ರಾಮನಗರ: ರಾಮನಗರ ಕ್ಷೇತ್ರದಲ್ಲಿ 25 ವರ್ಷಗಳಿಂದ ಅಧಿಕಾರದಲ್ಲಿದ್ದವರು ಮಾಡಲಾಗದ ಅಭಿವೃದ್ಧಿ ಕಾರ್ಯಗಳನ್ನು ಕೇವಲ 3 ವರ್ಷಗಳಲ್ಲಿ ಮಾಡಿ ತೋರಿಸಿದ್ದೇನೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಇಕ್ಬಾಲ್ ಹುಸೇನ್ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು

ರಾಮನಗರ: ರಾಮನಗರ ಕ್ಷೇತ್ರದಲ್ಲಿ 25 ವರ್ಷಗಳಿಂದ ಅಧಿಕಾರದಲ್ಲಿದ್ದವರು ಮಾಡಲಾಗದ ಅಭಿವೃದ್ಧಿ ಕಾರ್ಯಗಳನ್ನು ಕೇವಲ 3 ವರ್ಷಗಳಲ್ಲಿ ಮಾಡಿ ತೋರಿಸಿದ್ದೇನೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಇಕ್ಬಾಲ್ ಹುಸೇನ್ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ತಾಲೂಕಿನ ಹೊಂಬಯ್ಯನದೊಡ್ಡಿ ಗ್ರಾಮದಲ್ಲಿ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ಮುಖಂಡರನ್ನು ಸ್ವಾಗತಿಸಿ ಮಾತನಾಡಿದ ಅವರು, ಈ ಹಿಂದೆ ಶಾಸಕರಾಗಿದ್ದವರು ಕೇವಲ ತಮ್ಮ ಸ್ವಾರ್ಥಕ್ಕಾಗಿ ರಾಜಕಾರಣ ಮಾಡಿದರು. ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದರೂ ಕ್ಷೇತ್ರದ ಅಭಿವೃದ್ಧಿ ಕಡೆಗಣಿಸಿದರು. ಆದರೆ, ನಾನು ಶಾಸಕನಾದ ಮೇಲೆ ರಸ್ತೆ, ಚರಂಡಿ, ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಮೂಲಸೌಕರ್ಯ ಕಲ್ಪಿಸಲು ಒತ್ತು ನೀಡಿದ್ದೇನೆ ಎಂದರು. ಅಭಿವೃದ್ಧಿಕೆ ಕ್ರಮ ಕೈಗೊಂಡಿದ್ದೇನೆ ಎಂದರು.

ಸಿ.ಎಂ.ಲಿಂಗಪ್ಪರವರು ಶಾಸಕರಾಗಿದ್ದ ವೇಳೆ ಸೂರಿಲ್ಲದವರಿಗೆ ನಿವೇಶನ ಹಾಗೂ ಬಗರ್ ಹುಕುಂ ಸಾಗುವಳಿದಾರರಿಗೆ ಉಳುಮೆ ಚೀಟಿ ನೀಡಿದ್ದರು. ಆನಂತರ 25 ವರ್ಷಗಳ ಅವಧಿಯಲ್ಲಿ ಒಬ್ಬನೇ ಒಬ್ಬ ಬಡವನಿಗೆ ನಿವೇಶನ, ರೈತರಿಗೆ ಸಾಗುವಳಿ ಚೀಟಿ ನೀಡಿಲ್ಲ. ಇಷ್ಟಾದರೂ ತಾವು ಮಣ್ಣಿನ ಮಕ್ಕಳೆಂದು ಹೇಳಿಕೊಂಡು ಕಣ್ಣೀರು ಹಾಕುತ್ತಾರೆ ಎಂದು ಟೀಕಿಸಿದರು.

ಈಗ 10 ಸಾವಿರ ನಿವೇಶನ ಹಂಚಲು 300 ಎಕರೆ ಜಾಗ ಗುರುತಿಸಲಾಗಿದೆ. ಈಗಾಗಲೇ ಸೂರಿಲ್ಲದ ಕಡುಬಡವರನ್ನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದ್ದು, ಮುಂಬರುವ 3 -4 ತಿಂಗಳಲ್ಲಿ ನಿವೇಶನ ಹಂಚಲಾಗುವುದು. ಬಗರ್‌ಹುಕುಂ ಸಾಗುವಳಿದಾರರ ಜಮೀನುಗಳ ಸ್ಥಳ ಪರಿಶೀಲನೆ ನಡೆಸುತ್ತಿದ್ದು, ಶೀಘ್ರದಲ್ಲಿಯೇ ಉಳುಮೆ ಚೀಟಿ ನೀಡಲಾಗುವುದು ಎಂದರು.

ಕಳೆದ ಮೂರು ದಶಕಗಳಿಂದ ಜೆಡಿಎಸ್ ಪಕ್ಷದಲ್ಲಿ ದುಡಿದವರು ಸೂಕ್ತ ಸ್ಥಾನಮಾನ ದೊರೆಯದ ಹಿನ್ನೆಲೆ ಹಾಗೂ ತಮ್ಮ ಗ್ರಾಮಗಳ ಅಭಿವೃದ್ಧಿ ಆಗದಿರುವುದರಿಂದ ಬೇಸತ್ತು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ. ಸಮ ಸಮಾಜದ ನಿರ್ಮಾಣ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ರವರ ಕೈ ಬಲಪಡಿಸಲು ಯುವಕರು ಕಾಂಗ್ರೆಸ್ ಪಕ್ಷವನ್ನು ಸೇರುವಂತೆ ಇಕ್ಬಾಲ್ ಹುಸೇನ್ ಮನವಿ ಮಾಡಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕೆ.ರಾಜು ಮಾತನಾಡಿ, ಈ ಹಿಂದೆ ಶಾಸಕರಾಗಿದ್ದವರ ನಿರ್ಲಕ್ಷ್ಯದಿಂದ ಕ್ಷೇತ್ರವು ಅಭಿವೃದ್ಧಿಯಲ್ಲಿ ಹಿಂದುಳಿದಿತ್ತು. ಆದರೀಗ ಇಕ್ಬಾಲ್ ಹುಸೇನ್ ಶಾಸಕರಾದ ನಂತರ ಅಭಿವೃದ್ಧಿ ಪರ್ವ ಪ್ರಾರಂಭಗೊಂಡಿದೆ. ಇದನ್ನು ಮೆಚ್ಚಿದ ಅನ್ಯಪಕ್ಷಗಳ ಮುಖಂಡರು ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗುತ್ತಿದ್ದಾರೆ. ಇದು ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ ಎಂದು ಹೇಳಿದರು.

ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎ.ಬಿ.ಚೇತನ್‌ಕುಮಾರ್ ಮಾತನಾಡಿ, ಈ ಹಿಂದೆ ಶಾಸಕರನ್ನು ನೋಡಲು ಬೆಂಗಳೂರಿಗೆ ಹೋಗಬೇಕಿತ್ತು. ಈಗ ಶಾಸಕರು ನಿಮ್ಮ ಮನೆ ಬಾಗಿಲಿಗೇ ಆಗಮಿಸಿ, ನಿಮ್ಮ ಸಮಸ್ಯೆಗಳನ್ನು ಆಲಿಸಿ, ಅವುಗಳನ್ನು ಬಗೆಹರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮತ್ತಷ್ಟು ಯುವಕರು ಕಾಂಗ್ರೆಸ್ ಪಕ್ಷ ಸೇರುವ ಮೂಲಕ ಶಾಸಕರ ಕೈ ಬಲಪಡಿಸಬೇಕು ಎಂದು ಮನವಿ ಮಾಡಿದರು.

ಹೊಂಬಯ್ಯನದೊಡ್ಡಿ ಗ್ರಾಮದ ಮಾದೇವ್ , ಶಂಕರ್, ವಿಜಿ, ಬಾಲು, ಪ್ರಸನ್ನ, ಗುರುಸ್ವಾಮಿ, ಕುಮಾರ್, ಗುರುಸ್ವಾಮಿ, ಪ್ರೇಮ್ ಕುಮಾರ್, ಚಿನ್ನಗಿರಿ, ಸಂತೋಷ್ ಸೇರಿದಂತೆ 20 ಕ್ಕೂ ಹೆಚ್ಚು ಮಂದಿ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಿದರು.

ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ರೈಡ್ ನಾಗರಾಜ್, ನಗರಸಭೆ ಮಾಜಿ ಅಧ್ಯಕ್ಷ ರವಿಕುಮಾರ್, ನಗರಸಭೆ ಸದಸ್ಯ ಬೈರೇಗೌಡ, ಎನ್ ಎಸ್ ಯುಐ ಕಾಂಗ್ರೆಸ್ ಉಪಾಧ್ಯಕ್ಷ ವಿನೋದ್, ಬಿಳಗುಂಬ ಗ್ರಾಪಂ ಮಾಜಿ ಅಧ್ಯಕ್ಷ ಪಾಪಣ್ಣ, ಮಾಜಿ ಸದಸ್ಯ ವೆಂಕಟೇಶ್ ಮತ್ತಿತರರು ಹಾಜರಿದ್ದರು.

---------------------------

9ಕೆಆರ್ ಎಂಎನ್ 6.ಜೆಪಿಜಿ

ರಾಮನಗರ ತಾಲೂಕಿನ ಹೊಂಬಯ್ಯನದೊಡ್ಡಿ ಗ್ರಾಮದಲ್ಲಿ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ಮುಖಂಡರನ್ನು ಶಾಸಕ ಇಕ್ಬಾಲ್ ಹುಸೇನ್ ಬರ ಮಾಡಿಕೊಂಡರು.

-----------------------------