ಪತಿಯಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಪತ್ನಿ ಮೃತಪಟ್ಟ ಘಟನೆ ಸೋಮವಾರ ನೂರಾಳ್‌ಬೆಟ್ಟುವಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಗೀತಾ ಎಂದು ಗುರುತಿಸಲಾಗಿದೆ.

ಕಾರ್ಕಳ: ಪತಿಯಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಪತ್ನಿ ಮೃತಪಟ್ಟ ಘಟನೆ ಸೋಮವಾರ ನೂರಾಳ್‌ಬೆಟ್ಟುವಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಗೀತಾ ಎಂದು ಗುರುತಿಸಲಾಗಿದೆ.

ಗೀತಾ ಹಾಗೂ ಪತಿ ಸುನಿಲ್ ಕುಮಾರ್ ನಡುವೆ ಜ. 27ರಂದು ಬೆಳಗ್ಗೆ ಸಾಂಸಾರಿಕ ವಿಚಾರವಾಗಿ ಗಲಾಟೆ ನಡೆದಿದ್ದು, ಈ ಸಂದರ್ಭ ಗೀತಾ ಅವರಿಗೆ ಸುನಿಲ್‌ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಅವರಿಗೆ ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಸಾಕ್ ಆಸ್ಪತ್ರೆಗೆ, ಅಲ್ಲಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಸುನಿಲ್ ಕುಮಾರ್‌ನನ್ನು ಪೊಲೀಸರು ಬಂಧಿಸಿ, ಹಿರಿಯಡ್ಕ ಜೈಲಿಗೆ ಕಳುಹಿಸಿದ್ದಾರೆ.

ಪೊಲೀಸರ ತನಿಖೆಯ ಪ್ರಕಾರ, ಸುನಿಲ್ ಕುಮಾರ್ ಅನ್ಯ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿರುವುದೇ ದಾಂಪತ್ಯ ಕಲಹಕ್ಕೆ ಕಾರಣ ಎನ್ನಲಾಗಿದೆ.