ಜನಹಿತಕ್ಕೆ ಧಕ್ಕೆ ತರುವ ಯಾವುದೇ ಯೋಜನೆಗಳು ಮಲೆನಾಡಿಗೆ ಅಗತ್ಯವಿಲ್ಲ. ಕಾಡಂಚಿನ ಹಳ್ಳಿಗಳಿಗೆ ಮರಣ ಶಾಸನದಂತಿರುವ ಕಸ್ತೂರಿ ರಂಗನ್ ವರದಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಕಾಂಗ್ರೆಸ್ ಮುಖಂಡ ಎಂ.ಶ್ರೀಕಾಂತ್ ಹೇಳಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಜನಹಿತಕ್ಕೆ ಧಕ್ಕೆ ತರುವ ಯಾವುದೇ ಯೋಜನೆಗಳು ಮಲೆನಾಡಿಗೆ ಅಗತ್ಯವಿಲ್ಲ. ಕಾಡಂಚಿನ ಹಳ್ಳಿಗಳಿಗೆ ಮರಣ ಶಾಸನದಂತಿರುವ ಕಸ್ತೂರಿ ರಂಗನ್ ವರದಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಕಾಂಗ್ರೆಸ್ ಮುಖಂಡ ಎಂ.ಶ್ರೀಕಾಂತ್ ಹೇಳಿದರು.

ತೀರ್ಥಹಳ್ಳಿಯಲ್ಲಿ ಶನಿವಾರ ನಡೆದ ಕಸ್ತೂರಿ ರಂಗನ್ ವರದಿ ವಿರೋಧಿ ಪಾದಯಾತ್ರೆಯಲ್ಲಿ ಭಾಗವಹಿಸಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಲೆನಾಡಿನ ಜೀವನಾಡಿಯಾದ ಪಶ್ಚಿಮಘಟ್ಟ ರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ. ಆದರೆ ಆ ಪರಿಸರದ ಭಾಗವಾಗಿರುವ ರೈತರು,ಮತ್ತು ಆದಿವಾಸಿಗಳ ಬದುಕು ಅಷ್ಟೇ ಮುಖ್ಯ. ನಿವಾಸಿಗಳನ್ನು ಒಕ್ಕಲೆಬ್ಬಿಸಿ ಅವರ ಬದುಕುವ ಹಕ್ಕುಗಳನ್ನು ಕಸಿದುಕೊಳ್ಳುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮಲೆನಾಡಿನ ಜನರ ಪರವಾದ ಯಾವುದೇ ಹೋರಾಟಕ್ಕೆ ಸಿದ್ಧರಾಗಿದ್ದೇವೆ. ಕಸ್ತೂರಿ ರಂಗನ್ ವರದಿ ಈಗಿರುವಂತೆ ಜಾರಿಯಾದರೆ ಕೃಷಿ, ತೋಟಗಾರಿಕೆ, ಮನೆ ನಿರ್ಮಾಣ, ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲ ಸೌಲಭ್ಯಗಳ ಅಭಿವೃದ್ಧಿಗೆ ಅವಕಾಶ ಇರುವುದಿಲ್ಲ. ಪರಿಸರ ಸೂಕ್ಷ್ಮ ವಲಯದ ಹೆಸರಲ್ಲಿ ಆದಿವಾಸಿಗಳು, ರೈತರು, ಕೃಷಿ ಕೂಲಿ ಕಾರ್ಮಿಕರನ್ನು ಅತಂತ್ರ ಮಾಡಲು ಸರ್ಕಾರ ಬಿಡಬಾರದು. ಜಿಲ್ಲೆಯಾದ್ಯಂತ ಪಾದಯಾತ್ರೆ ಮಾಡಿ ಜನಾಂದೋಲನ ರೂಪಿಸಲಾಗುತ್ತಿದೆ. ವರದಿ ಬಗ್ಗೆ ಜನರಲ್ಲಿ ಆತಂಕವಿದ್ದು, ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ಪಶ್ಚಿಮಘಟ್ಟ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಪಕ್ಷಾತೀತಿವಾಗಿ ಬೆಂಬಲ ವ್ಯಕ್ತವಾಗುತ್ತಿದೆ. ಹಲವು ವರ್ಷಗಳಿಂದ ಕಸ್ತೂರಿ ರಂಗನ್ ವರದಿ ಹೆಸರಲ್ಲಿ ಮಲೆನಾಡಿನ ಜನರಲ್ಲಿ ಭೀತಿ ಹುಟ್ಟಿಸಲಾಗುತ್ತಿದೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಸರ್ಕಾರಗಳು ಕ್ರಮಕೈಗೊಳ್ಳಬೇಕು ಎಂದು ಶ್ರೀಕಾಂತ್ ಹೇಳಿದರು. ಬಳಿಕ ಪಾದಯಾತ್ರೆಗೆ ಬೆಂಬಲಿಸಿ ಭಾಗವಹಿಸಿದ್ದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.