ಸಾರಾಂಶ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 2024-25ನೇ ಸಾಲಿನ ರಾಜ್ಯ ಆಯವ್ಯಯದಲ್ಲಿ ಲೋಕೋಪಯೋಗಿ ಇಲಾಖೆಗೆ ಹೆಚ್ಚಿನ ಅನುದಾನ ನೀಡಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ಕೆಶಿಪ್-4 ಯೋಜನೆ ಜಾರಿಗೊಳಿಸಲಾಗುವುದು. ಈ ಯೋಜನೆಯಡಿ ಬಾಹ್ಯ ಹಣಕಾಸು ಸಂಸ್ಥೆಯ ನೆರವಿನೊಂದಿಗೆ 5,736 ಕೋಟಿ ರು. ವೆಚ್ಚದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 875 ಕಿ.ಮೀ. ಉದ್ದದ ರಾಜ್ಯ ಹೆದ್ದಾರಿಯನ್ನು ಅಭಿವೃದ್ಧಿಪಡಿಸಲಾಗುವುದು.
ರಾಜ್ಯದಲ್ಲಿನ 1,300 ಕಿ.ಮೀ. ಉದ್ದದ ಪ್ರಮುಖ ರಸ್ತೆಗಳನ್ನು 4 ಸಾವಿರ ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಪ್ರಸಕ್ತ ಸಾಲಿನಲ್ಲಿ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ(ಎಸ್ಎಚ್ಡಿಪಿ) ಹಂತ-5 ಪ್ರಾರಂಭಿಸುವುದಾಗಿ ತಿಳಿಸಿದ್ದಾರೆ.
ಬೆಳಗಾವಿ ನಗರ ಪರಿಮಿತಿಯಲ್ಲಿ ವಾಹನ ದಟ್ಟಣೆ ಹಾಗೂ ಸಂಚಾರ ದಟ್ಟಣೆ ನಿವಾರಿಸಲು ಕೇಂದ್ರ ಸರ್ಕಾರದ ಸಹಯೋಗದಲ್ಲಿ 450 ಕೋಟಿ ರು. ವೆಚ್ಚದಲ್ಲಿ 4.50 ಕಿ.ಮೀ. ಉದ್ದದ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲಾಗುವುದು.
ಬೆಂಗಳೂರು-ಮಂಡ್ಯ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮೈಸೂರು ಹೊರವಲಯದಲ್ಲಿರುವ ಜಂಕ್ಷನ್ನಲ್ಲಿ ವಾಹನ ಸಂಚಾರ ದಟ್ಟಣೆಯನ್ನು ನೀಗಿಸಲು ಎನ್ಎಚ್ಎಐ ಸಹಯೋಗದೊಂದಿಗೆ ಮೇಲ್ಸೇತುವೆ ನಿರ್ಮಿಸುವುದಾಗಿ ಘೋಷಿಸಿದ್ದಾರೆ.
ರೈಲ್ವೆ ಮೇಲುಸೇತುವೆ: 350 ಕೋಟಿ ರು. ವೆಚ್ಚದಲ್ಲಿ ಮೈಸೂರಿನ ಕುಕ್ಕರಹಳ್ಳಿ ಬಳಿ ಹಾಗೂ ಕೆ.ಆರ್.ಎಸ್ ರಸ್ತೆ, ಶಿವಮೊಗ್ಗ-ಬೊಮ್ಮನಕಟ್ಟೆ ರಸ್ತೆ, ಗದಗ ಜಿಲ್ಲೆಯ ರೋಣದ ಮಲ್ಲಾಪುರ, ಚನ್ನಪಟ್ಟಣ-ಬೈರಾಪಟ್ಟಣ ಮಾರ್ಗ ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ ಒಟ್ಟು 6 ರೈಲ್ವೆ ಮೇಲ್ಸೇತುವೆ ಹಾಗೂ ಕೆಳಸೇತುವೆ ನಿರ್ಮಿಸುವುದಾಗಿ ತಿಳಿಸಿದ್ದಾರೆ.
2 ಆರ್ಥಿಕ ಕಾರಿಡಾರ್: ರಾಜ್ಯದ ಮೂಲಕ ಹಾದು ಹೋಗುವ ಮುಂಬೈ-ಚೆನ್ನೈ ಕಾರಿಡಾರ್ನಲ್ಲಿ ನಾವು ಹಲವಾರು ಕೈಗಾರಿಕಾ ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಂಡಿದ್ದೇವೆ.
ಇದೇ ಮಾದರಿಯಲ್ಲಿ ರಾಜ್ಯ ಸರ್ಕಾರವು ಎರಡು ಆರ್ಥಿಕ ಕಾರಿಡಾರ್ ಅಭಿವೃದ್ಧಿಪಡಿಸಲು ಉದ್ದೇಶಿಸಿದೆ. ಮಂಗಳೂರು ಬಂದರಿನಿಂದ ಬೆಂಗಳೂರುವರೆಗೆ ಒಂದು ಮತ್ತು ಬೀದರ್ ಹಾಗೂ ಬೆಂಗಳೂರು ನಡುವೆ ಮತ್ತೊಂದು ಕಾರಿಡಾರ್ ಅಭಿವೃದ್ಧಿಪಡಿಸುವ ಮೂಲಕ ಕಲ್ಯಾಣ ಕರ್ನಾಟಕ ಪ್ರದೇಶದ ಆರ್ಥಿಕ ಅಭಿವೃದ್ಧಿಯನ್ನು ಚುರುಕುಗೊಳಿಸುವುದಾಗಿ ಬಜೆಟ್ನಲ್ಲಿ ಘೋಷಿಸಿದ್ದಾರೆ.