ಕನ್ನಡಪ್ರಭ ವಾರ್ತೆ ದೇವನಹಳ್ಳಿ

ಜೆಡಿಎಸ್ ಪಕ್ಷದ ಬೆನ್ನೆಲುಬು ಕಾರ್ಯಕರ್ತರು, ಆದ್ದರಿಂದ ಎಲ್ಲಾ ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು ಪಕ್ಷವನ್ನು ತಳಮಟ್ಟದಿಂದ ಬಲಪಡಿಸಿ ಮುಂದಿನ ಚುನಾವಣೆಗಳನ್ನು ಎದುರಿಸುತ್ತೇವೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ವಿ.ಮಂಜುನಾಥ್ ತಿಳಿಸಿದರು.

ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಜೆಡಿಎಸ್ ಪಕ್ಷ ಸಂಘಟನೆ, ಪದಾಧಿಕಾರಿಗಳ ಪುನರ್ ರಚನೆ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮುಂಬರುವ ಸ್ಥಳೀಯ ಚುನಾವಣೆಗಳಿಗೆ ಪಕ್ಷವನ್ನು ಬಲಪಡಿಸಲು ಪಕ್ಷದ ವರಿಷ್ಠರು ನನಗೆ ಜವಾಬ್ದಾರಿ ನೀಡಿದ್ದಾರೆ. ಹಾಗಾಗಿ ಪ್ರತಿ ಹೋಬಳಿ ಮಟ್ಟದಲ್ಲಿ ಕಾರ್ಯಕರ್ತರ ಸಭೆ ಕರೆದು, ಅವರ ಸಮಸ್ಯೆಗಳನ್ನು ಆಲಿಸಿ ಪಕ್ಷ ಸುಭದ್ರವಾಗಿ ಕಟ್ಟಲು ಬೇಕಾದ ವಾತಾವರಣ ನಿರ್ಮಾಣ ಮಾಡಲಾಗುವುದು. ಸರ್ಕಾರದ ವೈಫಲ್ಯಗಳನ್ನು ಎತ್ತಿಹಿಡಿದು ಸರ್ಕಾರಕ್ಕೆ ಜಾಟಿ ಬೀಸುವ ಕೆಲಸ ಮಾಡುತ್ತೇವೆ ಎಂದರು.

ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ, ನಾನು ಶಾಸಕನಾದಾಗಿನಿಂದಲೂ ಪಕ್ಷದ ನಾಯಕರನ್ನು ಅಣ್ಣ- ತಮ್ಮಂದಿರಂತೆ ಕಾಣುತ್ತಿದ್ದೇನೆ. ಪಕ್ಷದಲ್ಲಿನ ಸಣ್ಣ ಪುಟ್ಟ ಬಿನ್ನಾಭಿಪ್ರಾಯಗಳನ್ನು ನೂತನ ಜಿಲ್ಲಾಧ್ಯಕ್ಷರು ಸಮರ್ಥರಾಗಿದ್ದು, ಎಲ್ಲವನ್ನೂ ಸರಿಪಡಿಸಲಿದ್ದಾರೆ. ಮುಂಬರುವ ಗ್ರಾಪಂ ಮತ್ತು ಜಿಪಂ ಚುನಾವಣೆಗಳಲ್ಲಿ ಸರ್ಕಾರದ ವೈಫಲ್ಯ ಹಾಗೂ ಕುಮಾರಸ್ವಾಮಿ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಜನರ ಮುಂದಿಟ್ಟು, ಪಕ್ಷದ ಕಾರ್ಯಕರ್ತರನ್ನು ಒಗ್ಗೂಡಿಸಿ, ಪ್ರತಿ ಹೋಬಳಿಯಲ್ಲೂ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಪಕ್ಷ ಬಲಪಡಿಸುತ್ತೇವೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಎನ್ಡಿಎ ನಾಯಕರು ಮೈತ್ರಿ ಪಕ್ಷದ ಅಭ್ಯರ್ಥಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆಮಾಡುತ್ತಾರೆಂಬ ಭರವಸೆಯನ್ನು ಇಟ್ಟುಕೊಂಡಿದೇವೆ. ಬಿಜೆಪಿಯವರೂ ಸಹ ಎಚ್ ಡಿಕೆಯವರನ್ನು ಬೆಂಬಲಿಸಲಿದ್ದಾರೆ. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಕಾರ್ಯಕರ್ತರನ್ನು ಬೆಳೆಸುವುದೇ ನನ್ನ ಉದ್ದೇಶ, ಅದು ಸಫಲವಾಗಲಿದೆಎಂದರು.

ಜೆಡಿಎಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಜಿ.ಎ.ರವೀಂದ್ರ, ತೆಂಗು ಮತ್ತು ನಾರು ನಿಗಮ ಮಂಡಳಿ ಮಾಜಿ ಅಧ್ಯಕ್ಷ ಬಾಬು, ಬಮುಲ್‌ನ ಮಾಜಿ ನಿರ್ದೇಶಕ ಶ್ರೀನಿವಾಸ್, ನಾರಾಯಣಸ್ವಾಮಿ, ರಾಜ್ಯಸಮಿತಿ ಸದಸ್ಯ ಶ್ರೀನಾಥ್, ಕುಂದಾಣ ಹೋಬಳಿ ಅಧ್ಯಕ್ಷ ಜಗದೀಶ್, ಟೌನ್ ಅಧ್ಯಕ್ಷ ಮುನಿನಂಜಪ್ಪ, ಎಸ್.ಟಿ ಘಟಕದ ಅಧ್ಯಕ್ಷ ವೆಂಕಟೇಶ್ ಮೂರ್ತಿ, ಯುವಘಟಕದ ಅಧ್ಯಕ್ಷ ಹೊಸಹಳ್ಳಿ ಟಿ.ರವಿ, ಮಹಿಳಾ ಘಟಕದ ಅಧ್ಯಕ್ಷೆ ಮೀನಾಕ್ಷಿ ಮುನಿಕೃಷ್ಣ, ಮುಖಂಡರಾದ ಗುರಪ್ಪ, ಪಟಾಲಪ್ಪ, ಮುನಿರಾಜು, ವೆಂಕಟೇಶ್, ದೇವರಾಜ್, ಸುಬ್ಬಣ್ಣ, ಹನುಮಣ್ಣ, ಶಿವಣ್ಣ, ರಾಜಣ್ಣ, ಮುದ್ದಣ್ಣ, ವೆಂಕಟೇಶ್, ಬಸವರಾಜ್, ಹರ್ಷವರ್ದನ್ ಮತ್ತಿತರರು ಇದ್ದರು.