ಶಿವಮೊಗ್ಗ: ನಗರದ ಜನಪ್ರಿಯ ಗಾಂಧಿ ಪಾರ್ಕ್‌ನಲ್ಲಿ ವಿದ್ಯಾರ್ಥಿಗಳಿಗೆ ಪರಿಸರ ಮತ್ತು ವಿಜ್ಞಾನದ ಕುರಿತು ಪ್ರಾಯೋಗಿಕ ಮಾಹಿತಿ ನೀಡುವ ಉದ್ದೇಶದಿಂದ ನಿರ್ಮಿಸಲಾಗಿರುವ ವನ್ಯಜೀವಿ ವ್ಯಾಖ್ಯಾನ ಕೇಂದ್ರ ಹಾಗೂ ವಿಜ್ಞಾನ ಉದ್ಯಾನವನವನ್ನು ಶಾಸಕ ಎಸ್.ಎನ್. ಚನ್ನಬಸಪ್ಪ ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗಾಂಧಿ ಪಾರ್ಕ್ ಕೇವಲ ವಿಶ್ರಾಂತಿ ಪಡೆಯುವ ತಾಣವಾಗಿ ಉಳಿಯದೆ, ಜ್ಞಾನವಿಕಾಸದ ಕೇಂದ್ರವಾಗಬೇಕು ಎಂಬುದು ನಮ್ಮ ಆಶಯ. ಮಕ್ಕಳು ಪುಸ್ತಕದಲ್ಲಿ ಓದಿದ್ದನ್ನು ಇಲ್ಲಿ ಪ್ರಾಯೋಗಿಕವಾಗಿ ನೋಡಿ ಕಲಿಯಲು ಅವಕಾಶವಿದೆ. ಪರಿಸರ ಸಮತೋಲನ ಮತ್ತು ವನ್ಯಜೀವಿಗಳ ಸಂರಕ್ಷಣೆಯ ಮಹತ್ವವನ್ನು ಸಾರುವ ಕೇಂದ್ರಗಳು ಇಲ್ಲಿವೆ. ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ತುಷಾರ್, ಕಾರ್ಯಪಾಲಕ ಎಂಜಿನಿಯರ್ ಪ್ರಿಯಾ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಲಕ್ಷ್ಮಿ ಹಾಗೂ ಜ್ಯೋತಿ ಸೇರಿದಂತೆ ಪಾಲಿಕೆಯ ಅಧಿಕಾರಿಗಳು ಮತ್ತು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.