ಸಾರಾಂಶ
ಕನ್ನಡ ಪ್ರಭ ವಾರ್ತೆ ಮಳವಳ್ಳಿ
ಸಂವಿಧಾನದಲ್ಲಿ ಎಲ್ಲರಿಗೂ ಸಮಾನತೆ ಕಲ್ಪಿಸಿದೆ. ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರು ಅನುಸರಿಸಬೇಕು ಎಂದು ತಾಲೂಕು ಪಂಚಾಯ್ತಿ ಇಒ ಎಚ್.ಜಿ.ಶ್ರೀನಿವಾಸ್ ಕರೆ ನೀಡಿದರು.ಪಟ್ಟಣದ ಪ್ರವಾಸಿ ಮಂದಿರದ ಮುಂಭಾಗ ಮಂಗಳವಾರ ಸಂವಿಧಾನ ದಿನಾಚರಣೆ ಅಂಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೀಠಿಕೆ ಬೋಧಿಸಿದರು.
ನಂತರ ಪಟ್ಟಣದ ಹೊರವಲಯದ ಆದರ್ಶ ವಿದ್ಯಾಲಯದಲ್ಲಿ ನಡೆದ ಸಂವಿಧಾನ ದಿನಾಚರಣೆ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವದಲ್ಲಿಯೇ ಶ್ರೇಷ್ಠ ಸಂವಿಧಾನವನ್ನು ಭಾರತಕ್ಕೆ ಡಾ. ಬಿ.ಆರ್.ಅಂಬೇಡ್ಕರ್ ಕಲ್ಪಿಸಿದ್ದಾರೆ. ಅದರ ಮಹತ್ವವನ್ನು ಅರಿತು ಎಲ್ಲರೂ ಕೆಲಸ ಮಾಡಬೇಕು ಎಂದರು.ತಹಸೀಲ್ದಾರ್ ಬಿ.ವಿ.ಕುಮಾರ್ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ಸರ್ವ ಜನಾಂಗದ ಅಭಿವೃದ್ಧಿಗಾಗಿ ಸಂವಿಧಾನವನ್ನು ರಚಿಸಿದ್ದಾರೆ. ಸಂವಿಧಾನದ ಆಶಯ ಮತ್ತು ಮೂಲ ತತ್ವಗಳನ್ನು ಅರಿತುಕೊಳ್ಳಬೇಕು, ಭ್ರಾತೃತ್ವ, ಸಾಮರಸ್ಯ ಹಾಗೂ ಸಮಾನತೆಯ ಕುರಿತು ಅರಿತುಕೊಳ್ಳುವುದು ಮುಖ್ಯವಾಗಿದೆ. ಪ್ರತಿದಿನವೂ ಸಂವಿಧಾನದ ದಿನಚರಣೆಗಳಾಗಿ ಸಂಭ್ರಮಿಸಬೇಕು. ಆ ಮೂಲಕ ಸಂವಿಧಾನದ ಉಳಿವಿಗೆ ಎಲ್ಲರೂ ಮುಂದಾಗಬೇಕು ಎಂದು ಕರೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಈ.ಉಮಾ ಮಾತನಾಡಿ, ಹಲವು ಹೋರಾಟಗಳು ಹಾಗೂ ಹಲವು ಮಹಾನೀಯರ ಬಲಿದಾನದಿಂದ ಪಡೆದಿರುವ ಸ್ವಾತಂತ್ರ್ಯವನ್ನು ಉಳಿಸಿ ಮುಂದಿನ ಪೀಳಿಗೆಗೆ ನೀಡುವ ನಿಟ್ಟಿನಲ್ಲಿ ಆಡಳಿತದ ದೃಷ್ಟಿಯಿಂದ ರಚಿತವಾಗಿ ಸಂವಿಧಾನವನ್ನು ಎಲ್ಲರೂ ಗೌರವಿಸಿ ಅದನ್ನು ಉಳಿಸುವ ಕಾರ್ಯ ಮಾಡಬೇಕು ಎಂದು ಕರೆ ನೀಡಿದರು.ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷ ಟಿ.ಎಂ ಪ್ರಕಾಶ್, ಬೊಪ್ಪೇಗೌಡನಪುರ(ಬಿಜಿಪುರ) ಮಂಟೇಸ್ವಾಮಿ ಮಠದ ಬಿ.ಪಿ.ಭರತ್ ರಾಜೇ ಅರಸು, ವಿವಿಧ ಇಲಾಖೆ ಅಧಿಕಾರಿ ಸಂತೋಷ್ ಕುಮಾರ್, ರಂಗಸ್ವಾಮಿ, ಮಹದೇವಸ್ವಾಮಿ, ನಾಗರಾಜು, ಡಾ.ಪಿ.ವೀರಭದ್ರಪ್ಪ, ನಾರಾಯಣಸ್ವಾಮಿ, ಎಂ.ಕೆ.ಶ್ರೀನಿವಾಸ್, ಮುಖ್ಯಶಿಕ್ಷಕರು, ಸಹ ಶಿಕ್ಷಕರು ಹಾಗೂ ಸಿಬ್ಬಂದಿ ಇದ್ದರು.