ಸಾರಾಂಶ
ಕನ್ನಡಪ್ರಭ ವಾರ್ತೆ ಹನೂರು
ಕಾಡು ಪ್ರಾಣಿಗಳ ಹಾವಳಿಯಿಂದ ಮುಸುಕಿನ ಜೋಳದ ಫಸಲು ಹಾನಿಯಾಗಿದ್ದು, ಸಂಕಷ್ಟಕ್ಕೀಡಾಗಿರುವ ರೈತನಿಗೆ ನಷ್ಟ ಪರಿಹಾರ ನೀಡಬೇಕು ಎಂದು ರೈತ ಸಂಘಟನೆ ಒತ್ತಾಯಿಸಿದೆ.ಹನೂರು ತಾಲೂಕಿನ ಅಜ್ಜಿಪುರ ಗ್ರಾಪಂ ವ್ಯಾಪ್ತಿಯ ಜಿಆರ್ನಗರ ಗ್ರಾಮದ ರೈತ ವರದರಾಜು ತಮ್ಮ ಜಮೀನಿನಲ್ಲಿ ಬೆಳೆಯಲಾಗಿರುವ ಮುಸುಕಿನ ಜೋಳವನ್ನು ಕಾಡು ಪ್ರಾಣಿಗಳು ರಾತ್ರಿ ವೇಳೆ ಜಮೀನಿಗೆ ಲಗ್ಗೆ ಇಟ್ಟು ಫಸಲನ್ನು ತಿಂದು ತುಳಿದು ನಾಶಗೊಳಿಸಿರುವ ಬಗ್ಗೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಬೆಳೆ ನಷ್ಟ ಪರಿಹಾರಕ್ಕೆ ಒತ್ತಾಯ:ಕಷ್ಟಪಟ್ಟು ಇರುವ ಅಲ್ಪಸಲ್ಪ ನೀರಿನಲ್ಲಿ ರೈತ ವರದರಾಜು ಇತರರಿಂದ ಸಾಲ ಪಡೆದು ಮುಸುಕಿನ ಜೋಳ ಬೆಳೆದಿದ್ದ, ತೆನೆ ಕಟ್ಟುವ ಸಮಯದಲ್ಲಿ ಕಾಡುಪ್ರಾಣಿಗಳು ರಾತ್ರಿ ವೇಳೆ ಜಮೀನಿಗೆ ನುಗ್ಗಿ ಬೆಳೆಯನ್ನು ತಿಂದು ನಾಶಪಡಿಸಿದ್ದು, ಅರಣ್ಯ ಅಧಿಕಾರಿಗಳು ಈ ಬಗ್ಗೆ ರೈತನಿಗೆಪರಿಹಾರವನ್ನು ನೀಡಲು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಒತ್ತಾಯಿಸಿದೆ.
ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟಲು ಆಗ್ರಹ:ನಿರಂತರವಾಗಿ ಜಿಆರ್.ನಗರ ಸೇರಿದಂತೆ ಸುತ್ತಲಿನ ರೈತರ ಜಮೀನುಗಳಲ್ಲಿ ಕಾಡುಪ್ರಾಣಿಗಳು ಲಗ್ಗೆ ಇಟ್ಟು ಫಸಲನ್ನು ತಿಂದು ನಾಶಪಡಿಸುತ್ತಿರುವ ಬಗ್ಗೆ ಅರಣ್ಯ ಅಧಿಕಾರಿಗಳು ಕೂಡಲೇ ರೈತರಿಗೆ ಕಾಡು ಪ್ರಾಣಿಗಳು ಬರದಂತೆ ತಡೆಗಟ್ಟಲು ಶಾಶ್ವತ ಪರಿಹಾರ ನೀಡಬೇಕು ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಅಮ್ಜದ್ ಖಾನ್ ಒತ್ತಾಯ ಮಾಡಿದ್ದಾರೆ. ಇಲ್ಲದಿದ್ದರೆ ರೈತ ಸಂಘಟನೆ ವತಿಯಿಂದ ಸಂಬಂಧಪಟ್ಟ ಅರಣ್ಯಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.