ಕನ್ನಡಪ್ರಭ ವಾರ್ತೆ ಬೆಂಗಳೂರು
ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ವರ್ತೂರು ಠಾಣೆ ವ್ಯಾಪ್ತಿಯ ಸಿದ್ದಾಪುರದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.ಪಶ್ಚಿಮ ಬಂಗಾಳ ಮೂಲದ ಸೋನಾಲಿ ಕಥುವಾ (30)ಮೃತ ಮಹಿಳೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಸಿದ್ದಾಪುರದ ಬಾಳೆ ತೋಟದಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿದೆ.
ಒಂದು ವರ್ಷದ ಹಿಂದೆ ಸೋನಾಲಿ ಕಥುವಾ ಪತಿ ಬಾಬು ಶೇಕ್ ಮತ್ತು ಕುಟುಂಬ ಸದಸ್ಯರ ಜತೆ ಬೆಂಗಳೂರಿಗೆ ಬಂದಿದ್ದು, ಸಿದ್ದಾಪುರದ ಖಾಸಗಿ ಶಾಲೆ ಸಮೀಪದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪತಿ ಬಾಬು ಶೇಕ್, ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದು, ಸೋನಾಲಿ ಬ್ರೋಕ್ಫೀಲ್ಡ್ ವಾಲ್ಸನ್ಸ್ ಫೆಸಿಲಿಟಿ ಸಲ್ಯೂಷನ್ನಲ್ಲಿ ಹೌಸ್ಕೀಪಿಂಗ್ ಕೆಲಸ ಮಾಡುತ್ತಿದ್ದರು. ಬುಧವಾರ ರಾತ್ರಿ 7.30ರ ಸುಮಾರಿಗೆ ಮನೆಗೆ ಬಂದಿದ್ದ ಸೋನಾಲಿ, ಕೆಲಸದ ಸ್ಥಳದಲ್ಲಿ ಮೊಬೈಲ್ ಬಿಟ್ಟು ಬಂದಿದ್ದೇನೆ ಎಂದು ಹೇಳಿ ಪತಿಯ ಮೊಬೈಲ್ ತೆಗೆದುಕೊಂಡು ವಾಪಸ್ ಕೆಲಸ ಮಾಡುವ ಸ್ಥಳಕ್ಕೆ ಹೋಗಿದ್ದಾರೆ. ಆ ನಂತರ ಆಕೆ ಮನೆಗೆ ಬಂದಿಲ್ಲ. ಬಳಿಕ ಕುಟುಂಬ ಸದಸ್ಯರು ಆಕೆ ಮತ್ತು ಪತಿಯ ಮೊಬೈಲ್ಗೆ ಕರೆ ಮಾಡಿದ್ದು, ಎರಡು ಮೊಬೈಲ್ಗಳು ಸ್ವಿಚ್ಡ್ ಆಫ್ ಆಗಿದ್ದವು. ಇದರಿಂದ ಗಾಬರಿಗೊಂಡ ಕುಟುಂಬ ಸದಸ್ಯರು ಅವರಿಗಾಗಿ ಎಲ್ಲೆಡೆ ಹುಡುಕಾಟ ನಡೆಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕುತ್ತಿಗೆ ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ:
ಈ ಮಧ್ಯೆಸಿದ್ದಾಪುರದ ಬಾಳೆ ತೋಟದಲ್ಲಿ ಸೋನಾಲಿ ಕಥುವಾ ಮೃತದೇಹ ಕಂಡ ಸ್ಥಳೀಯರು ಪೊಲೀಸ್ ಸಹಾಯವಾಣಿ 112ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲಿಸಿ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದರು. ಸೋನಾಲಿಯ ಕುತ್ತಿಗೆಗೆ ವೇಲ್ನಿಂದ ಬಿಗಿದು ಹತ್ಯೆಗೈದಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಮಹಿಳೆಯ ಪತಿ ಮೇಲೆಯೇ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ವರ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
