ಹಾವೇರಿ: ಸರ್ಕಾರದ ಸಾಧನಾ ಸಮಾವೇಶ ಮಾಡುತ್ತಿರುವುದು ಸಾವಿರ ದಿನಾಚರಣೆಯ ಮೈಲಿಗಲ್ಲು ಅಲ್ಲ. ದೇಶದ ಬಡವರು, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ಮುಂದುವರೆಸಲು. ಇಲ್ಲಿಯವರೆಗೆ ಕೊಟ್ಟ ಮಾತಿನಂತೆ ಸಮ್ಮ ಸರ್ಕಾರ ನಡೆದುಕೊಳ್ಳುತ್ತಿದ್ದು, ಮುಂದೆಯೂ ನಡೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಹೊಟ್ಟೆಕಿಚ್ಚಿನಿಂದ ಸಮಾವೇಶವನ್ನು ವಿರೋಧಿಸುತ್ತಿದ್ದಾರೆ. ಅವರು ಅಧಿಕಾರದಲ್ಲಿದ್ದ ನಾಲ್ಕು ವರ್ಷಗಳ ಕಾಲ ಏನೂ ಮಾಡಿರಲಿಲ್ಲ ಎಂದು ಮೂದಲಿಸಿದರು.ನಮ್ಮನ್ನು ಟೀಕಿಸಲು ಬಿಜೆಪಿಗೆ ನೈತಿಕ ಹಕ್ಕಿಲ್ಲ. ನಾಲ್ಕು ವರ್ಷಗಳಲ್ಲಿ ಅವರು ಏನು ಮಾಡಿದ್ದಾರೆ? 2018ರಲ್ಲಿ 600 ಭರವಸೆಗಳನ್ನು ಕೊಟ್ಟಿದ್ದರು. ಅದರಲ್ಲಿ ಶೇ.10ರಷ್ಟು ಈಡೇರಿಸಲಿಲ್ಲ. ನಾವು ನೀಡಿದ್ದ 592 ಭರವಸೆಗಳಲ್ಲಿ 243 ಭರವಸೆಗಳನ್ನು ಎರಡೂವರೆ ವರ್ಷಗಳಲ್ಲಿ ಈಡೇರಿಸಿದ್ದೇವೆ. ಉಳಿದವನ್ನು ಈಡೇರಿಸಲು ಪ್ರಯತ್ನಿಸುತ್ತೇವೆ ಎಂದರು.

ವರಿಷ್ಠರ ನಿರ್ಧಾರಕ್ಕೆ ಬದ್ಧ: ಅಧಿಕಾರ ಹಂಚಿಕೆಯ ಕುರಿತು ಪ್ರತಿಕ್ರಿಯಿಸಿದ ಅವರು, ಪಕ್ಷದ ವರಿಷ್ಠರ ತೀರ್ಮಾನದಂತೆ ನಡೆದುಕೊಳ್ಳಲಾಗುವುದು ಎಂದು ಈಗಾಗಲೇ ತಿಳಿಸಲಾಗಿದೆ. ವರಿಷ್ಠರು ಹೇಳಿದ್ದನ್ನು ಪಕ್ಷದ ಎಲ್ಲರೂ ಕೇಳಬೇಕು ಎಂದರು.

ಶಾಸಕರು ಈ ಬಗ್ಗೆ ಮಾಡಿರುವ ಟ್ವೀಟ್ ಕುರಿತಾಗಿ ಮಾಧ್ಯಮಗಳ ಪ್ರಶ್ನೆಗೆ ಗರಂ ಆಗಿಯೇ ಪ್ರತಿಕ್ರಿಯಿಸಿದ ಅವರು, ಪಕ್ಷದ ವರಿಷ್ಠರು ಮಾತನಾಡಿದ್ದಾರೆಯೇ? ಕೇಳಿದ್ದನ್ನೇ ಎಷ್ಟು ಸಲ ಕೇಳುತ್ತೀರಿ ನೀವು ಎಂದು ಪ್ರಶ್ನಿಸಿದರು. ಹೈಕಮಾಂಡ್ ಶಿವರಾತ್ರಿಯ ಆನಂತರ ಬದಲಾವಣೆ ಎಂದು ಹೇಳಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ದೆಹಲಿಗೆ ಕರೆದಾಗ ಹೋಗುವುದಾಗಿ ತಿಳಿಸಿ, ಅಧಿಕಾರ ಹಂಚಿಕೆಯ ಬಗ್ಗೆ ಈಗಾಗಲೇ ಉತ್ತರಿಸಿದ್ದು, ಈ ಬಗ್ಗೆ ಪದೇ ಪದೇ ಪ್ರಶ್ನೆ ಕೇಳಬೇಡಿ ಎಂದು ಗರಂ ಆದರು. ಬೇಡ್ತಿ-ವರದಾ ನದಿ ಜೋಡಣೆ ಬಗ್ಗೆ ಉತ್ತರ ಕನ್ನಡ ಜನತೆ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿ, ಈ ಬಗ್ಗೆ ಡಿಪಿಆರ್‌ನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಾಗಿದ್ದು, ಅವರು ತೀರ್ಮಾನ ಕೈಗೊಳ್ಳಬೇಕಾಗಿದೆ. ಕೇಂದ್ರ ಸರ್ಕಾರ ಯಾವುದರ ಬಗ್ಗೆಯೂ ತೀರ್ಮಾನ ಮಾಡುತ್ತಿಲ್ಲ. ಹಾಗಾಗಿ ನಮಗೆ ಅವರು ತೀರ್ಮಾನ ಕೈಗೊಳ್ಳುವ ಬಗ್ಗೆ ಭರವಸೆಯಾಗಲಿ, ನಂಬಿಕೆಯಾಗಲಿ ಇಲ್ಲ ಎಂದರು.