ಮಹಿಳಾ ಸಬಲೀಕರಣ: ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ

| Published : Feb 24 2024, 02:35 AM IST

ಮಹಿಳಾ ಸಬಲೀಕರಣ: ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ
Share this Article
  • FB
  • TW
  • Linkdin
  • Email

ಸಾರಾಂಶ

ಕೊಡಗು ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಹಾಗೂ ಬೇಟಿ ಬಚಾವೋ, ಬೇಟಿ ಪಡಾವೋ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅಧ್ಯಕ್ಷತೆಯಲ್ಲಿ ಮಡಿಕೇರಿಯಲ್ಲಿ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜು ಮತ್ತಿತರರು ಮಾಹಿತಿ ನೀಡಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ ಮಿಷನ್ ಶಕ್ತಿ ಯೋಜನೆಯಡಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಹಾಗೂ ಬೇಟಿ ಬಚಾವೋ, ಬೇಟಿ ಪಡಾವೋ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜು ಅವರು, ಮಿಷನ್ ಶಕ್ತಿಯು ಮಹಿಳೆಯ ಸುರಕ್ಷತೆ, ಭದ್ರತೆ ಮತ್ತು ಸಬಲೀಕರಣಕ್ಕಾಗಿ ಮಧ್ಯಸ್ಥಿಕೆ ಕ್ರಮಗಳನ್ನು ಬಲಪಡಿಸುವ ಗುರಿ ಹೊಂದಿದೆ ಎಂದು ಎಂದು ತಿಳಿಸಿದರು.

ಮಹಿಳಾ ಮುಂಚೂಣಿ ಅಭಿವೃದ್ಧಿಗಾಗಿ ಮಿಷನ್ ಶಕ್ತಿಯು ಮಹಿಳೆಯರ ಸುರಕ್ಷತೆ ಮತ್ತು ಮಹಿಳೆಯರ ಸಬಲೀಕರಣ ಎಂಬ ಎರಡು ಉಪ ಯೋಜನೆಗಳನ್ನು ಹೊಂದಿದೆ ಎಂದು ನಟರಾಜು ಮಾಹಿತಿ ನೀಡಿದರು.

ಮಿಷನ್ ಶಕ್ತಿ ಸೇವೆಗಳಲ್ಲಿ ಪ್ರಮುಖವಾಗಿ ಹಿಂಸೆಯಿಂದ ಬಾಧಿತರಾದ ಮಹಿಳೆಯರಿಗೆ ಒನ್ ಸ್ಟಾಪ್ ಸೆಂಟ್ರಲ್‌ಗಳ ಮುಖಾಂತರ ತಾತ್ಕಾಲಿಕ ಆಶ್ರಯ ಕಾನೂನು ನೆರವು, ಮಾನಸಿಕ, ಸಾಮಾಜಿಕ, ಸಮಾಲೋಚನೆ, ವೈದ್ಯಕೀಯ ನೆರವು ಪೊಲೀಸ್ ಸೌಲಭ್ಯಗಳ ಮೂಲಕ ನಿರಂತರ ಸೌಲಭ್ಯ ಮತ್ತು ರಕ್ಷಣೆ ಒದಗಿಸಲಾಗುತ್ತದೆ ಎಂದು ಹೇಳಿದರು.

ಮಹಿಳೆಯರ ಸಾಮಾಜಿಕ, ಸಾಂಸ್ಕೃತಿಕ, ರಾಜಕೀಯ ಮತ್ತು ಆರ್ಥಿಕ ಅಭಿವೃದ್ಧಿ ಮತ್ತು ಸಬಲೀಕರಣ ಗುರಿ ಹೊಂದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಮಾಹಿತಿ ನೀಡಿದರು.

‘ಬೇಟಿ ಬಚಾವೋ, ಬೇಟಿ ಪಡಾವೋ’ ಯೋಜನೆಯನ್ನು ದೇಶದಲ್ಲಿ ಇಳಿಕೆಯಾಗುತ್ತಿರುವ ಹೆಣ್ಣು ಮಕ್ಕಳ ಲಿಂಗಾನುಪಾತವನ್ನು ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಸಬಲೀಕರಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಗುರಿಯಾಗಿಟ್ಟುಕೊಂಡು ಕಾರ್ಯಕ್ರಮ ಆರಂಭಿಸಲಾಗಿದೆ ಎಂದರು.

ದೇಶದಲ್ಲಿ ಹೆಣ್ಣು ಮಗುವಿನ ವಿಷಯವಾಗಿ ಪ್ರಚಲಿತದಲ್ಲಿರುವ ಸಾಮಾಜಿಕ ನಡತೆಯನ್ನು ಬದಲಿಸುವುದಕ್ಕಾಗಿ ಮಾಹಿತಿ, ಪ್ರೇರಣೆ ಮತ್ತು ಭಾಗವಹಿಸುವಿಕೆಗಳ ಮೂಲಕ ಸಂಬಂಧಪಟ್ಟ ಎಲ್ಲಾ ಸಹಭಾಗಿಗಳನ್ನು ಸಶಕ್ತರನ್ನಾಗಿ ಮಾಡುವುದೇ ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದು ನಟರಾಜು ಅವರು ವಿವರಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಮಾತನಾಡಿ, ಮಿಷನ್ ಶಕ್ತಿ ಯೋಜನೆಯಡಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಹಾಗೂ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆ ಸಂಬಂಧಿಸಿದಂತೆ ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.

ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳು ಒಟ್ಟುಗೂಡಿ ಕಾರ್ಯನಿರ್ವಹಿಸಿದಾಗ ಮಹಿಳೆಯರ ಸುರಕ್ಷತೆ, ಮಕ್ಕಳ ರಕ್ಷಣೆ ಹಾಗೂ ಲಿಂಗಾನುಪಾತ ಸರಿದೂಗಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಮಾತನಾಡಿ, ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಸಮಾಜದಲ್ಲಿ ಇನ್ನೂ ಮುಖ್ಯವಾಹಿನಿಗೆ ಬರದವರನ್ನು ಗುರುತಿಸಿ ಸರ್ಕಾರದ ಸೌಲಭ್ಯವನ್ನು ತಲುಪಿಸಲು ಪ್ರಯತ್ನಿಸಬೇಕು. ಎಲ್ಲರನ್ನೂ ಒಳಗೊಂಡು ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಹೇಳಿದರು.

ಜಿ.ಪಂ. ಉಪ ಕಾರ್ಯದರ್ಶಿ ಧನರಾಜ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಉಮಾ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟರಾಜು, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಗಂಗಾಧರ ನಾಯಕ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕೃಷ್ಣಪ್ಪ ಇತರರು ಇದ್ದರು