ಕನ್ನಡಪ್ರಭ ವಾರ್ತೆ, ತುಮಕೂರುವಕೀಲರು ಮತ್ತು ನ್ಯಾಯಾಧೀಶರು ಒಂದು ನಾಣ್ಯದ ಎರಡು ಮುಖಗಳಿದ್ದಂತೆ, ವಕೀಲರ ಸಹಕಾರವಿದ್ದರೆ ಕಕ್ಷಿದಾರರಿಗೆ ಶೀಘ್ರವಾಗಿ ನ್ಯಾಯದಾನ ಮಾಡಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಎನ್. ಮುನಿರಾಜ ತಿಳಿಸಿದರು. ಅವರು ಜಿಲ್ಲಾ ವಕೀಲರ ಸಂಘದಿಂದ ಆಯೋಜಿಸಿದ್ದ ವರ್ಗಾವಣೆಗೊಂಡ ನ್ಯಾಯಾಧೀಶರುಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನೂರುನ್ನೀಸರವರು ಮಾತನಾಡಿ, ನಾನು ಕಳೆದ 4 ವರ್ಷದಿಂದ ಇಲ್ಲಿ ಕಾರ್ಯನಿರ್ವಹಿಸುತ್ತಿದ್ದು ಹಿರಿಯ ನಾಗರಿಕರು, ನೊಂದವರು ಪ್ರತಿದಿನ ಪ್ರಾಧಿಕಾರಕ್ಕೆ ಬರುತ್ತಿದ್ದರು. ಅವರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸಿ ಅವರ ಸಮಸ್ಯೆಗಳನ್ನು ಇತ್ಯರ್ಥಗೊಳಿಸಿ, ನ್ಯಾಯಾಲಯದಲ್ಲಿ ಬಾಕಿ ಇದ್ದ ಪ್ರಕರಣಗಳಲ್ಲಿ ರಾಜಿ ಪಂಚಾಯ್ತಿ ಮಾಡಿ ಹಲವಾರು ಕೇಸುಗಳನ್ನು ಮುಕ್ತಾಯಗೊಳಿಸಿದ್ದು ನನಗೆ ಹೆಮ್ಮೆ ತಂದಿದೆ, ಎಲ್ಲ ಧರ್ಮವು ಒಂದೇ ಹೇಳುವುದು ಎಲ್ಲರನ್ನು ಸಮಾನವಾಗಿ ಕಾಣಬೇಕು ದಯವೇ ಧರ್ಮದ ಮೂಲವಯ್ಯ ಎಂದು ತಿಳಿಸಿದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಹೆಚ್. ಕೆಂಪರಾಜಯ್ಯ ಮಾತನಾಡಿ ವರ್ಗಾವಣೆಗೊಂಡ ನ್ಯಾಯಾಧೀಶರು ವಕೀಲರೊಂದಿಗೆ ಉತ್ತಮ ಭಾಂಧವ್ಯ ಹೊಂದಿದ್ದರು ಎಂದರು. ವೇದಿಕೆಯಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಬಿ. ಜಯಂತಕುಮಾರ್, ೧ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹೆಚ್. ಅನಂತ ಉಪಸ್ಥಿತರಿದ್ದರು.

ಶ್ರೀನಿವಾಸ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಹಿರೇಹಳ್ಳಿ ಮಹೇಶ್ ನಿರೂಪಿಸಿದರು. ವರ್ಗಾವಣೆಗೊಂಡ ನ್ಯಾಯಾಧೀಶರಿಗೆ ಜಿಲ್ಲಾ ವಕೀಲರ ಸಂಘದಿಂದ ಅದ್ಧೂರಿಯಾಗಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ನ್ಯಾಯಾಧೀಶರು ವಕೀಲರು ಹಾಜರಿದ್ದರು.