ಚನ್ನಪಟ್ಟಣ: ಮಹಿಳಾ ಸ್ವಸಹಾಯ ಸಂಘಗಳು ಹಾಗೂ ಒಕ್ಕೂಟಗಳು ಸರ್ಕಾರದ ವಿವಿಧ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಡಿ.ಅಮಿತ್‌ ಹೇಳಿದರು

ಚನ್ನಪಟ್ಟಣ: ಮಹಿಳಾ ಸ್ವಸಹಾಯ ಸಂಘಗಳು ಹಾಗೂ ಒಕ್ಕೂಟಗಳು ಸರ್ಕಾರದ ವಿವಿಧ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಡಿ.ಅಮಿತ್‌ ಹೇಳಿದರು. ತಾಲೂಕಿನ ಬಾಣಗಹಳ್ಳಿ ಗ್ರಾಮ ಪಂಚಾಯಿತಿ ಮಟ್ಟದ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು, ಮಹಿಳೆಯರು ಸಂಘಟಿತರಾಗಿ ತಮ್ಮ ಕುಟುಂಬದ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ಜತೆಗೆ, ಗ್ರಾಮದಲ್ಲಿ ಸ್ವಚ್ಛತೆ, ಶಿಕ್ಷಣ, ಆರೋಗ್ಯ ಹಾಗೂ ಮಕ್ಕಳ ರಕ್ಷಣೆಯಂತಹ ಸಾಮಾಜಿಕ ವಿಚಾರಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಎನ್‌ಆರ್‌ಎಲ್‌ಎಂ ಮೇಲ್ವಿಚಾರಕಿ ಅರ್ಪಿತಾ ಮಾತನಾಡಿ, ಸಂಜೀವಿನಿ ಒಕ್ಕೂಟದ ಉದ್ದೇಶ, ಮಹಿಳಾ ಸ್ವಸಹಾಯ ಸಂಘಗಳ ಚಟುವಟಿಕೆಗಳು, ಮಹಿಳೆಯರ ಆರ್ಥಿಕ ಸಬಲೀಕರಣ ಹಾಗೂ ಒಕ್ಕೂಟದ ಮೂಲಕ ಕೈಗೊಳ್ಳಬಹುದಾದ ವಿವಿಧ ಕಾರ್ಯಕ್ರಮಗಳ ಕುರಿತು ವಿವರಿಸಿದರು.

ಜಿಲ್ಲಾ ಸಂಯೋಜಕಿ ಲಕ್ಷ್ಮೀ ಮಾತನಾಡಿ, ಬಾಲ್ಯವಿವಾಹವು ಮಕ್ಕಳ ಶಿಕ್ಷಣ, ಆರೋಗ್ಯ ಹಾಗೂ ಭವಿಷ್ಯದ ಮೇಲೆ ಗಂಭೀರ ದುಷ್ಪರಿಣಾಮ ಬೀರುವುದರಿಂದ ಅದನ್ನು ತಡೆಗಟ್ಟುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಗ್ರಾಮೀಣ ಭಾಗದಲ್ಲಿ ಮಹಿಳೆಯರು ಜಾಗೃತರಾಗಿ ಬಾಲ್ಯವಿವಾಹ ನಡೆಯುತ್ತಿರುವುದು ಕಂಡುಬಂದರೆ ಸಂಬಂಧಿಸಿದ ಇಲಾಖೆಗೆ ತಕ್ಷಣ ಮಾಹಿತಿ ನೀಡಬೇಕು. ಪೋಷಕರಿಲ್ಲದ, ಪೋಷಕರ ಆರೈಕೆಯಿಂದ ವಂಚಿತ ಹಾಗೂ ಸಂಕಷ್ಟದಲ್ಲಿರುವ ಮಕ್ಕಳನ್ನು ಗುರುತಿಸಿ, ಮಕ್ಕಳ ರಕ್ಷಣಾ ವ್ಯವಸ್ಥೆಯ ಮೂಲಕ ಅವರಿಗೆ ಅಗತ್ಯ ನೆರವು ಕಲ್ಪಿಸುವ ಕುರಿತು ವಿವರಿಸಿದ ಅವರು, ಪ್ರತಿಯೊಂದು ಗ್ರಾಮದಲ್ಲಿರುವ ಮಹಿಳಾ ಸಂಘಟನೆಗಳು ಮಕ್ಕಳ ಭದ್ರತೆಯ ಮೊದಲ ಕಾವಲುಗಾರರಾಗಬೇಕು ಎಂದು ಹೇಳಿದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಸಿಬ್ಬಂದಿ, ತಮ್ಮ ಇಲಾಖೆಗಳ ಮೂಲಕ ಸಾರ್ವಜನಿಕರಿಗೆ ದೊರೆಯುವ ಸರ್ಕಾರಿ ಯೋಜನೆಗಳು, ಸವಲತ್ತುಗಳು ಹಾಗೂ ಸೇವೆಗಳ ಕುರಿತು ಮಾಹಿತಿ ನೀಡಿದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಡಾನ್ ಬಾಸ್ಕೋ ಸಂಸ್ಥೆಯಿಂದ ಸ್ತ್ರೀ ಶಕ್ತಿ ಸಂಘಗಳ ಒಕ್ಕೂಟದ ಮಹಿಳೆಯರಿಗೆ ಬಾಲ್ಯವಿವಾಹ, ದತ್ತು ಹಾಗೂ ಪೋಷಕತ್ವ ಕುರಿತು ವಿಶೇಷ ಅರಿವು ಕಾರ್ಯಕ್ರಮ ನಡೆಯಿತು.

ಮಕ್ಕಳಿಲ್ಲದ ಪೋಷಕರು ಕಾನೂನುಬದ್ಧವಾಗಿ ಮಗುವನ್ನು ದತ್ತು ಪಡೆಯಲು ಅನುಸರಿಸಬೇಕಾದ ಕ್ರಮಗಳು, ದತ್ತು ಪಡೆಯಲು ಅಗತ್ಯವಿರುವ ಅರ್ಹತೆಗಳು, ದಾಖಲೆಗಳು ಹಾಗೂ ಅರ್ಜಿ ಸಲ್ಲಿಸುವ ಪ್ರಕ್ರಿಯೆಯ ಕುರಿತು ಮಹಿಳೆಯರಿಗೆ ಮಾಹಿತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷೆ ಪಾರ್ವತಮ್ಮ, ಬ್ಯಾಂಕ್ ಸಿಬ್ಬಂದಿ ರೂಪ, ಕೃಷಿ ಇಲಾಖೆಯ ಅನುಷಾ, ತೋಟಗಾರಿಕೆ ಇಲಾಖೆಯ ಹರಿಪ್ರಕಾಶ್, ಒಕ್ಕೂಟದ ಕಾರ್ಯದರ್ಶಿ ಮಹದೇವಮ್ಮ, ಖಜಾಂಚಿ ಶಶಿಕಲಾ, ಎಸ್‌ಡಬ್ಲ್ಯು ಜ್ಯೋತಿ, ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.

ಪೊಟೋ೯ಸಿಪಿಟಿ೨:

ಚನ್ನಪಟ್ಟಣ ತಾಲೂಕಿನ ಬಾಣಗಹಳ್ಳಿ ಗ್ರಾಮ ಪಂಚಾಯಿತಿ ಮಟ್ಟದ ಸಂಜೀವಿನಿ ಒಕ್ಕೂಟದ ವಾರ್ಷಿಕ ಸಭೆಯಲ್ಲಿ ಪಿಡಿಒ ಅಮಿತ್ ಮಾತನಾಡಿದರು. ಒಕ್ಕೂಟದ ಅಧ್ಯಕ್ಷೆ ಪಾರ್ವತಮ್ಮ, ಬ್ಯಾಂಕ್ ಸಿಬ್ಬಂದಿ ರೂಪ, ಕೃಷಿ ಇಲಾಖೆಯ ಅನುಷಾ, ತೋಟಗಾರಿಕೆ ಇಲಾಖೆಯ ಹರಿಪ್ರಕಾಶ್ ಇತರರು ಪಾಲ್ಗೊಂಡಿದ್ದರು.