ಪಶ್ಚಿಮ ಪದವೀಧರ ಕ್ಷೇತ್ರದ ಆಕಾಂಕ್ಷಿಗಳ ಸಭೆ

| Published : Oct 24 2025, 01:00 AM IST

ಸಾರಾಂಶ

15ಕ್ಕೂ ಹೆಚ್ಚು ಆಕಾಂಕ್ಷಿತರು ಅರ್ಜಿ ನೀಡಿದ್ದಾರೆ. ಆಕಾಂಕ್ಷಿತರಿಗೆ ಲಕ್ಷಕ್ಕೂ ಹೆಚ್ಚು ಜನರ ನೋಂದಣಿ ಮಾಡುವ ಗುರಿ ನೀಡಿದ್ದೇವೆ. ಇಲ್ಲಿ ಪಡೆದ ವರದಿ ಹೈಕಮಾಂಡ್‌ಗೆ ಸಲ್ಲಿಸಲಾಗುವುದು ಎಂದು ಸಿ.ಟಿ. ಹೇಳಿದ್ದಾರೆ.

ಹುಬ್ಬಳ್ಳಿ:

ವಿಧಾನಪರಿಷತ್‌ ಅವಧಿ ಮುಗಿದಿರುವ ಐದು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಗುರುವಾರ ಇಲ್ಲಿನ ಅರವಿಂದ ನಗರದ ಬಿಜೆಪಿ ಕಚೇರಿಯಲ್ಲಿ ಆಕಾಂಕ್ಷಿಗಳು, ಕಾರ್ಯಕರ್ತರು ಮತ್ತು ಮುಖಂಡರಿಂದ ಅಭಿಪ್ರಾಯ ಸಂಗ್ರಹ ಸಭೆ ನಡೆಯಿತು.

ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು, ಸಂಸದರಾದ ಗೋವಿಂದ ಕಾರಜೋಳ, ವಿಶ್ವೇಶ್ವರ ಹೆಗಡೆ ಕಾಗೇರಿ, ವಿಪ ಸದಸ್ಯ ಸಿ.ಟಿ. ರವಿ, ಮಾಜಿ ಶಾಸಕರಾದ ಬಿ.ಸಿ. ಪಾಟೀಲ, ಅಮೃತ ದೇಸಾಯಿ. ಸೀಮಾ ಮಸೂತಿ, ಡಾ. ಕ್ರಾಂತಿಕಿರಣ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಹಾಲಿ-ಮಾಜಿ ಶಾಸಕರು ಭಾಗವಹಿಸಿದ್ದರು.

ಈ ವೇಳೆ ನಾಯಕರು ಆಕಾಂಕ್ಷಿಗಳಿಂದ ಅರ್ಜಿ ಸ್ವೀಕರಿಸಿದರು. ಸಭೆಯಲ್ಲಿ 15 ಜನ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಮುಖಂಡರು ಕಾರ್ಯಕರ್ತರಿಂದಲೂ ಯಾರನ್ನು ಆಯ್ಕೆ ಮಾಡಬಹುದು ಎನ್ನುವ ಕುರಿತಂತೆ ಮಾಹಿತಿ ಸಂಗ್ರಹಿಸಿದ್ದಾರೆ. ತುಮಕೂರು ಮತ್ತು ಕಲಬುರಗಿಯಲ್ಲಿ ಸಭೆ ನಡೆದ ನಂತರ ರಾಷ್ಟ್ರೀಯ ನಾಯಕರಿಗೆ ವರದಿ ಸಲ್ಲಿಸಲಿದ್ದಾರೆ. ಬಳಿಕ ಹೈಕಮಾಂಡ್‌ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದೆ.

ಸಭೆ ಬಳಿಕ ವಿಪ ಸದಸ್ಯ ಸಿ.ಟಿ. ರವಿ ಮಾತನಾಡಿ, 15ಕ್ಕೂ ಹೆಚ್ಚು ಆಕಾಂಕ್ಷಿತರು ಅರ್ಜಿ ನೀಡಿದ್ದಾರೆ. ಆಕಾಂಕ್ಷಿತರಿಗೆ ಲಕ್ಷಕ್ಕೂ ಹೆಚ್ಚು ಜನರ ನೋಂದಣಿ ಮಾಡುವ ಗುರಿ ನೀಡಿದ್ದೇವೆ. ಇಲ್ಲಿ ಪಡೆದ ವರದಿ ಹೈಕಮಾಂಡ್‌ಗೆ ಸಲ್ಲಿಸಲಾಗುವುದು ಎಂದು ತಿಳಿಸಿದರು.