ಕುಂದಾಪುರ: ಇಲ್ಲಿನ ಪ್ರಸಿದ್ಧ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ವರ್ಷದ ಜಾಗತಿಕ ಪರಿಸರ ಧ್ಯೇಯವಾಕ್ಯವಾದ ಉತ್ತಮ ನಾಳೆಗಾಗಿ ಸ್ವಯಂಸೇವಕತ್ವ ಎಂಬ ಪರಿಕಲ್ಪನೆಯಡಿಯಲ್ಲಿ ಕಾಲೇಜಿನ ಆವರಣದಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕುಂದಾಪುರದ ಸಾಮಾಜಿಕ ಅರಣ್ಯ ವಲಯಾಧಿಕಾರಿ, ತುಳಸಿ ಅವರು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, "ಪರಿಸರ ಸಂರಕ್ಷಣೆ ಎನ್ನುವುದು ಕೇವಲ ಒಂದು ದಿನದ ಆಚರಣೆಯಾಗಬಾರದು. ತಂತ್ರಜ್ಞಾನ ಬೆಳೆದಂತೆಲ್ಲಾ ಪ್ರಕೃತಿಯ ಮೇಲಿನ ಒತ್ತಡ ಹೆಚ್ಚುತ್ತಿದೆ. ಭವಿಷ್ಯದ ಇಂಜಿನಿಯರ್‌ಗಳಾದ ವಿದ್ಯಾರ್ಥಿಗಳು ಪರಿಸರಸ್ನೇಹಿ ಆವಿಷ್ಕಾರಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಮತ್ತು ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಗಿಡ-ಮರಗಳನ್ನು ಬೆಳೆಸಿ ಪೋಷಿಸುವ ಜವಾಬ್ದಾರಿ ಹೊರಬೇಕು ಎಂದು ಕರೆ ನೀಡಿದರು.ಇನ್ನೋರ್ವ ಮುಖ್ಯ ಅತಿಥಿಯಾಗಿದ್ದ ಉಪವಲಯ ಅರಣ್ಯಾಧಿಕಾರಿ ನಾಗೇಶ್ ಬಿಲ್ಲವ ಅವರು ಮಾತನಾಡಿ, “ಕಾಡು ಮತ್ತು ಪರಿಸರ ಉಳಿದರೆ ಮಾತ್ರ ಮಾನವ ಕುಲದ ಉಳಿವು ಸಾಧ್ಯ. ಯುವ ಪೀಳಿಗೆಯಲ್ಲಿ ಪರಿಸರದ ಬಗ್ಗೆ ಸ್ವಯಂಪ್ರೇರಿತ ಕಾಳಜಿ ಮೂಡುವುದು ಇಂದಿನ ತುರ್ತು ಅಗತ್ಯವಾಗಿದೆ” ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ರಾಮಕೃಷ್ಣ ಹೆಗ್ಡೆ ವಹಿಸಿದ್ದು ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಪ್ರಾಮುಖ್ಯತೆ ಬಗ್ಗೆ ತಿಳಿಹೇಳಿದರು. ಕಾರ್ಯಕ್ರಮದ ಆಯೋಜಕರಾದ ಪ್ರೊಪೆಸರ್ ಬಾಲನಾಗೇಶ್ವರ್, ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಪರಿಸರ ರಕ್ಷಣೆಯ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿದರು. ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಕ್ರಮ ಮತ್ತು ಗಿಡ ನೆಡುವ ಹಸಿರು ಅಭಿಯಾನ ಯಶಸ್ವಿಯಾಗಿ ನಡೆಯಿತು.