ಉಡುಪಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಇಲ್ಲಿನ ಶ್ರೀ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯದಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಕಾರ್ಯಕ್ರಮವನ್ನು ಕಾಲೇಜಿನ ಔಷಧೀಯ ಸಸ್ಯೋದ್ಯಾನದಲ್ಲಿ ಹಮ್ಮಿಕೊಳ್ಳಲಾಯಿತು.

ಕಾಲೇಜಿನ ದ್ರವ್ಯಗುಣ ವಿಜ್ಞಾನ ವಿಭಾಗ, ಸಮುದಾಯ ಸೇವೆ, ಎನ್‌ಎಸ್‌ಎಸ್ ಘಟಕ ಹಾಗೂ ಕ್ಯಾಂಪಸ್ ಎನ್ರಿಚ್ಮೆಂಟ್ ಸಮಿತಿಯ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮವು ಪರಿಸರ ಜಾಗೃತಿ ಮೂಡಿಸುವ ಹಾಗೂ ಜೈವಿಕ ವೈವಿಧ್ಯ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸುವ ಉದ್ದೇಶ ಹೊಂದಿತ್ತು. ದ್ವಿತೀಯ ಬಿಎಎಂಎಸ್ ನ ಸುಮಾರು 100 ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಔಷಧೀಯ ಸಸ್ಯಗಳನ್ನು ನಾಟಿ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ದ್ರವ್ಯಗುಣ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ಶ್ರೀಕಾಂತ್ ಪಿ., ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಜೀವನಶೈಲಿಯ ಮಹತ್ವವನ್ನು ವಿವರಿಸಿ, ಆಯುರ್ವೇದ ಮತ್ತು ಪ್ರಕೃತಿಯ ಅವಿನಾಭಾವ ಸಂಬಂಧವನ್ನು ಉಲ್ಲೇಖಿಸಿ, ಔಷಧೀಯ ಸಸ್ಯಗಳ ಸಂರಕ್ಷಣೆ ಭವಿಷ್ಯದ ಆರೋಗ್ಯ ರಕ್ಷಣೆಗೆ ಅತ್ಯಂತ ಅಗತ್ಯವೆಂದು ತಿಳಿಸಿದರು. ವಿದ್ಯಾರ್ಥಿಗಳು ಪರಿಸರ ಸಂರಕ್ಷಣಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು. ಕಾರ್ಯಕ್ರಮವನ್ನು ದ್ರವ್ಯಗುಣ ವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕ ಡಾ. ಮೊಹಮ್ಮದ್ ಫೈಸಲ್ ಹಾಗೂ ಕಾಯಚಿಕಿತ್ಸಾ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಶ್ರೇಯಶ್ರಿ ಎನ್. ಸುವರ್ಣ ಸಂಯೋಜಿಸಿದ್ದರು. ಪ್ರಾಧ್ಯಾಪಕರಾದ ಡಾ. ರವಿಕೃಷ್ಣ, ಡಾ. ತೇಜಸ್ವಿ ನಾಯಕ್, ಡಾ. ಪೂರ್ಣಿಮಾ ಹಾಗೂ ಡಾ. ಅನೀಶ್ ಉಪಸ್ಥಿತರಿದ್ದರು.