ಸಾರಾಂಶ
ಬೃಹತ್ ರಕ್ತದಾನ ಶಿಬಿರ ಹಾಗೂ ವಿಶ್ವ ರಕ್ತದಾನಿಗಳ ದಿನಾಚರಣೆ ನಡೆಯಿತು. ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭಾಗವಹಿಸಿದರು.
ಕನ್ನಡಪ್ರಭ ವಾರ್ತೆ ವಿರಾಜಪೇಟೆವಿರಾಜಪೇಟೆಯ ಎಫ್ಎಂಸಿ ರಸ್ತೆಯಲ್ಲಿರುವ ಟೀಚರ್ಸ್ ಸ್ಟೋರ್ ಕಟ್ಟಡ ಸಭಾಂಗಣದಲ್ಲಿ ಸಹಾರ ಫ್ರೆಂಡ್ಸ್ ವಿರಾಜಪೇಟೆ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ಹಾಗೂ ವಿಶ್ವ ರಕ್ತದಾನಿಗಳ ದಿನಾಚರಣೆ ನಡೆಯಿತು.
ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭಾಗವಹಿಸಿ ಮಾತನಾಡಿ, ಇಂದಿನ ಯುಗದಲ್ಲಿ ರಕ್ತದಾನ ಎಂಬುದು ಎಲ್ಲ ದಾನಗಳಲ್ಲಿ ಶ್ರೇಷ್ಠ ಎನಿಸಿಕೊಂಡಿದೆ. ರಕ್ತದಾನ ಮಾಡುವ ಮೂಲಕ ಮತ್ತೊಬ್ಬರ ಜೀವಕ್ಕೆ ಅಮೂಲ್ಯ ಬೆಲೆ ಕೊಡುವುದರೊಂದಿಗೆ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದಕ್ಕೂ ಸಹಕಾರಿಯಾಗಲಿದೆ ಎಂದರು.ಇಂತಹ ಉತ್ತಮ ಕಾರ್ಯಕ್ರಮಗಳು ಜನರಲ್ಲಿ ಜಾಗೃತಿಯನ್ನು ಮೂಡಿಸುವಂತಿದ್ದು, ಇದರಿಂದ ಸಮಾಜ ಉತ್ತಮ ದಿಕ್ಕಿನಲ್ಲಿ ಚಲಿಸುವುದಕ್ಕೆ ಸಹಾಯವಾಗಲಿದೆ ಎಂದರು.
ರಕ್ತದಾನ ಶಿಬಿರದ ಆಯೋಜಕರನ್ನು ಅಭಿನಂದಿಸಿದ ಶಾಸಕರು, ಇವರ ಪ್ರಯತ್ನ ಎಲ್ಲರಿಗೂ ಪ್ರೇರಣೆಯಾಗಲಿ ಎಂದು ಹಾರೈಸಿದರು.ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಪುರಸಭೆ ಸದಸ್ಯರು ಹಾಗೂ ಕಾರ್ಯಕ್ರಮ ಆಯೋಜಕರು ಹಾಗೂ ಪಕ್ಷದ ಪ್ರಮುಖರು ಇದ್ದರು.