2 ದಿನಗಳಲ್ಲಿ ಸಚಿವ ನಾಗೇಂದ್ರ ರಾಜೀನಾಮೆ: ವಿಜಯೇಂದ್ರ

| Published : Jun 02 2024, 01:47 AM IST / Updated: Jun 02 2024, 09:06 AM IST

ಸಾರಾಂಶ

  ಇನ್ನೆರಡು ದಿನಗಳಲ್ಲಿ ಸಚಿವ ಬಿ.ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

  ಸೊರಬ :  ಎಸ್.ಟಿ.ಅಭಿವೃದ್ಧಿ ನಿಗಮದಿಂದ ನೂರಾರು ಕೋಟಿ ಅವ್ಯವಹಾರ ನಡೆದಿದ್ದು, ಇದು ನಿಗಮದ ಅಧೀಕ್ಷಕ

ಚಂದ್ರಶೇಖರನ್ ಸಾವಿಗೆ ಕಾರಣವಾಗಿದೆ. ಭ್ರಷ್ಟಾಚಾರ ಮತ್ತು ಅವ್ಯವಹಾರದ ಆರೋಪ ಸರ್ಕಾರದ ಮೇಲಿದೆ. ಇನ್ನೆರಡು ದಿನಗಳಲ್ಲಿ ಸಚಿವ ಬಿ.ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ವಿಧಾನ ಪರಿಷತ್ ಚುನಾವಣೆ ನಿಮಿತ್ತ ಶನಿವಾರ ಹಮ್ಮಿಕೊಂಡಿದ್ದ ಘಟ ನಾಯಕರ ಸಭೆಯಲ್ಲಿ ಮಾತನಾಡಿ, ೧೭೦ ರಿಂದ ೧೮೦ ಕೋಟಿ ರು.ಗಳ ಅವ್ಯವಹಾರ ನಡೆಸಲು ಕೇವಲ ಒಬ್ಬ ಸಚಿವರಿಂದ ಸಾಧ್ಯವಿಲ್ಲ. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಎಸ್.ಟಿ. ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ನೂರಾರು ಕೋಟಿ ಹಣ ತೆಲಂಗಾಣದ ಖಾಸಗಿ ಕಂಪನಿಗಳ ಮೂಲಕ ದುರ್ಬಳಕೆ ಮಾಡಿ ಲೋಕಸಭಾ ಚುನಾವಣೆಗೆ ಬಳಸಲಾಗಿದೆ ಎನ್ನುವ ಆರೋಪಗಳು ಕೇಳಿ ಬರುತ್ತಿದೆ. ಈ ಬಗ್ಗೆ ಬಿಜೆಪಿ ಬೀದಿಗಿಳಿದು ಹೋರಾಟ ನಡೆಸಲಿದೆ ಎಂದು ವಿಜಯೇಂದ್ರ ಹೇಳಿದರು.

ಗ್ಯಾರಂಟಿಗಳಿಂದ ನಡೆಯುತ್ತಿರೋ ಸರ್ಕಾರ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ವರ್ಷವಾದರೂ ಒಂದೇ ಒಂದು ಗುದ್ದಲಿಪೂಜೆ ನರೆವೇರಿಸದೆ ಜಾಹೀರಾತು ಮತ್ತು ಗ್ಯಾರಂಟಿ ಯೋಜನೆಗಳಿಂದ ನಡೆಯುತ್ತಿದೆ. ಈ ಸರ್ಕಾರದಿಂದ ರಾಜ್ಯಕ್ಕೇ ದರಿದ್ರ ಹಿಡಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದರು.

ಕಾಂಗ್ರೆಸ್ ನಾಯಕರು ಲೋಕಸಭಾ ಚುನಾವಣೆಯಲ್ಲಿ ೨೦ ಸ್ಥಾನಗಳ ಗೆಲ್ಲುವ ಹಗಲುಗನಸು ಕಾಣುತ್ತಿದ್ದಾರೆ. ಆದರೆ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಯಿಂದ ಲೋಕಸಭಾ ಚುನಾವಣೆ ಫಲಿತಾಂಶ ಬಳಿಕ ಹೊಸ ದಾಖಲೆ ಸೃಷ್ಟಿಯಾಗಲಿದೆ ಎಂದರು.