ಮಕ್ಕಳ ಹಿತಾಸಕ್ತಿ ಕಾಪಾಡಲು ಕೆಲಸ ಮಾಡಬೇಕು

| Published : Mar 23 2024, 01:04 AM IST

ಸಾರಾಂಶ

ಮಕ್ಕಳ ರಕ್ಷಣೆ ಕಾರ್ಯ ನಿರ್ವಹಿಸುತ್ತಿರುವ ನಾವೆಲ್ಲರೂ ಬಾಲನ್ಯಾಯ ಮಕ್ಕಳ ಪಾಲನೆ ಮತ್ತು ರಕ್ಷಣೆ ಕಾಯ್ದೆ-೨೦೧೫ ಅರಿತುಕೊಂಡು ಮಕ್ಕಳ ಹಿತಾಸಕ್ತಿ ಕಾಪಾಡಲು ಒಟ್ಟಾಗಿ ಕೆಲಸ ಮಾಡಬೇಕು.

ಹಾವೇರಿ: ಮಕ್ಕಳ ರಕ್ಷಣೆ ಕಾರ್ಯ ನಿರ್ವಹಿಸುತ್ತಿರುವ ನಾವೆಲ್ಲರೂ ಬಾಲನ್ಯಾಯ ಮಕ್ಕಳ ಪಾಲನೆ ಮತ್ತು ರಕ್ಷಣೆ ಕಾಯ್ದೆ-೨೦೧೫ ಅರಿತುಕೊಂಡು ಮಕ್ಕಳ ಹಿತಾಸಕ್ತಿ ಕಾಪಾಡಲು ಒಟ್ಟಾಗಿ ಕೆಲಸ ಮಾಡಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಪುಟ್ಟರಾಜು ಅವರು ಹೇಳಿದರು.

ನಗರದ ಹಳೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಲಯದ ವತಿಯಿಂದ ಟ್ರಾಫಿಕ್ ಪೊಲೀಸ್ ಹಾಗೂ ವಿಶೇಷ ಪೊಲೀಸ್ ಘಟಕ, ನೋಂದಣಾಧಿಕಾರಿಗಳು, ಜನನ ಮತ್ತು ಮರಣ ನೋಂದಣಿ ಕಚೇರಿ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಆಯೋಜಿಸಲಾದ ವಾತ್ಸಲ್ಯ, ಬಾಲನ್ಯಾಯ(ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ ತಿದ್ದುಪಡಿ ೨೦೨೧ ಹಾಗೂ ದತ್ತು ನಿಯಮ-೨೦೨೨ರ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಅತೀ ಹೆಚ್ಚು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಎಲ್ಲಾ ಭಾಗೀದಾರರು ಕೈಜೋಡಿಸಿ ಮಕ್ಕಳ ರಕ್ಷಣೆಯಲ್ಲಿ ತೊಡಗಿದರೆ ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡಲು ಸಾಧ್ಯ. ಮಕ್ಕಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಹಾವೇರಿ ಉಪ ವಿಭಾಗದ ಡಿವೈಎಸ್‌ಪಿ ಗಣೇಶ ಕೆ.ಎಲ್ ಮಾತನಾಡಿ, ಮಕ್ಕಳ ರಕ್ಷಣೆ ಕಾನೂನುಗಳನ್ನು ಅರಿತುಕೊಂಡು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಬೆಂಗಳೂರು ಪೊಲೀಸ್ ಮಹಾ ನಿರ್ದೇಶಕರ ತರಬೇತಿ ಕಚೇರಿ ಪೊಲೀಸ್ ತರಬೇತಿದಾರ ರೋಹಿತ ಸಿ ಜಿ. ಉಪನ್ಯಾಸ ನೀಡಿದರು. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಸ್.ಹೆಚ್.ಮಜೀದ, ಪೊಲೀಸ್ ಸಬ್ ಇನ್ಸಪೆಕ್ಟರ್ ಸಿದ್ಧಾರೋಡ ಬಡಿಗೇರ ಇತರರು ಉಪಸ್ಥಿತರಿದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನ್ನಪೂರ್ಣ ಸಂಗಳದ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು.