ಸಾರಾಂಶ
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರಿಗೆ ಹೆಚ್ಚು ಉದ್ಯೋಗ ಅವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಸಾಕಷ್ಟು ಉಪಕ್ರಮಗಳನ್ನು ಕೈಗೊಂಡಿದೆ.
ಕಾರವಾರ: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರಿಗೆ ಹೆಚ್ಚು ಉದ್ಯೋಗ ಅವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಸಾಕಷ್ಟು ಉಪಕ್ರಮಗಳನ್ನು ಕೈಗೊಂಡಿದ್ದು, ಹಳ್ಳಿ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಉಪವಲಯ ಅರಣ್ಯ ಅಧಿಕಾರಿ ರೂಪಾ ತಾಮಷೆ ಹೇಳಿದರು.
ಅವರು ಶುಕ್ರವಾರ ತಾಲೂಕಿನ ದೇವಳಮಕ್ಕಿ ಗ್ರಾಪಂ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಕೆರೆ ನಿರ್ಮಾಣ ಕಾಮಗಾರಿ ಸ್ಥಳಗಳಲ್ಲಿ ಆಯೋಜಿಸಿದ್ದ ಸ್ತ್ರೀಚೇತನ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದರು.ಅರಣ್ಯ ಪ್ರದೇಶದಲ್ಲಿ ಸಸಿಗಳನ್ನು ಬೆಳೆಸುವುದು, ರಸ್ತೆ ಬದಿ ನೆಡುತೋಪುಗಳ ನಿರ್ಮಾಣ, ಬ್ಲಾಕ್ ನೆಡುತೋಪುಗಳು, ಮಣ್ಣು ಮತ್ತು ನೀರು ಸಂರಕ್ಷಣೆ ಕಾಮಗಾರಿಗಳು, ಸರಹದ್ದು ಕಂದಕ ನಿರ್ಮಾಣ, ಗಲ್ಲಿ ಚೆಕ್ಸ್ ನಿರ್ಮಾಣ, ಕೆರೆ ನಿರ್ಮಾಣ, ಕೃಷಿ ಅರಣ್ಯ ಸೇರಿದಂತೆ ಮುಂತಾದ ಚಟುವಟಿಕೆಗಳನ್ನು ಅನುಷ್ಠಾನ ಮಾಡಲಾಗುತ್ತಿದ್ದು, ಯೋಜನೆಯ ಸಫಲತೆಗೆ ನಮ್ಮದೇ ಆದ ಕೊಡುಗೆ ನೀಡುತ್ತಿದ್ದೇವೆ ಎಂದರು.
ಜಿಲ್ಲಾ ಐಇಸಿ ಸಂಯೋಜಕ ಕಿರಣ ಜೋತೆಪ್ಪನವರ, ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಗ್ರಾಮೀಣ ಭಾಗದ ಜನರಿಗೆ ಅದರಲ್ಲೂ ವಿಶೇಷವಾಗಿ ಮಹಿಳೆಯರಿಗಾಗಿ ಇರುವ ಉದ್ಯೋಗ ಅವಕಾಶ, ಕೂಲಿ ದರ, ಕೆಲಸಕ್ಕಾಗಿ ಅರ್ಜಿ ಸಲ್ಲಿಸುವ ವಿಧಾನ, ಗರ್ಭಿಣಿ, ಹಿರಿಯ ನಾಗರಿಕರು ಮತ್ತು ವಿಶೇಷಚೇತನರಿಗೆ ಕೆಲಸದ ಪ್ರಮಾಣದಲ್ಲಿರುವ ರಿಯಾಯಿತಿ, ವೈಯಕ್ತಿಕ ಸೌಲಭ್ಯಗಳು, ಕೂಸಿನ ಮನೆ ವ್ಯವಸ್ಥೆ, ವಿಮಾ ಸೌಲಭ್ಯ ಸೇರಿದಂತೆ ಹಲವು ಉಪಯುಕ್ತ ಮಾಹಿತಿಯನ್ನು ನೀಡಿ, ಯೋಜನೆಯ ಲಾಭ ಪಡೆದುಕೊಳ್ಳುವಂತೆ ತಿಳಿಸಿದರು.ಉಪವಲಯ ಅರಣ್ಯ ಅಧಿಕಾರಿ ಸುಭಾಷ್ ರಾಠೋಡ್, ನಗೆ ಕೋವೆ ಗಸ್ತು ಅರಣ್ಯ ಪಾಲಕ ರಾಜಶೇಖರ್ ಕಾರನವರ, ಬೇಳೂರ ಗಸ್ತು ಅರಣ್ಯ ಪಾಲಕ ಲಕ್ಕಪ್ಪ ಬೆಳಗಲಿ ಇದ್ದರು.