ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಮಹಿಳೆಯರು ಆರ್ಥಿಕ ಸ್ವಾವಲಂಬನೆ ಸಾಧಿಸಿದಾಗ ಮಾತ್ರ ಕುಟುಂಬ ಹಾಗೂ ಸಮಾಜದಲ್ಲಿ ವ್ಯವಹಾರಗಳನ್ನು ಸಮರ್ಥವಾಗಿ ನಿರ್ವಹಣೆ ಮಾಡಲು ಸಾಧ್ಯ ಎಂದು ಶಾಸಕ ಸಿ. ಎನ್. ಬಾಲಕೃಷ್ಣ ಹೇಳಿದರು.

ತಾಲೂಕು ಪಂಚಾಯಿತಿ ಆವರಣದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಮತ್ತು ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಜಿಲ್ಲಾ ಔದ್ಯೋಗಿಕ ಕೇಂದ್ರದ ಯೋಜನೆಯಡಿ ಗ್ರಾಮೀಣ ಪ್ರದೇಶದ ಮಹಿಳೆಯರು ಮತ್ತು ವೃತ್ತಿಪರ ಕುಶಲಕರ್ಮಿಗಳಿಗೆ ಸ್ವಾವಲಂಬನೆಗಾಗಿ ೧೫ ಲಕ್ಷ ರು. ಮೌಲ್ಯದ ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಮತ್ತು ಇತರ ಯಂತ್ರೋಪಕರಣಗಳನ್ನು ವಿತರಣೆ ಮಾಡಿ ಮಾತನಾಡಿದ ಅವರು, ರಾಜ್ಯ ಕೇಂದ್ರ ಸರಕಾರ ಆರ್ಥಿಕ ಮತ್ತಯ ಶೈಕ್ಷಣಿಕ ಸ್ವಾವಲಂಬನೆಗೆ ಅನೇಕ ಯೋಜನೆಗಳನ್ನು ಜಾರಿಗೊಳಿಸಿ ಗ್ರಾಮೀಣ ಭಾಗದ ಮಹಿಳೆಯರಿಗೆ ಮತ್ತು ವೃತ್ತಿಪರ ಕುಶಲಕರ್ಮಿಗಳಿಗೆ ಆರ್ಥಿಕವಾಗಿ ಸ್ವಾವಲಂಬನೆ ಸಹಕಾರಿಯಾಗಿದೆ. ವಿವಿಧ ತರಬೇತಿಗಳನ್ನು ಪಡೆದು ಆ ಮೂಲಕ ಎಲ್ಲ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು, ಮಾರು ಕಟ್ಟೆಯ ಸಂಪೂರ್ಣ ಅರಿವು ಪಡೆದು ತಾವು ಪಡೆದ ತರಬೇತಿಯನ್ನು ಇನ್ನಷ್ಟು ವಿಸ್ತಾರಗೊಳಿಸಬೇಕು, ಮನುಷ್ಯನಿಗೆ ಆರ್ಥಿಕ ಪ್ರಗತಿಯೂ ಮುಖ್ಯ. ಆರ್ಥಿಕ ಸದೃಢತೆ ಹೊಂದಿದರೆ ಸ್ವಾವಲಂಬನೆಗೆ ದಾರಿಯಾಗುತ್ತದೆ ಎಂದು ಅವರು ತಿಳಿಸಿದರು.

೧೫೫ ಅರ್ಹ ಫಲಾನುಭವಿಗಳನ್ನು ಗುರುತಿಸಿ ಹೊಲಿಗೆ ಯಂತ್ರ ಮತ್ತು ವೃತ್ತಿಪರ ಕುಶಲಕರ್ಮಿಗಳ ಯಂತ್ರೋಪಕರಣಗಳನ್ನು ವಿತರಿಸಲಾಗುತ್ತಿದೆ. ಫಲಾನುಭವಿಗಳು ಇದರ ಸದುಪ ಯೋಗ ಪಡೆದುಕೊಂಡು ಕುಟುಂಬದ ಜವಾಬ್ದಾರಿಯನ್ನು ನಿರ್ವಹಿಸಿ, ದುಡಿದ ಹಣದಲ್ಲಿ ಸ್ವಲ್ಪ ಭಾಗವನ್ನು ಉಳಿತಾಯ ಮಾಡಿ ಸಂಕಷ್ಟದ ಸಮಯದಲ್ಲಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಗ್ರಾಮೀಣ ಕೈಗಾರಿಕಾ ಉಪ ನಿರ್ದೇಶಕ ಮಹೇಶ್ ಕುಮಾರ್ ಮಾತನಾಡಿ, ವಿವಿಧ ವೃತ್ತಿಗಳಿಗೆ ಲಭ್ಯವಿರುವ ಉಪಕರಣಗಳನ್ನು ವೃತ್ತಿಪರ ಕುಶಲಕರ್ಮಿಗಳಿಗೆ ಅವರ ಕೆಲಸದ ಗುಣಮಟ್ಟ ಹೆಚ್ಚಿಸಲು ಮತ್ತು ದೈನಂದಿನ ಕೆಲಸವನ್ನು ಸುಲಭಗೊಳಿಸಲು ಆಧುನಿಕ ಕಿಟ್‌ಗಳನ್ನು ನೀಡಲಾಗುತ್ತದೆ. ಆಧುನಿಕ ಉಪಕರಣಗಳು ಕೆಲಸವನ್ನು ತ್ವರಿತವಾಗಿ ಮತ್ತು ನಿಖರವಾಗಿ ಮಾಡಲು ಸಹಾಯ ಮಾಡುತ್ತವೆ. ಕೈಯಾರೆ ಮಾಡುವ ಕಠಿಣ ಕೆಲಸಗಳನ್ನು ಸುಲಭಗೊಳಿಸಿ, ದೈಹಿಕ ಆಯಾಸವನ್ನು ಕಡಿಮೆ ಮಾಡುತ್ತವೆ ಎಂದು ತಿಳಿಸಿದರು.

ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ಉತ್ಪಾದಿಸುವುದರಿಂದ ಮಾರುಕಟ್ಟೆಯಲ್ಲಿ ಬೇಡಿಕೆ ಮತ್ತು ಕುಶಲಕರ್ಮಿಗಳ ಆದಾಯ ಹೆಚ್ಚಾಗುತ್ತದೆ. ಆಧುನಿಕ ತಂತ್ರಜ್ಞಾನಕ್ಕೆ ತರಬೇತಿ ಹಾಗೂ ನವೀಕೃತ ಪರಿಕರಗಳ ಬಳಕೆಯು ಕುಶಲಕರ್ಮಿಗಳನ್ನು ಸ್ಪರ್ಧಾತ್ಮಕ ಜಗತ್ತಿಗೆ ಸಜ್ಜುಗೊಳಿಸಿ ಕೌಶಲ್ಯ ಅಭಿವೃದ್ಧಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.


ಕಾರ್ಯಕ್ರಮದಲ್ಲಿ ಕೈಗಾರಿಕಾ ಆನಂದ್, ವಿಸ್ತಾರಣಾಧಿಕಾರಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಜಿ. ಆರ್‌. ಹರೀಶ್, ಎಪಿಎಂಸಿ ಮಾಜಿ ಅಧ್ಯಕ್ಷ ವಳಗೆರೆಹಳ್ಳಿ ಮಂಜುನಾಥ್ ಇನ್ನಿತರರು ಭಾಗವಹಿಸಿದ್ದರು.