ಕನ್ನಡಪ್ರಭ ವಾರ್ತೆ ಬೆಂಗಳೂರು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಪತ್ನಿ ಕೊಂದಿದ್ದ ಖಾಸಗಿ ಸಂಸ್ಥೆ ಕಾವಲುಗಾರನೊಬ್ಬನನ್ನು ಮೈಕೋ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಬಿಳೇಕಹಳ್ಳಿ ನಿವಾಸಿ ರಂಗವ್ವ ಹತ್ಯೆಯಾದ ದುರ್ದೈವಿ. ಈ ಕೊಲೆ ಸಂಬಂಧ ನಾಗರಾಜ್ನನ್ನು ಪೊಲೀಸರು ಬಂಧಿಸಿದ್ದಾರೆ. ಕೌಟುಂಬಿಕ ವಿಚಾರವಾಗಿ ಭಾನುವಾರ ರಾತ್ರಿ ದಂಪತಿ ಮಧ್ಯೆ ಜಗಳವಾಗಿದೆ. ಆಗ ಕೆರಳಿದ ಆರೋಪಿ, ತನ್ನ ಪತ್ನಿ ಕುತ್ತಿಗೆಯನ್ನು ಚಾಕುವಿನಿಂದ ಕೊಯ್ದು ಪರಾರಿಯಾಗಿದ್ದ. ಈ ಕೃತ್ಯ ಬೆಳಕಿಗೆ ಬಂದ ಕೆಲವೇ ತಾಸುಗಳಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಕೆಲ ವರ್ಷಗಳ ಹಿಂದೆ ಉದ್ಯೋಗ ಅರಸಿ ನಗರಕ್ಕೆ ತಮ್ಮ ಪರಿವಾರ ಸಮೇತ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ನಾಗರಾಜ್ ಬಂದಿದ್ದರು. ಬಳಿಕ ಖಾಸಗಿ ಸಂಸ್ಥೆಯಲ್ಲಿ ಆತ ಕಾವಲುಗಾರನಾಗಿದ್ದರೆ, ಅವರ ಪುತ್ರ ಕ್ಯಾಂಟರಿಂಗ್ ಕೆಲಸ ಮಾಡುತ್ತಿದ್ದಾರೆ. ಪ್ರತಿ ದಿನ ಮನೆಗೆ ಮದ್ಯ ಸೇವಿಸಿ ಬಂದು ಸಣ್ಣಪುಟ್ಟ ವಿಚಾರಗಳಿಗೆ ಪತ್ನಿ ಜತೆ ನಾಗರಾಜ್ ಗಲಾಟೆ ಮಾಡುತ್ತಿದ್ದ. ಅಂತೆಯೇ ಭಾನುವಾರ ರಾತ್ರಿ ಪತ್ನಿ ಮೇಲೆ ಆತ ರಂಪಾಟ ಮಾಡಿದ್ದಾನೆ. ಆಗ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ಹಂತದಲ್ಲಿ ಕೆರಳಿದ ಆರೋಪಿ, ಮನೆಯಲ್ಲಿದ್ದ ತರಕಾರಿ ಕತ್ತರಿಸಲಿಟ್ಟಿದ್ದ ಚಾಕುವಿನಿಂದ ಪತ್ನಿ ಕುತ್ತಿಗೆ ಕೊಯ್ದು ಹತ್ಯೆ ಮಾಡಿದ್ದಾನೆ ಎಂದು ಮೂಲಗಳು ಹೇಳಿವೆ.