ಸಾರಾಂಶ
ಕನ್ನಡಪ್ರಭ ವಾರ್ತೆ ಕೊಪ್ಪಳ
ಎಲ್ಲ ರಾಷ್ಟ್ರ ಮತ್ತು ರಾಜ್ಯಗಳಲ್ಲಿ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವುದು ವಿಶ್ವ ಆರೋಗ್ಯ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ. ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ಸ್ಪೀಪ್ ಸಮಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ ಇವುಗಳ ಸಂಯುಕ್ತಾಶ್ರಯದಲ್ಲಿ ನಗರದ ಹೊಸಪೇಟೆ ರಸ್ತೆಯ ಪಕ್ಕದ ಅಭಯ ಸಾಲ್ವೆಂಟ್ ರೈಸ್ ಮಿಲ್ನಲ್ಲಿ ಆಯೋಜಿಸಿದ್ದ ವಿಶ್ವ ಆರೋಗ್ಯ ದಿನಾಚರಣೆ ಹಾಗೂ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರತಿ ವರ್ಷ ಏ. 7ರಂದು ವಿಶ್ವ ಆರೋಗ್ಯ ದಿನ ಆಚರಿಸಲಾಗುತ್ತದೆ. ಈ ವರ್ಷ “ನನ್ನ ಆರೋಗ್ಯ, ನನ್ನ ಹಕ್ಕು” ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಇದರ ಉದ್ದೇಶ ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಇಲಾಖೆ ಯೋಜನೆಗಳನ್ನು ಪಡೆದುಕೊಂಡು ದೇಶವನ್ನು ರೋಗಮುಕ್ತಗೊಳಿಸಿ, ಸುಂದರ ಅಥವಾ ಆರೋಗ್ಯಕರ ವಾತಾವರಣ ನಿರ್ಮಿಸುವುದಾಗಿದೆ. ಎಲ್ಲರಿಗೂ ಆರೋಗ್ಯ ಎಲ್ಲೆಡೆಯೂ ಆರೋಗ್ಯ ಎಂಬ ಮಂತ್ರದೊಂದಿಗೆ ತಾವು ತಮ್ಮ ತಮ್ಮ ಗ್ರಾಮಗಳಲ್ಲಿ ಆರೋಗ್ಯಕರ ಮಾಹಿತಿ ಕುರಿತು ಅರಿವು ಮೂಡಿಸಬೇಕು ಎಂದು ಕಾರ್ಮಿಕರಿಗೆ ತಿಳಿಸಿದರು.ಆರೋಗ್ಯಕರ ಜೀವನಕ್ಕಾಗಿ ಪೌಷ್ಠಿಕ ಆಹಾರ ಸೇವನೆ, ನಿಯಮಿತ ವಾಯ್ಯಾಮ ಮಾಡುವುದು, ಮಾನಸಿಕ ಒತ್ತಡಗಳ ನಿರ್ವಹಣೆ, ದಶ್ಚಟಗಳಿಂದ ದೂರವಿರುವುದು, ನಿಯಮಿತ ಆರೋಗ್ಯ ತಪಾಸಣೆ ಮಾಡಿಸುವುದು, ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡುವುದು ಮುಂತಾದ ಸರಳ ಸೂತ್ರಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ತಿಳಿಸಿದರು.
ಮತದಾನದ ಬಗ್ಗೆ ಜಾಗೃತಿ:ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಮೇ 7ರಂದು ಮತದಾನ ನಡೆಯಲಿದೆ. ಅಂದು ಕಡ್ಡಾಯವಾಗಿ ಎಲ್ಲರೂ ಮತದಾನ ಮಾಡಿ, ಸುಭದ್ರ ಸರ್ಕಾರ ರಚಿಸಲು ಸಹಕರಿಸಬೇಕು. ಭಾರತ ಪ್ರಜಾಪ್ರಭುತ್ವ ದೇಶವಾಗಿದೆ. ಪ್ರಜೆಗಳಿಂದ ಪ್ರಜೆಗಳಿಗೋಸ್ಕರ ಪ್ರಜೆಗಳೇ ನಡೆಸುವ ಸರ್ಕಾರ ನಮ್ಮದಾಗಿದೆ. ನಾನು ಖಚಿತವಾಗಿ ಮತದಾನ ಮಾಡುವೆ ಎಂಬ ಘೋಷವಾಕ್ಯದೊಂದಿಗೆ ಮೇ 7 ರಂದು ನಡೆಯುವ ಚುನಾವಣೆಯಿಂದ ಯಾವುದೇ ಮತದಾರ ಹೊರಗುಳಿಯದಂತೆ, ಎಲ್ಲರೂ ಕಡ್ಡಾಯವಾಗಿ ಮತಗಟ್ಟೆಗೆ ಬಂದು, ಮತದಾನ ಮಾಡಬೇಕು ಎಂದು ತಿಳಿಸಿದರು. ನಂತರ ಮತದಾನ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಉದಯಕುಮಾರ, ಲಿಂಕ್ವರ್ಕರ್ ಯಲ್ಲಪ್ಪ, ಡಿಇಒ ಹಾಗೂ ಇತರೆ ಸಿಬ್ಬಂದಿ ಭಾಗವಹಿಸಿದ್ದರು.10ಕೆಪಿಎಲ್21 ನಗರದ ಹೊಸಪೇಟೆ ರಸ್ತೆಯ ಪಕ್ಕದಲ್ಲಿರುವ ಅಭಯ ಸಾಲ್ವೆಂಟ್ ರೈಸ್ ಮಿಲ್ನಲ್ಲಿ ವಿಶ್ವ ಆರೋಗ್ಯ ದಿನಾಚರಣೆ ಹಾಗೂ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು.