ಸಾರಾಂಶ
ವಿರಾಜಪೇಟೆ : ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ಸರ್ಕಾರದ ನಿರ್ಧಾರವನ್ನು ಸ್ವಾಗತ ಮಾಡುತ್ತೇನೆ ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ.
ವಿರಾಜಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾನು ಮುಷ್ತಾಕ್ ಅವರು ಖ್ಯಾತ ಬರಹಗಾರ್ತಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಹಿತ್ಯ ಪ್ರಶಸ್ತಿ ಸ್ವೀಕರಿಸಿದ್ದಾರೆ. ಜೊತೆಗೆ ಸಾಮಾಜಿಕ ಹೋರಾಟದಲ್ಲಿ ಗುರುತಿಸಿಕೊಂಡಿದ್ದಾರೆ. ಮುಸ್ಲಿಂ ಮಹಿಳೆಯರಿಗೆ ಸಮಾನವಾದ ಹಕ್ಕು ಕೊಡಬೇಕು. ಮಸೀದಿಗಳಿಗೆ ಅವಕಾಶ ಕೊಡಬೇಕು ಎಂದು ಬಾನು ಮುಷ್ತಾಕ್ ಅವರು ಈ ಹಿಂದೆ ಸಾಮಾಜಿಕ ಬಹಿಷ್ಕಾರವನ್ನು ಕೂಡ ಎದುರಿಸಿದ್ದರು ಎಂದಿದ್ದಾರೆ.
ಕನ್ನಡ ಭಾಷೆ, ಕನ್ನಡ ಸಾಹಿತ್ಯಕ್ಕಾಗಿ ಅವರು ಕೊಟ್ಟಿರುವ ಕೊಡುಗೆಗಳು ಅಪಾರವಾಗಿದೆ. ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದನ್ನು ಸ್ವಾಗತ ಮಾಡುತ್ತೇನೆ ಎಂದು ಹೇಳಿದ್ದಾರೆ.
ಇನ್ನೂ ಈ ಬಗ್ಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸರ್ಕಾರಿ ಕಾರ್ಯಕ್ರಮದಲ್ಲಿ ಪೂಜೆ ಮಾಡುವುದು ಇಲ್ಲವೇ ಇಲ್ಲ. ಇದು ಜಾತ್ಯತೀತ ವ್ಯವಸ್ಥೆಯಾಗಿದೆ. ಧಾರ್ಮಿಕ ಪೂಜೆಗಳನ್ನು ನಾವು ವೈಯಕ್ತಿಕವಾಗಿ ಮನೆಯಲ್ಲಿ ಮಾಡಿಕೊಳ್ಳುತ್ತೇವೆ. ಸರ್ಕಾರಕ್ಕೆ ಇದೊಂದು ಉತ್ಸವ. ಅವರ ಆಯ್ಕೆ ಬಗ್ಗೆ ನನ್ನ ವಿರೋಧವಿಲ್ಲ ಎಂದಿದ್ದಾರೆ.