ಸಾರಾಂಶ
ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಬಾಂಗ್ಲಾದೇಶದಲ್ಲಿರುವ ಅಲ್ಪ ಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ತೀರ್ಥಹಳ್ಳಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಯಿತು, ಅಲ್ಲದೆ, ಸಾಗರ ಹಾಗೂ ಆನಂದಪುರದಲ್ಲೂ ಹಿಂದೂ ಪರರು ಪ್ರತಿಭಟನೆ ನಡೆಸಿದರು.
ಕನ್ನಡಪ್ರಭವಾರ್ತೆ ತೀರ್ಥಹಳ್ಳಿ
ಬಾಂಗ್ಲಾದೇಶದಲ್ಲಿರುವ ಅಲ್ಪ ಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡನೀಯವಾಗಿದ್ದು ವಿಶ್ವದಾದ್ಯಂತ ಇರುವ ಪ್ರತಿಯೊಬ್ಬ ಹಿಂದೂಗಳು ಈ ಘಟನೆಯ ಬಗ್ಗೆ ಎಚ್ಚೆತ್ತುಕೊಳ್ಳುವ ಮೂಲಕ ಧರ್ಮ ಸಹಿಷ್ಣುಗಳಾದ ನಾವುಗಳು ಹೇಡಿಗಳಲ್ಲ ಎಂಬುದನ್ನು ನಿರೂಪಿಸಬೇಕಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಮಂಗಳವಾರ ಬಾಂಗ್ಲಾದೇಶದಲ್ಲಿರುವ ಅಲ್ಪ ಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಪಟ್ಟಣದಲ್ಲಿ ಮೌನ ಮೆರವಣಿಗೆ ಹಾಗೂ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದ ನಂತರ ತಾಲೂಕು ಕಚೇರಿ ಎದುರು ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಭಾರತಿಪುರ ದಿನೇಶ್ ಮಾತನಾಡಿ, ಹಿಂದೂ ಸಮಾಜ ಸಮರ್ಥವಾದರೆ ಭಾರತ ಸಮರ್ಥವಾಗುತ್ತದೆ. ಹಿಂದೂಗಳಾದ ನಾವುಗಳು ಸಂಘಟಿತರಾಗದಿದ್ದಲ್ಲಿ ನಮಗೆ ಉಳಿಗಾಲವಿಲ್ಲ ಎಂದರು.ತಹಶಿಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಭಾರತ ಸರ್ಕಾರ ಮತ್ತು ವಿಶ್ವ ಸಮುದಾಯ ಮಧ್ಯೆ ಪ್ರವೇಶಿಸಲು ಮನವಿ ಮಾಡಲಾಗಿದೆ. ಪ್ರತಿಭಟನೆಯಲ್ಲಿ ವಿಶ್ವಹಿಂದೂ ಪರಿಷತ್ ಜಿಲ್ಲಾದ್ಯಕ್ಷ ವಾಸುದೇವ ಜೆ.ಆರ್. ಸತೀಶ್ ಪೂಜಾರಿ, ಮಂಡಲ ಬಿಜೆಪಿ ಅಧ್ಯಕ್ಷ ಹೆದ್ದೂರು ನವೀನ್, ಪ್ರಮುಖರಾದ ಬೇಗುವಳ್ಳಿ ಸತೀಶ್, ಸಾಲೇಕೊಪ್ಪ ರಾಮಚಂದ್ರ, ಬೇಗುವಳ್ಳಿ ಕವಿರಾಜ್ ಇದ್ದರು.