ಧಾರವಾಡ:

ನಗರಗಳ ಅಭಿವೃದ್ಧಿ ಜತೆಗೆ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ ವಿ. ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಜರುಗಿಸಿದ ಅವರು, ಗ್ರಾಮಗಳ ಅಭಿವೃದ್ಧಿ ನಿಜವಾದ ಅಭಿವೃದ್ಧಿಯಾಗಿದ್ದು ಜಿಲ್ಲೆಯ ಪ್ರತಿಯೊಂದು ಗ್ರಾಮದ ಸಮಗ್ರ ಅಭಿವೃದ್ಧಿಗೆ ಕಾಮಗಾರಿಕೈಗೊಳ್ಳಬೇಕು. ಅದರಲ್ಲಿಯೂ ಗುಣಮಟ್ಟದ ಕಾಮಗಾರಿಗಳಿಗೆ ಹೆಚ್ಚಿನ ಪ್ರಾಧ್ಯಾನತೆ ನೀಡಬೇಕು. ಅನುದಾನಕ್ಕೆ ಅನುಸಾರವಾಗಿ ಕಾರ್ಯರೂಪಕ್ಕೆ ತರಬೇಕು. ಗ್ರಾಪಂ, ತಾಪಂ, ಜಿಪಂ ಅಧಿಕಾರಿಗಳು ಜವಾಬ್ದಾರಿಯುತವಾಗಿ ತಮ್ಮ ಕಾರ್ಯ ನಿರ್ವಹಿಸಬೇಕೆಂದು ಹೇಳಿದರು.

ಎಂ.ಜಿ ನರೇಗಾ ಯೋಜನೆಯ ಬದಲಾಗಿ ಜುಲೈ 1ರಿಂದ ವಿಬಿಜಿ ರಾಮಜೀ ಯೋಜನೆ ಜಾರಿಯಾಗಲಿದೆ. ಹೊಸ ಯೋಜನೆ ಕಾರ್ಯರೂಪಕ್ಕೆ ತರಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಗ್ರಾಮಗಳಿಗೆ ಅಧಿಕಾರಿಗಳು ಖುದ್ದು ಭೇಟಿ ನೀಡಿ, ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಬೇಕು. ಗ್ರಾಪಂಗಳಲ್ಲಿ ನಡೆಯುವ ಕಾಮಗಾರಿಗಳನ್ನು ಪಿಡಿಒ ಅವರು ಮೇಲ್ವಿಚಾರಣೆ ನಡೆಸಬೇಕು ಎಂದ ಅವರು, ರೈತರಿಂದ ಯಾವುದೇ ರೀತಿಯ ದೂರು ಬರದಂತೆ ನೋಡಿಕೊಳ್ಳಬೇಕು. ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ದೊರಕಬೇಕು ಎಂದರು.

ವಸತಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರು, ಗುಣಮಟ್ಟದ ಆಹಾರ, ಉತ್ತಮ ಶಿಕ್ಷಣ ದೊರಕಿಸಿ ಕೊಡುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು. ವಸತಿ ನಿಲಯಗಳಲ್ಲಿ ಸ್ವಚ್ಛ ವಾತಾವರಣ, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.


ಮಳೆಗಾಲದಲ್ಲಿ ವಿದ್ಯುತ್ ಕಂಬ ನೆಲಕ್ಕೆ ಉರುಳುವ ಸಂಭವ ಇದ್ದು ಬೀಳುವ ಹಂತದಲ್ಲಿರುವ ಕಂಬಗಳನ್ನು ಕೂಡಲೇ ತೆರವುಗೊಳಿಸಬೇಕು. ಗ್ರಾಮೀಣ ಭಾಗದಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಹೆಚ್ಚಿನ ಗಮನಹರಿಸುವ ಜತೆಗೆ ವಿದ್ಯುತ್ ಅವಘಡ ಆಗದಂತೆ, ಹೆಸ್ಕಾಂ ಅಧಿಕಾರಿಗಳು ಮುನ್ನಚ್ಚರಿಕಾ ಕ್ರಮ ಕೈಗೊಳ್ಳಬೇಕೆಂದು ಹೆಸ್ಕಾಂ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ವೇದಿಕೆಯಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್., ಜಿಪಂ ಸಿಇಒ ಭುವನೇಶ ಪಾಟೀಲ, ಪ್ರೊಬೇಷನರಿ ಐಎಎಸ್ ಅಧಿಕಾರಿ ಅನುಪ್ರಿಯಾ ಸಾಕ್ಯಾ ಇದ್ದರು.