ಕೇಂದ್ರ ಸರ್ಕಾರದ 2 ಕೋಟಿ ಉದ್ಯೋಗ ಎಲ್ಲಿದೆ: ಜೆಪಿ ಹೆಗ್ಡೆ

| Published : Apr 09 2024, 12:50 AM IST

ಕೇಂದ್ರ ಸರ್ಕಾರದ 2 ಕೋಟಿ ಉದ್ಯೋಗ ಎಲ್ಲಿದೆ: ಜೆಪಿ ಹೆಗ್ಡೆ
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರಿನ ಕುರವಂಗಿ ಗ್ರಾಮದಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶ ಹಾಗೂ ಚುನಾವಣಾ ಪ್ರಚಾರ ಸಭೆ ನಡೆಯಿತು. ಸಭೆಯಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಹೊಟ್ಟೆ ತುಂಬಿದವರಿಗೆ ನೆರವಾಗುವ ಕೇಂದ್ರ ಸರ್ಕಾರದ ಅಕ್ರಮಗಳ ಬಗ್ಗೆ ಚರ್ಚೆ ಮಾಡದೇ ಬರೇ ನವಿಲು ಗರಿಯ ಕತೆ ಹೇಳಿ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನ ನಡೆಯುತ್ತಿದೆ. ಮತದಾರರು ಜನಪ್ರತಿನಿಧಿಗಳಿಂದ ಕ್ಷೇತ್ರದ ಕೆಲಸಗಳನ್ನು ಮಾಡಿಕೊಳ್ಳುವಷ್ಟು ಅರಿವು ಮೂಡಿಸಿಬೇಕು. ಬರೇ ಆಶ್ವಾಸನೆಗಳಿಗೆ ಮರುಳಾಗಬಾರದು ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.

ಅವರು ಚಿಕ್ಕಮಗಳೂರಿನ ಕುರವಂಗಿ ಗ್ರಾಮದಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶ ಹಾಗೂ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದರು.

2014ರ ಚುನಾವಣೆ ವೇಳೆ ಕೇಂದ್ರ ಸರ್ಕಾರ ನೀಡಿದ 2 ಕೋಟಿ ಉದ್ಯೋಗ ಭರವಸೆಯಲ್ಲಿ ಯಾರಿಗೆ ಕೆಲಸ ಸಿಕ್ಕಿದೆ? ಪ್ರವಾಸೋದ್ಯಮ ಅಭಿವೃದ್ಧಿಯಾದರೆ ಉದ್ಯೋಗ ಅವಕಾಶಗಳು ಹುಟ್ಟಿಕೊಳ್ಳುತ್ತವೆ. ಆದರೆ ಕೇಂದ್ರ ಸರ್ಕಾರ ಸರ್ಕಾರಿ ಸ್ವಾಮ್ಯದ ಉದ್ದಿಮೆಗಳನ್ನು ಮಾರಾಟ ಮಾಡುತ್ತಿದೆ. ಇದರಿಂದ ದೇಶದ ಯುವ ಜನತೆಗೆ ಕೆಲಸ ಸಿಗುವುದಾದರೂ ಹೇಗೆ? ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಎಂದರೆ ಪುಸ್ತಕದಲ್ಲಿರುವ ನವಿಲುಗರಿ, ಅದು ಮರಿ ಹಾಕುವುದಿಲ್ಲ ಎಂದು ಬಿಜೆಪಿ ಲೇವಡಿ ಮಾಡಿತ್ತು, ಆದರೆ ನವಿಲು ಗರಿ ಮರಿ ಹಾಕುವುದಿಲ್ಲ, ನವಿಲೇ ಮರಿ ಹಾಕಿದೆ. ಅದು ಕಾಂಗ್ರೆಸ್‌ ಸರ್ಕಾರದ ಗ್ಯಾರೆಂಟಿ ಮೂಲಕ ಎಂದರು.

ಕೇಂದ್ರ ಸರ್ಕಾರ ಬೃಹತ್‌ ಕಂಪನಿಗಳ 11 ಲಕ್ಷ ಕೋಟಿ ರು.ಗಳ ಸಾಲವನ್ನು ಮನ್ನಾ ಮಾಡಿರುವುದನ್ನು ನಾವು ಪತ್ರಿಕೆಗಳಲ್ಲಿ ಓದಿದ್ದೇವೆ. ಶ್ರೀಮಂತರ ಸಾಲ ಮನ್ನಾ ಮಾಡಿದವರಿಗೆ ಬಡವರ ಗ್ಯಾರೆಂಟಿಯನ್ನು ಸಹಿಸಿಕೊಳ್ಳಲಾಗುತ್ತಿಲ್ಲ. ಇದೆಂಥ ಸಾಮಾಜಿಕ ನ್ಯಾಯ? ಎಂದು ಪ್ರಶ್ನಿಸಿದರು.

ನಾವು ನಮ್ಮ ಮಕ್ಕಳ ಭವಿಷ್ಯವನ್ನು ಗಮನದಲ್ಲಿರಿಸಿಕೊಂಡು ಮತ ಚಲಾಯಿಸಬೇಕು. ಜನರು ಕೂಡ ತಮ್ಮ ಕ್ಷೇತ್ರದ ಜನಪ್ರತಿನಿಧಿಗಳು ಮಾಡಿದ ಕೆಲಸವನ್ನು ಗಮನದಲ್ಲಿರಿಸಿಕೊಳ್ಳಬೇಕು. ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎಂಬ ಬಿಜೆಪಿ ಸರ್ಕಾರದ ನಿಲುವು ಈ ದೇಶದ ಭವಿಷ್ಯಕ್ಕೆ, ಪ್ರಜಾಪ್ರಭುತ್ವಕ್ಕೆ ವಿರುದ್ಧವಾದುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್‌ ನಾಯಕರು ಹಾಗೂ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು.