ಸಾರಾಂಶ
ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ದ.ಕ. ಜಿಲ್ಲೆಯಾದ್ಯಂತ ಗಿಡ ನೆಡುವ ಪ್ರಸಕ್ತ ಸಾಲಿನ ಅಭಿಯಾನಕ್ಕೆ ಪಡೀಲ್ನಲ್ಲಿರುವ ನೂತನ ಜಿಲ್ಲಾಧಿಕಾರಿ ಕಚೇರಿ ‘ಪ್ರಜಾಸೌಧ’ ಆವರಣದಲ್ಲಿ ಗುರುವಾರ ಚಾಲನೆ ನೀಡಲಾಯಿತು. ಪ್ರಭಾರ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕನ್ನಡಪ್ರಭ ವಾರ್ತೆ ಮಂಗಳೂರು
ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ದ.ಕ. ಜಿಲ್ಲೆಯಾದ್ಯಂತ ಗಿಡ ನೆಡುವ ಪ್ರಸಕ್ತ ಸಾಲಿನ ಅಭಿಯಾನಕ್ಕೆ ಪಡೀಲ್ನಲ್ಲಿರುವ ನೂತನ ಜಿಲ್ಲಾಧಿಕಾರಿ ಕಚೇರಿ ‘ಪ್ರಜಾಸೌಧ’ ಆವರಣದಲ್ಲಿ ಗುರುವಾರ ಚಾಲನೆ ನೀಡಲಾಯಿತು. ಪ್ರಭಾರ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು, ಶುದ್ಧ ವಾತಾವರಣದ ಜೀವನಕ್ಕಾಗಿ ಹಾಗೂ ನೆಲ- ಜಲದ ಸಂರಕ್ಷಣೆಗೆ ಮರಗಳನ್ನು ಉಳಿಸಿ ಬೆಳೆಸಬೇಕಾದ ಅಗತ್ಯವಿದೆ. ಪ್ರಕೃತಿ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳಿಂದ ಪರಿಸರ ನಾಶವಾಗಿ ನಮ್ಮ ದೈನಂದಿನ ಜೀವನದ ಮೇಲೆ ಪರಿಣಾಮ ಬೀರುತ್ತಿದೆ. ಈ ನಿಟ್ಟಿನಲ್ಲಿ ಭೂಮಿ ಮೇಲೆ ಹಸಿರಿನ ಪ್ರಮಾಣವನ್ನು ಹೆಚ್ಚಿಸಬೇಕಾದ ಅಗತ್ಯತೆ ಇದೆ ಎಂದು ಹೇಳಿದರು.ಅರಣ್ಯ ಉಪ ಸಂರಕ್ಷಣಾಧಿಕಾರಿ ಆ್ಯಂಟನಿ ಮರಿಯಪ್ಪ ಮಾತನಾಡಿ, ದ.ಕ. ಜಿಲ್ಲಾ ಅರಣ್ಯ ವ್ಯಾಪ್ತಿಯಲ್ಲಿ ಪ್ರತಿ ವರ್ಷ 5 ಲಕ್ಷ ಗಿಡಗಳನ್ನು ನೆಡಲಾಗುತ್ತದೆ. ಈ ವರ್ಷ ಅರಣ್ಯ ಇಲಾಖೆಯು 1.03 ಲಕ್ಷ ಗಿಡಗಳನ್ನು ವಿವಿಧ ಕಡೆ ನೆಡಲು ವಿವಿಧ ಸಂಸ್ಥೆಗಳಿಗೆ ವಿತರಿಸುತ್ತಿದೆ ಎಂದರು.ಮಂಗಳೂರು- ಬೆಂಗಳೂರು ನಡುವಿನ ರಸ್ತೆ ಅಭಿವೃದ್ಧಿಗಾಗಿ ಸುಮಾರು 100 ಎಕರೆ ಪ್ರದೇಶದ 1.39 ಲಕ್ಷ ಮರಗಳನ್ನು ಕಡಿಯಲಾಗಿದೆ. ಇಂತಹ ಸಂದರ್ಭದಲ್ಲಿ ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ಪ್ರಾಕೃತಿಕ ಸಮಲೋಲನವನ್ನು ಕಾಯ್ದುಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಜಿ., ಮಹಾನಗರ ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಪಿಲಿಕುಳ ಆಯುಕ್ತ ಅರುಣ್ ಕುಮಾರ್ ಶೆಟ್ಟಿ, ವಲಯ ಅರಣ್ಯಾಧಿಕಾರಿ ರಾಜೇಶ್, ಸಿ.ಎಫ್.ಎ.ಎಲ್ ಪ್ರಾಂಶುಪಾಲೆ ಡಾ.ಸ್ಮಿತಾ ಹೆಗ್ಡೆ, ಚೈತ್ರಾ ಮತ್ತಿತರರು ಇದ್ದರು. ಉಪನ್ಯಾಸಕಿ ಡಾ. ರಶ್ಮಿ ಕೆ. ಸ್ವಾಗತಿಸಿದರು.
ದ.ಕ. ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ, ಎನ್.ಸಿ.ಸಿ, ಅರಣ್ಯ ಇಲಾಖೆ, ಸಿ.ಎಫ್.ಎ.ಎಲ್, ರೋಟರಿ ಮತ್ತು ಲಯನ್ಸ್ ಕ್ಲಬ್ ಮತ್ತಿತರ ಸಂಘಟನೆಗಳ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.ಪಡೀಲ್ನಲ್ಲಿ ನೂತನ ನೂತನ ಜಿಲ್ಲಾಧಿಕಾರಿ ಕಚೇರಿಗಾಗಿ ಕೆಲ ವರ್ಷಗಳ ಹಿಂದೆ 500ಕ್ಕೂ ಅಧಿಕ ಮರಗಳನ್ನು ಕಡಿಯಲಾಗಿತ್ತು. ಇದೀಗ ಆ ಪ್ರದೇಶದಲ್ಲಿ 350 ಗಿಡ ನೆಡುವ ಯೋಜನೆ ಹಾಕಿಕೊಳ್ಳಲಾಗಿದೆ.