ಕನ್ನಡಪ್ರಭ ವಾರ್ತೆ ಬೆಳಗಾವಿ
ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟದ್ದು, ಪಕ್ಷ ಕೈಗೊಳ್ಳುವ ತೀಮಾನಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದು ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಹೇಳಿದರು.ಬೆಳಗಾವಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಕುರಿತು ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಕಾಂಗ್ರೆಸ್ ಶಾಸಕಾಂಗ ಪಕ್ಷ (ಸಿಎಲ್ಪಿ) ಸಭೆ ಕುರಿತೂ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರವನ್ನು ನಾವು ಗೌರವಿಸುತ್ತೇವೆ ಎಂದರು.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ತಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು, ಕೇವಲ ಅಲ್ಪಸಂಖ್ಯಾತ ಸಮುದಾಯದ ಪ್ರತಿನಿಧಿಯಾಗಿ ಮಾತ್ರವಲ್ಲದೆ ಬೆಳಗಾವಿ ನಗರಕ್ಕೆ ಇದುವರೆಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂಬ ಕಾರಣಕ್ಕೂ ಅವಕಾಶ ನೀಡಬೇಕು. ಉತ್ತರ ಕರ್ನಾಟಕ ಭಾಗದಿಂದ ಅಲ್ಪಸಂಖ್ಯಾತ ಸಮುದಾಯದ ಯಾರೂ ಸಚಿವರಾಗಿಲ್ಲ. ತಮಗೆ ಸಚಿವ ಸ್ಥಾನ ನೀಡಿದರೆ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಮತ್ತಷ್ಟು ನೆರವಾಗಲಿದೆ. ಅಲ್ಪಸಂಖ್ಯಾತರ ಕೋಟಾದಡಿ ಸಚಿವ ಸ್ಥಾನ ನೀಡುವಂತೆ ಪಕ್ಷದ ನಾಯಕರಿಗೆ ಮನವಿ ಮಾಡಿದ್ದು, ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡುಬೇಕು ಎಂದರು.ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಚಿವ ಸತೀಶ್ ಜಾರಕಿಹೊಳಿ ಹೆಸರು ಕೇಳಿಬರುತ್ತಿರುವ ಕುರಿತು ಪ್ರತಿಕ್ರಿಯಿಸಿ, ಸತೀಶ ನಮ್ಮ ನಾಯಕರು. ಅವರು ಕೆಪಿಸಿಸಿ ಅಧ್ಯಕ್ಷರಾಗಬೇಕು ಎಂಬುದು ನಮ್ಮ ವೈಯಕ್ತಿಕ ಆಶಯ. ಆದರೆ, ಅಂತಿಮ ನಿರ್ಧಾರ ಹೈಕಮಾಂಡ್ದ್ದೇ ಆಗಿದ್ದು, ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.
ಸತೀಶ ಜಾರಕಿಹೊಳಿಯಂತಹ ನಾಯಕರು ಪಕ್ಷಕ್ಕಾಗಿ ನಿರಂತರವಾಗಿ ದುಡಿಯುವವರು ಬಹಳ ಕಡಿಮೆ. ಅವರಿಗೆ ಜವಾಬ್ದಾರಿ ನೀಡಿದರೆ ಪಕ್ಷ ಮತ್ತಷ್ಟು ವೇಗವಾಗಿ ಬೆಳೆಯುತ್ತದೆ. ಇದೇ ವೇಳೆ ಡಿ.ಕೆ.ಶಿವಕುಮಾರ್ ಕೂಡ ಪಕ್ಷದ ಸಂಘಟನೆಗಾಗಿ ಅಪಾರ ಶ್ರಮ ವಹಿಸಿದ್ದು, ಅವರ ಕೊಡುಗೆಯೂ ಮಹತ್ವದ್ದಾಗಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುದ್ದೆ ತೊರೆದರೆ ಅಹಿಂದ ಮತಗಳ ಮೇಲೆ ಪರಿಣಾಮ ಬೀರುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸಿದ್ದರಾಮಯ್ಯ ಕೇವಲ ಅಹಿಂದ ನಾಯಕರಲ್ಲ, ಇಡೀ ರಾಜ್ಯದ ಜನನಾಯಕರು. ಅವರ ಆಡಳಿತ ಶೈಲಿ ಮತ್ತು ಜನಪರ ಕಾರ್ಯಕ್ರಮಗಳನ್ನು ನಾವು ನೋಡಿದ್ದೇವೆ. ಅವರು ಒಬ್ಬ ಮಾಸ್ ಲೀಡರ್. ರಾಜ್ಯದ ಎಲ್ಲ ವರ್ಗಗಳ ಜನರ ನಾಯಕರು ಎಂದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಗ್ಗೆ ಮಾತನಾಡಿ, ಅವರೂ ಸಹ ಮಾಸ್ ಲೀಡರ್. ವಿಷಯಗಳನ್ನು ಸೂಕ್ಷ್ಮವಾಗಿ ಗಮನಿಸಿ, ಯೋಜಿತ ರೀತಿಯಲ್ಲಿ ಕೆಲಸ ಮಾಡುವ ನಾಯಕರು. ಅವರಿಗೆ ಅವಕಾಶ ಸಿಕ್ಕಾಗ ಉತ್ತಮ ಕೆಲಸ ಮಾಡುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.