ಜ.10ರಿಂದ ಭದ್ರಾ, ಜ.20ರಿಂದ ಬಲದಂಡ ನಾಲೆಗೆ ನೀರು

| Published : Jan 07 2024, 01:30 AM IST

ಸಾರಾಂಶ

ಭದ್ರಾ ಎಡದಂಡೆ ಹಾಗೂ ಬಲದಂಡೆ ನಾಲೆಗಳ ನೀರನ್ನು ಎಚ್ಚಿಕೊಂಡು ಲಕ್ಷಾಂತರ ಹೆಕ್ಟೇರ್‌ನಲ್ಲಿ ರೈತರು ಕೃಷಿ ನಡೆಸುತ್ತಿದ್ದಾರೆ. ಈ ವರ್ಷ ಮಳೆ ಕೊರತೆ ಹಿನ್ನೆಲೆ ಸರ್ಕಾರ ಹಾಗೂ ರೈತರು ಡ್ಯಾಂಗಳಲ್ಲಿರುವ ನೀರು ಸದ್ಬಳಕೆಗೆ ಇನ್ನಿಲ್ಲದ ಚಿಂತೆಗೆ ಬಿದ್ದು, ಪರಿಹಾರ ಕ್ರಮ ಹಾಗೂ ಸೌಲಭ್ಯಕ್ಕಾಗಿ ಹತ್ತಾರು ರೀತಿಯ ಹೋರಾಟ ನಡೆಸುತ್ತಿದ್ದಾರೆ. ಈ ಮಧ್ಯೆ ಶಿವಮೊಗ್ಗದಲ್ಲಿ ಶನಿವಾರ ಭದ್ರಾ ಕಾಡಾ ಸಭೆಯಲ್ಲಿ ನೀರು ಹಂಚಿಕೆ ದಿನಗಳ ಕುರಿತು ಜಿಲ್ಲಾ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ರೈತ ಮುಖಂಡರ ಸಭೆ ನಡೆದಿದೆ. ಈ ಸಭೆ ಕೈಗೊಂಡ ತೀರ್ಮಾನಕ್ಕೆ ರೈತರು ಆಕ್ಷೇಪವನ್ನೂ ವ್ಯಕ್ತಪಡಿಸಿ, ಪ್ರತಿಭಟಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಶಿವಮೊಗ್ಗ ಭದ್ರಾ ಜಲಾಶಯದ ಎಡದಂಡ ನಾಲೆಗೆ ಜ.10ರಿಂದ ಮತ್ತು ಬಲದಂಡ ನಾಲೆ ಜ.20ರಿಂದ ನೀರು ಹರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ನಗರದ ಮಲವಗೊಪ್ಪದಲ್ಲಿರುವ ಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ ಕಚೇರಿ (ಕಾಡಾ)ಯಲ್ಲಿ ಶನಿವಾರ ಏರ್ಪಡಿಸಿದ್ದ 2023-24ನೇ ಸಾಲಿನ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿ, ಎಡದಂಡ ನಾಲೆಗೆ ಜ.10ರಿಂದ ನೀರು ಹರಿಸಲಾಗುತ್ತಿದ್ದು, ಆನ್ ಮತ್ತು ಆಫ್ ಮಾದರಿ ಅನುಸರಿಸಲಾಗುವುದು. ಜ.10ರಿಂದ 16 ದಿನ ಆನ್ ಮತ್ತು 15 ದಿನ ಆಫ್, ನಂತರ 17 ದಿನ ಆನ್, 15 ದಿನ ಆಫ್, 18 ದಿನ ಆನ್ 15 ದಿನ ಆಫ್ ಮತ್ತು 20 ದಿನ ಆನ್, 15 ದಿನ ಆಫ್ ಇರುತ್ತದೆ. ಬಲದಂಡ ನಾಲೆಗೆ ಜ.20ರಿಂದ ನೀರು ಹರಿಸಲಾಗುತ್ತಿದ್ದು. ಮೊದಲಿಗೆ 12 ದಿನ ಆನ್, 20 ದಿನ ಆಫ್, 12 ದಿನ ಆನ್ 20 ದಿನ ಆಫ್, 14 ದಿನ ಆನ್ 20 ದಿನ ಆಫ್ ಮತ್ತು 15 ದಿನ ಆನ್ 20 ದಿನ ಆಫ್ ಇರುತ್ತದೆ ಎಂದು ಅಧಿಕಾರಿಗಳು ಮತ್ತು ರೈತ ಮುಖಂಡರೊಂದಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಪ್ರಸಕ್ತ ಸಾಲಿನಲ್ಲಿ ಸಾಕಷ್ಟು ಪ್ರಮಾಣದ ಮಳೆಯಾಗದ ಕಾರಣ ಭದ್ರಾ ಜಲಾಶಯದಲ್ಲಿ ನೀರಿನ ಕೊರತೆಯಾಗಿದೆ. ಜಲಾಶಯದ ಗರಿಷ್ಠ ನೀರಿನ ಸಂಗ್ರಹಣಾ ಮಟ್ಟ 186 ಅಡಿ, ಪ್ರಸ್ತುತ ಶೇ.35.370 ಅಡಿ ಸಂಗ್ರಹವಿದೆ. ಪ್ರಸ್ತತ ಜಲಾಶಯದಲ್ಲಿ ನೀರಾವರಿ ಬಳಕೆಗೆ ಬರುವ 12.50 ಟಿಎಂಸಿ ಪ್ರಮಾಣದ ನೀರನ್ನು ಬಲದಂಡ ನಾಲೆಗೆ 2650 ಕ್ಯುಸೆಕ್‌ ಮತ್ತು ಎಡದಂಡ ನಾಲೆಗೆ 380 ಕ್ಯುಸೆಕ್‌ ಮತ್ತು ಗೊಂದಿ ನಾಲೆ ಸೇರಿದಂತೆ ಪ್ರತಿದಿನ 0.27 ಟಿಎಂಸಿ ನೀರು ಹರಿಸಿದಲ್ಲಿ ಒಟ್ಟು 47 ದಿನಗಳಿಗೆ ನೀರು ಹರಿಸಬಹುದು ಎಂದು ತಿಳಿಸಿದರು.

ಬತ್ತ ಬೆಳೆಯದಿದ್ದರೆ ಒಳಿತು:

ಸದ್ಯ ಚಳಿ ವಾತಾವರಣದಿಂದ ತಂಪಿದೆ. ಮಾರ್ಚ್ ನಂತರ ಬೇಸಿಗೆ ಹೆಚ್ಚಲಿದ್ದು, ಕುಡಿಯುವ ನೀರು ಮತ್ತು ತೋಟಗಾರಿಕೆ ಬೆಳೆ ಉಳಿಸಿಕೊಳ್ಳಲು ಕಷ್ಟವಾಗಬಹುದು. ಆದ್ದರಿಂದ ಕಟ್ಟಕಡೆಯ ಅಚ್ಚುಕಟ್ಟುದಾರರ ಅನುಕೂಲವನ್ನೂ ಪರಿಗಣಿಸಿ ಈಗ ಸ್ವಲ್ಪ ತಡವಾಗಿ ನೀರು ಹರಿಸುವ ಬಗ್ಗೆ ಅಧಿಕಾರಿಗಳು, ರೈತರು ತಮ್ಮ ಸಲಹೆ-ಸೂಚನೆಗಳನ್ನು ನೀಡಬೇಕು. ನೀರಿನ ಅಭಾವವಿರುವ ಕಾರಣ ಪ್ರಸ್ತುತ ರೈತರು ಬತ್ತ ಬೆಳೆಯದಿದ್ದರೆ ಒಳಿತು ಎಂದರು.

ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಆರ್‌.ಸೆಲ್ವಮಣಿ ಮಾತನಾಡಿ, ಮುಂಬರುವ ಮಾನ್ಸೂನ್ ಮಳೆಗಾಲ ಸ್ವಲ್ಪ ವಿಳಂಬವಾದರೂ ಅಲ್ಲಿಯವರೆಗೆ ನೀರು ನೀಡಲು ಅನುಕೂಲ ಆಗುವಂತೆ ನೀರು ವಿತರಣೆ ಯೋಜನೆ ಹಾಕಿಕೊಳ್ಳಬೇಕು. ಬೇಸಿಗೆಗೆ ನೀರು ಪೂರೈಕೆ ಆಗುವಂತೆ ನಿರ್ವಹಣೆ ಮಾಡುವ ಅಗತ್ಯವಿದೆ ಎಂದರು.

ದಾವಣಗೆರೆ ಜಿಲ್ಲಾಧಿಕಾರಿ ವೆಂಕಟೇಶ್ ಮಾತನಾಡಿ, ಪ್ರಸ್ತುತ ಜಲಾಶಯದಲ್ಲಿರುವ ನೀರನ್ನು ಕುಡಿಯುವ ನೀರು ಮತ್ತು ತೋಟಗಾರಿಕೆ ಬೆಳೆಗಳಾದ ಅಡಕೆ, ತೆಂಗು ಸಂರಕ್ಷಣೆ ಮಾಡಿಕೊಳ್ಳಬಹುದಾಗಿದ್ದು, ಜಿಲ್ಲೆಯಲ್ಲಿ ಬತ್ತ ಬೆಳೆಯದಿರುವಂತೆ ರೈತರಿಗೆ ಸೂಚನೆ ನೀಡಲಾಗಿದೆ ಎಂದರು.

ತುಂಗಾ ಡ್ಯಾಂನಿಂದ ನೀರೆತ್ತಲು ಒತ್ತಾಯ:

ರಾಜ್ಯ ರೈತ ಸಂಘದ ಅಧ್ಯಕ್ಷ ಎಚ್.ಆರ್. ಬಸವರಾಜಪ್ಪ ಮಾತನಾಡಿ, ಮೇ 15ರವರೆಗೆ ನೀರು ಬೇಕೇಬೇಕು. 47 ದಿನಗಳಿಗೆ ಆಗಬಹುದಾದ ನೀರನ್ನು ಸಮರ್ಪಕವಾಗಿ ನೀಡಲು ಜ.15ರಿಂದ ಆನ್ ಮತ್ತು ಆಫ್ ಮಾದರಿಯಲ್ಲಿ ಮೇ ತಿಂಗಳವರೆಗೆ ನೀಡುವುದು ಉತ್ತಮ. ತುಂಗಾ ನದಿಯಿಂದ ಅಪ್ಪರ್ ಭದ್ರಾ ಯೋಜನೆಗೆ ನೀರು ನೀಡಲು ಕ್ರಮ ಕೈಗೊಳ್ಳಬೇಕು. ಎಂಜಿನಿಯರುಗಳು ಸಭೆ ಕೈಗೊಂಡು ತುಂಗಾ ಜಲಾಶಯದಿಂದ ನೀರೆತ್ತಲು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಸಭೆಯಲ್ಲಿ ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಶಾರದಾ ಪೂರ್ಯಾನಾಯ್ಕ, ಲತಾ ಮಲ್ಲಿಕಾರ್ಜುನ್, ಬಿ.ಕೆ.ಸಂಗಮೇಶ್, ಡಿ.ಜೆ.ಶಾಂತನಗೌಡ, ಬಸವರಾಜಪ್ಪ, ಶ್ರೀನಿವಾಸ್, ಬಸವರಾಜು ಶಿವಗಂಗ, ಕಾಡಾ ಮುಖ್ಯ ಎಂಜಿನಿಯರ್ ಶಿವಾನಂದ ಬಣಕಾರ್, ಆಡಳಿತಾಧಿಕಾರಿ ಮುರಳೀಧರ್, ಅಭಿಯಂತರರು, ಅಧಿಕಾರಿಗಳು, ರೈತ ಮುಖಂಡರು ಹಾಜರಿದ್ದರು.

- - - ಕೋಟ್‌...

ಅಕ್ರಮ ಪಂಪ್‍ಸೆಟ್‍ನಿಂದ ನೀರೆತ್ತುವವರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡು ಬಿಗಿ ಮಾಡಿದಲ್ಲಿ ಎಲ್ಲ ರೈತರಿಗೆ ಅನುಕೂಲವಾಗುವುದು

- ಲಿಂಗರಾಜ್, ರೈತ ಮುಖಂಡ, ದಾವಣಗೆರೆ

- - - ನೀರು ನಿಲ್ಲಿಸಿ 90 ದಿನಗಳಾಗಿದ್ದು, ಬೆಳೆ ಉಳಿಸಿಕೊಳ್ಳಲು ತಕ್ಷಣದಿಂದ ನೀರನ್ನು ಬಿಡಬೇಕು.

- ರಘು, ರೈತ ಮುಖಂಡ.

- - - ಬಾಕ್ಸ್‌31739 ಹೆಕ್ಟೇರ್‌ ತೋಟಗಾರಿಕೆ ಉಳಿಸಿ: ಗಂಗಾಧರ್‌ ಕಟ್ಟಕಡೆಯ ಅಚ್ಚುಕಟ್ಟುದಾರರವರೆಗೆ ನೀರು ನೀಡುವ ವ್ಯವಸ್ಥೆ ಸಮರ್ಪಕವಾಗಿ ಆಗಬೇಕು. ಅಚ್ಚುಕಟ್ಟು ಪ್ರದೇಶದಲ್ಲಿ ಒಟ್ಟು 31739 ಹೆಕ್ಟೇರ್ ತೋಟಗಾರಿಕೆ ಬೆಳೆಯಿದ್ದು, ಇದನ್ನು ಉಳಿಸಿಕೊಳ್ಳಬೇಕಾಗಿದೆ. ಡಿಸ್ಚಾರ್ಜ್ ನೀರನ್ನು ನಿರ್ವಹಿಸಲು, ಅಕ್ರಮವಾಗಿ ನೀರೆತ್ತುವುದನ್ನು ನಿಲ್ಲಿಸಲು ವಾಹನ ನಿಯೋಜಿಸಬೇಕು, ಸೋಡಿಗಳನ್ನು ಮತ್ತು ಕಾನ್‌ಸ್ಟೇಬಲ್‌ನನ್ನು ನೇಮಿಸಬೇಕು ಎಂದು ರೈತ ಮುಖಂಡ ಕೆ.ಟಿ.ಗಂಗಾಧರ್ ಒತ್ತಾಯಿಸಿದರು.

ಮತ್ತು ತುಂಗಾ ಜಲಾಶಯದಿಂದ 19.5 ನೀರನ್ನು ಲಿಫ್ಟ್ ಮಾಡಿದಲ್ಲಿ ಭದ್ರಾ ಜಲಾಶಯಕ್ಕೆ ನೀರು ಉಳಿಯುತ್ತದೆ. ಆದ್ದರಿಂದ ಸಚಿವರು, ಶಾಸಕರು ಸೇರಿ ಮುಖ್ಯಮಂತ್ರಿ ಮತ್ತು ನೀರಾವರಿ ಸಚಿವರ ಬಳಿ ಈ ಬಗ್ಗೆ ಮಾತನಾಡಿ, ತುಂಗಾ ನದಿಯಿಂದ ಭದ್ರಾ ಮೇಲ್ದಂಡೆ ಯೋಜನೆಗೆ ನೀರು ನೀಡಲು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಮುಖಂಡರಾದ ತೇಜಸ್ವಿ ಪಟೇಲ್ ಮಾತನಾಡಿ, ಭದ್ರಾ ಜಲಾಶಯದಲ್ಲಿ ನೀರನ್ನು ಆನ್ ಮತ್ತು ಆಫ್ ಜೊತೆಗೆ ಡಿಸ್ಚಾರ್ಜ್ ನಿರ್ವಹಣೆ ಮಾಡಬೇಕು. ನೀರಿನ ಸಂಗ್ರಹಕ್ಕಿಂತ ಮುಖ್ಯವಾಗಿ ನಿರ್ವಹನೆ ಕಡೆ ಹೆಚ್ಚಿನ ಒತ್ತು ನೀಡಬೇಕು ಎಂದು ಹೇಳಿದರು.

- - - -6ಎಸ್‌ಎಂಜಿಕೆಪಿ01:

ಶಿವಮೊಗ್ಗದ ಮಲವಗೊಪ್ಪದಲ್ಲಿರುವ ಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಶನಿವಾರ ಏರ್ಪಡಿಸಿದ್ದ 2023-24ನೇ ಸಾಲಿನ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಾತನಾಡಿದರು.