ಕನ್ನಡಪ್ರಭ ವಾರ್ತೆ ಶಿರಾ ಆಗ್ನೇಯ ಪದವೀಧರ ಕ್ಷೇತ್ರದಿಂದ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ನನ್ನನ್ನು ಅಧಿಕೃತ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದ್ದು, ನಾನು ಪದವೀಧರರ ಧ್ವನಿಯಾಗಿ ಅವರ ಆಶಯಗಳನ್ನು ಈಡೇರಿಸುವ ಕೆಲಸ ಮಾಡುತ್ತೇನೆ ಎಂದು ಆಗ್ನೇಯ ಪದವೀಧರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಹೇಳಿದರು. ಅವರು ಭಾನುವಾರ ನಗರದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಬಿಜೆಪಿಯಲ್ಲಿ ನಾನು ೧೯೯೪-೯೫ ರಿಂದ ಪಕ್ಷದಲ್ಲಿ ನಾನಾ ಹಂತದಲ್ಲಿ ಪಕ್ಷ ಸಂಘಟನೆಗೆ ದುಡಿದಿದ್ದೇನೆ. ಯುವ ಮೋರ್ಚಾ ಜಿಲ್ಲಾಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾಸಮಿತಿ ಕೋಶಾಧ್ಯಕ್ಷರಾಗಿ, ರಾಜ್ಯ ಶಿಕ್ಷಕರ ಪ್ರಕೋಷ್ಠದ ಸಹ ಸಂಚಾಲಕರಾಗಿ, ಮಂಡಲ ಮತ್ತು ಜಿಲ್ಲಾ ಸಮಿತಿಯಲ್ಲಿ ಹಲವು ಜವಾಬ್ಧಾರಿಗಳನ್ನು ನಿಭಾಯಿಸಿದ್ದೇನೆ. ೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ಹರಪನಹಳ್ಳಿ ವಿಧಾನಸಭೆ ಕ್ಷೇತ್ರದ ಚುನಾವಣಾ ಪ್ರಭಾರಿಯಾಗಿ ಕೆಲಸ ಮಾಡಿದ್ದೇನೆ. ನನ್ನ ಕೆಲಸಗಳನ್ನು ಮೆಚ್ಚಿ ಬಿಜೆಪಿ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಟಿಕೆಟ್ ನೀಡಿದ್ದು, ಕಳೆದ ಭಾರಿಯೂ ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಿದ್ದರು. ಅದೇ ರೀತಿ ಈ ಭಾರಿಯು ಎನ್.ಡಿ.ಎ. ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ. ನನ್ನನ್ನು ಗೆಲ್ಲಿಸುವ ಮೂಲಕ ಪದವೀಧರ ಧ್ವನಿಯಾಗಿ ಕೆಲಸ ಮಾಡಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು. ವಿಧಾನಪರಿಷತ್ ಮಾಜಿ ಸದಸ್ಯರಾದ ಡಾ.ಶಿವಯೋಗಿ ಸ್ವಾಮಿ ಮಾತನಾಡಿ ಆಗ್ನೇಯ ಪದವೀಧರ ಕ್ಷೇತ್ರದ ಎನ್.ಡಿ.ಎ. ಅಭ್ಯರ್ಥಿಯಾದ ಕೆ.ಎಂ. ಸುರೇಶ್ ಅವರು ಶಿಕ್ಷಣ ತಜ್ಞರು, ಹಲವಾರು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದಾರೆ. ದಾವಣಗೆರೆಯ ಸೋಮೇಶ್ವರ ಸಮೂಹ ಸಂಸ್ಥೆಗಳ ಸಂಸ್ಥಾಪಕರಾಗಿದ್ದಾರೆ. ಇವರು ಎಂಎ (ಸಮಾಜಶಾಸ್ತ್ರ) ಎಂಫಿಲ್, ಎಲ್‌ಎಲ್‌ಬಿ ವಿದ್ಯಾರ್ಹತೆ ಹೊಂದಿದ್ದಾರೆ. ದಾವಣಗೆರೆಯಲ್ಲಿ ಸೋಮೇಶ್ವರ ವಿದ್ಯಾಲಯ ಹಾಗೂ ಗೋಣಿವಾಡದಲ್ಲಿ ಸೋಮೇಶ್ವರ ವಸತಿಯುತ ವಿದ್ಯಾಲಯ, ಸೋಮೇಶ್ವರ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಹಾಗೂ ಸೋಮೇಶ್ವರ ಮಲ್ಟಿಸ್ಪೆಷಾಲಿಟಿ ಎಂಬ ಆಸ್ಪತ್ರೆಯನ್ನು ಸ್ಥಾಪಿಸಿ ನೂರಾರು ಜನರಿಗೆ ಉದ್ಯೋಗ ನೀಡಿದ್ದಾರೆ. ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದ್ದಾರೆ. ಆದ್ದರಿಂದ ಆಗ್ನೇಯ ಪದವೀಧರರು ಇವರಿಗೆ ಪ್ರಥಮ ಪ್ರಾಶಸ್ತ್ಯದ ಮತವನ್ನು ನೀಡಿ ಗೆಲ್ಲಿಸಿ ಎಂದರು. ಈ ಸಂದರ್ಭದಲ್ಲಿ ಕನಕ ಬ್ಯಾಂಕ್ ಅಧ್ಯಕ್ಷರು ಹಾಗೂ ಬಿಜೆಪಿ ಮುಖಂಡರು ಆದ ಬಿ.ಕೆ.ಮಂಜುನಾಥ್, ರೈಲ್ವೆ ಮಂಡಳಿ ಸದಸ್ಯ ವೀರೇಶ್, ಸೂಡಾ ಮಾಜಿ ಸದಸ್ಯ ನರಸಿಂಹಮೂರ್ತಿ, ಬಿಜೆಪಿ ಗ್ರಾಮಾಂತರ ಮಂಡಲ ಮಾಜಿ ಅಧ್ಯಕ್ಷ ರಂಗಸ್ವಾಮಿ, ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಕೋಟೆ ಬಾಬು, ಸಂತೋಷ್ ಸೇರಿದಂತೆ ಹಲವರು ಹಾಜರಿದ್ದರು.