ಐಗೂರು ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ರಥಕ್ಕೆ ಸ್ವಾಗತ

| Published : Feb 04 2024, 01:30 AM IST

ಐಗೂರು ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ರಥಕ್ಕೆ ಸ್ವಾಗತ
Share this Article
  • FB
  • TW
  • Linkdin
  • Email

ಸಾರಾಂಶ

ಐಗೂರು ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ರಥವನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಸಾಗಿ ಸಂವಿಧಾನ ಘೋಷವಾಕ್ಯದೊಂದಿಗೆ ಶೋಭಾಯಾತ್ರೆ ನಡೆಸಲಾಯಿತು.

ಕನ್ನಡಪ್ರಭವಾರ್ತೆ ಸೋಮವಾರಪೇಟೆ

ತಾಲೂಕಿನ ಐಗೂರು ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ರಥಕ್ಕೆ ಸರ್ಕಾರಿ ಪದವಿಪೂರ್ವ ಕಾಲೇಜು, ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆ ಎದುರು ಸ್ವಾಗತಿಸಲಾಯಿತು.ಸಂವಿಧಾನ ಜಾಗೃತಿ ರಥದೊಂದಿಗೆ ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಸಾಗಿ ಸಂವಿಧಾನ ಘೋಷವಾಕ್ಯದೊಂದಿಗೆ ಶೋಭಾಯಾತ್ರೆ ನಡೆಸಿದರು.

ನಂತರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿನು ಮಾತನಾಡಿ, ಭಾರತದಲ್ಲಿ ಲಿಖಿತ ಸಂವಿಧಾನ ಇದ್ದು ಜನರು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ನಮ್ಮ ಹಕ್ಕು ಮತ್ತು ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದು ಕರೆ ನೀಡಿದರು. ಐಗೂರು ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಹೆಚ್.ಕೆ.ಉಮೇಶ್ ಮಾತನಾಡಿ, ಸಂವಿಧಾನದಲ್ಲಿ ಸರ್ವರಿಗೂ ಸಮಪಾಲು ಸಮಬಾಳು ನೀತಿ ಇದೆ. ಸಹಬಾಳ್ವೆಯ ಮೂಲಕ ಜೀವನ ನಡೆಸಿದರೆ ಮಾತ್ರ ಸಮಾಜದಲ್ಲಿ ಶಾಂತಿ ನೆಲೆಸುವುದರೊಂದಿಗೆ ಸಂವಿಧಾನದ ಆಶಯಗಳಿಗೆ ನಾವುಗಳು ಗೌರವ ನೀಡಿದಂತಾಗುತ್ತದೆ ಎಂದರು.

ಗ್ರಾಮ ಪಂಚಾಯಿತಿ ಸದಸ್ಯರು, ಮುಖ್ಯ ಶಿಕ್ಷಕ ಯಶ್ವಂತ್ ಕುಮಾರ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜು ಇದ್ದರು.

------

ಸಂವಿಧಾನ ಜಾಗೃತಿ ಜಾಥಾ ಇಂದು ಸೋಮವಾರಪೇಟೆಗೆ ಆಗಮನ

ಸಂವಿಧಾನ ಜಾಗೃತಿ ಜಾಥಾ ಫೆ. 4ರಂದು ಬೆಳಗ್ಗೆ 9 ಕ್ಕೆ ಪಟ್ಟಣಕ್ಕೆ ಆಗಮಿಸಲಿದೆ.ಕಕ್ಕೆಹೊಳೆ ಬಳಿಯಲ್ಲಿ ಜಾಥಾವನ್ನು ಬರಮಾಡಿಕೊಂಡು ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಮುಖ್ಯ ರಸ್ತೆಗಳಲ್ಲಿ ಮೆರವಣಿಗೆಯ ನಂತರ ಜೇಸಿ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ನಡೆಸಲಾಗುವುದು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.