ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ವಿದೇಶಿ ಆಡಳಿತದಿಂದ ಸ್ವಾತಂತ್ರ್ಯ ಪಡೆದರೆ ಮಾತ್ರ ಸಾಲದು ನಮ್ಮಲ್ಲಿರುವ ನ್ಯೂನತೆಗಳು, ಭಯ, ಆತಂಕ ಮತ್ತು ಅಂಜಿಕೆಗಳಿಂದಲೂ ನಾವು ಸ್ವತಂತ್ರರಾಗಬೇಕು ಎಂದು ಜಮ್ಮು-ಕಾಶ್ಮೀರದಲ್ಲಿ ಸೇವೆ ಸಲ್ಲಿಸಿದ್ದ ನಿವೃತ್ತ ಹವಾಲ್ದಾರ್ ಮೇಜರ್ ಕೆ.ಎಸ್.ಶಿವಕುಮಾರ್ ಕರೆ ನೀಡಿದರು.

ಭಾರತೀ ಶಿಕ್ಷಣ ಸಂಸ್ಥೆಯ ಅಂಗಸಂಸ್ಥೆಗಳ ಆಶ್ರಯದಲ್ಲಿ ಭಾರತೀ ಕ್ರೀಡಾಂಗಣದಲ್ಲಿ ಶನಿವಾರ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಎಂಬುದು ಕೇವಲ ಆಚರಣೆಗೆ ಸೀಮಿತವಾಗದೆ ನಮ್ಮ ನಡೆ-ನುಡಿ ಹಾಗೂ ಕಾರ್ಯಚಟುವಟಿಕೆಗಳಲ್ಲಿ ಪ್ರತಿಫಲಿಸಬೇಕು ಎಂದರು.

ವಿಧಾನ ಪರಿಷತ್ ಸದಸ್ಯ, ಸಂಸ್ಥೆ ಅಧ್ಯಕ್ಷ ಮಧು ಜಿ.ಮಾದೇಗೌಡ ಮಾತನಾಡಿ, ಸ್ವಾತಂತ್ರ್ಯ ದೊರೆತಿದ್ದರೂ ಸಮಾಜದ ವಿವಿಧ ವರ್ಗಗಳಿಗೆ ಇನ್ನೂ ಹಲವು ಕ್ಷೇತ್ರಗಳಲ್ಲಿ ಸಂಪೂರ್ಣ ಸ್ವಾತಂತ್ರ್ಯ ಮತ್ತು ಸಮಾನ ಅವಕಾಶಗಳು ದೊರೆಯಬೇಕಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗೂಡಿ ಕಾರ್ಯನಿರ್ವಹಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಸಂಸ್ಥೆ ಕಾರ್ಯದರ್ಶಿ ಬಿ.ಎಂ.ನಂಜೇಗೌಡ ಅಧ್ಯಕ್ಷತೆ ವಹಿಸಿದ್ದರು. ಭಾರತೀ ಎಜುಕೇಷನ್‌ ಟ್ರಸ್ಟ್‌ನ ಅಂಗಸಂಸ್ಥೆಗಳ ವಿದ್ಯಾರ್ಥಿಗಳು ದೇಶಭಕ್ತಿ ಗೀತೆ, ಭಾಷಣ, ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತ ಪಡಿಸಿದರು.


ಭಾರತೀ ಸ್ಕೂಲ್ ಆಫ್ ಎಕ್ಸಲೆನ್ಸ್‌ನ ಕಿರಿಯ ಕಿಡ್ಜೀ ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರ ವೇಷಭೂಷಣ ಧರಿಸಿ ನೀಡಿದ ಪ್ರದರ್ಶನ ಗಮನ ಸೆಳೆಯಿತು. ಟ್ರಸ್ಟ್‌ನ ವಿವಿಧ ಅಂಗ ಸಂಸ್ಥೆಗಳಲ್ಲಿ ಶಿಕ್ಷಣ, ಕ್ರೀಡೆ, ಕಲೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನ ಸನ್ಮಾನಿಸಿ ಗೌರವಿಸಲಾಯಿತು. ಪಥಸಂಚಲನದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಜಿ. ಮಾದೇಗೌಡ ಫಿಸಿಯೋಥೆರಪಿ ಕಾಲೇಜು ಪ್ರಥಮ ಸ್ಥಾನ ಪಡೆದು ರೋಲಿಂಗ್ ಟ್ರೋಫಿ ತನ್ನದಾಗಿಸಿಕೊಂಡಿತು. ಭಾರತೀ ಸ್ಕೂಲ್ ಆಫ್ ಎಕ್ಸಲೆನ್ಸ್ ದ್ವಿತೀಯ ಹಾಗೂ ಬಿ.ಇ.ಟಿ. ಪಾಲಿಟೆಕ್ನಿಕ್ ಕಾಲೇಜು ತೃತೀಯ ಸ್ಥಾನ ಪಡೆದು ರೋಲಿಂಗ್ ಟ್ರೋಫಿ ಸ್ವೀಕರಿಸಿದವು.

ಕಾರ್ಯಕ್ರಮದಲ್ಲಿ ಭಾರತೀ ಹೆಲ್ತ್ ಸೈನ್ಸಸ್ ನಿರ್ದೇಶಕ ಡಾ.ತಮಿಳ್‌ಮಣಿ, ಭಾರತೀ ಸ್ನಾತಕೋತ್ತರ ವಿಭಾಗದ ನಿರ್ದೇಶಕ ಪ್ರೊ.ಎಸ್.ನಾಗರಾಜು, ವಿವಿಧ ಅಂಗಸಂಸ್ಥೆಗಳ ಮುಖ್ಯಸ್ಥರಾದ ಡಾ.ಎಂ.ಎಸ್.ಮಹದೇವಸ್ವಾಮಿ, ಡಾ.ಚಂದನ್, ಡಾ.ಎಸ್.ಎಲ್.ಸುರೇಶ್, ಜಿ.ಕೃಷ್ಣ, ಸಿ.ವಿ.ಮಲ್ಲಿಕಾರ್ಜುನ, ಪುಟ್ಟಸ್ವಾಮಿ, ನಂದಾ ಯಲಮಲಿ, ಡಾ.ಬಾಲಸುಬ್ರಹ್ಮಣ್ಯ, ಡಾ.ಮಂಜು ಜೇಕಬ್, ಡಾ.ಮಹೇಶ್ ಕುಮಾರ್ ಲೋನಿ, ಜಿ.ಬಿ.ಪಲ್ಲವಿ, ಸಿ. ರಮ್ಯಾ, ಜಗದೀಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.