟಿ.ಮಂಜು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ತಾಲೂಕಿನ ವಿವಿಧ ನಾಲಾ ಭಾಗಗಳಿಗೆ ಭೇಟಿ ನೀಡಿದ ಶಾಸಕರು, ಯಾವ ಯಾವ ಕೆರೆಗಳಿಗೆ ನೀರು ತುಂಬಿಸುವ ಕಾರ್ಯದ ಪ್ರಗತಿಯನ್ನು ವೀಕ್ಷಿಸಿ ನೀರಾವರಿ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದು ಕೆರೆಗಳಿಗೆ ನೀರು ತುಂಬುತ್ತಿರುವ ಬಗ್ಗೆ ಧೃಡ ಪಡಿಸಿಕೊಂಡರು.
ಇದೇ ವೇಳೆ ಕಾಲುವೆಗಳಲ್ಲಿ ಶಿಲ್ಟ್ ಹಾಗೂ ಜಂಗಲ್ ಬೆಳೆದಿರುವುದನ್ನು ಗಮನಿಸಿದ ಶಾಸಕ ಎಚ್.ಟಿ.ಮಂಜು, ನೀರು ಸರಾಗವಾಗಿ ಹರಿದು ತಾಲೂಕಿನ ಬಹುತೇಕ ಎಲ್ಲಾ ಕೆರೆಗಳನ್ನು ತುಂಬಿಸಬೇಕು. ಯಾವುದೇ ತೊಂದರೆಯಾಗದಂತೆ ತಕ್ಷಣವೇ ಕಾಲುವೆಗಳನ್ನು ಸ್ವಚ್ಛಗೊಳಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ನಂತರ ಮಾತನಾಡಿದ ಶಾಸಕರು, ರೈತರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ನೀರು ಹರಿಯುವ ಮಾರ್ಗದಲ್ಲಿ ಅಡಚಣೆಗಳಿದ್ದರೆ ಕೂಡಲೇ ತೆರವುಗೊಳಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.ಈ ವರ್ಷ ವಾಡಿಕೆಗಿಂತ ಮಳೆ ಪ್ರಮಾಣ ಕಡಿಮೆಯಾಗಿದೆ. ಅಣೆಕಟ್ಟಿನಲ್ಲಿ ನೀರಿನ ಸಂಗ್ರಹ ಪ್ರಮಾಣದ ಬಗ್ಗೆ ಈಗಾಗಲೇ ಮಾಹಿತಿ ಪಡೆದಿದ್ದೇನೆ. ಆದ್ದರಿಂದ ಹೇಮಾವತಿ ನದಿಯಿಂದ ತಾಲೂನ ಎಲ್ಲಾ ಕೆರೆಕಟ್ಟೆಗಳಿಗೆ ನೀರು ತುಂಬಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಒಂದೆರಡು ದಿನ ತಡವಾದರೂ ತಾಲೂಕಿನ ಎಲ್ಲಾ ಕೆರೆಕಟ್ಟೆಗಳನ್ನು ಶೇ.100ರಷ್ಟು ತುಂಬಿಸಲಾಗುವುದು. ತಾಲೂಕಿನ ರೈತರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು.
ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು. ರೈತರ ಹಿತಾಸಕ್ತಿಗೆ ಮೊದಲ ಆದ್ಯತೆ ನೀಡಲಾಗಿದೆ. ನೀರಿನ ಲಭ್ಯತೆ ಹಾಗೂ ಕೆರೆಗಳ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಲಾಗುವುದು ಎಂದರು.ಈ ವೇಳೆ ಹೇಮಾವತಿ ನೀರಾವರಿ ಇಲಾಖೆ ನಂ.03ರ ಕಾರ್ಯಪಾಲಕ ಇಂಜಿನಿಯರ್ ಮಂಜುನಾಥ್, ಎಇಇ ಪ್ರಸನ್ನ, ವಿಶ್ವನಾಥ್, ಅಶೋಕ್ ಸೇರಿದಂತೆ ನೀರಾವರಿ ಇಲಾಖೆ ಎಲ್ಲಾ ಇಂಜಿನಿಯರುಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.