ವಿಶ್ವ ಮಾನವತಾವಾದಿ ಬಿ.ಆರ್. ಅಂಬೇಡ್ಕರ್

| Published : Nov 27 2024, 01:02 AM IST

ವಿಶ್ವ ಮಾನವತಾವಾದಿ ಬಿ.ಆರ್. ಅಂಬೇಡ್ಕರ್
Share this Article
  • FB
  • TW
  • Linkdin
  • Email

ಸಾರಾಂಶ

ಸಮಾಜದಲ್ಲಿ ಜಾತಿ, ಧರ್ಮಗಳ ಸಂಕೋಲೆಗಳಿಂದ ಮುಕ್ತರಾಗಿ ಸಂವಿಧಾನದ ಮೂಲಕ ಮನುಷ್ಯರು ಮನುಷ್ಯರಾಗಿ ಬದುಕಲು ಅವಕಾಶ ಕಲ್ಪಿಸಿದ ವಿಶ್ವ ಮಾನವತಾವಾದಿ ಡಾ: ಬಿ.ಆರ್. ಅಂಬೇಡ್ಕರ್ ಅವರು ನವ ಭಾರತದ ನಿರ್ಮಾಣಕ್ಕೆ ಶ್ರಮಿಸಿದವರಲ್ಲಿ ಅಗ್ರ ಪಂಕ್ತಿಯಲ್ಲಿ ನಿಲ್ಲುತ್ತಾರೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಅಭಿಪ್ರಾಯಪಟ್ಟರು.

ಕನ್ನಡಪ್ರಭ ವಾರ್ತೆ, ತುಮಕೂರುಸಮಾಜದಲ್ಲಿ ಜಾತಿ, ಧರ್ಮಗಳ ಸಂಕೋಲೆಗಳಿಂದ ಮುಕ್ತರಾಗಿ ಸಂವಿಧಾನದ ಮೂಲಕ ಮನುಷ್ಯರು ಮನುಷ್ಯರಾಗಿ ಬದುಕಲು ಅವಕಾಶ ಕಲ್ಪಿಸಿದ ವಿಶ್ವ ಮಾನವತಾವಾದಿ ಡಾ: ಬಿ.ಆರ್. ಅಂಬೇಡ್ಕರ್ ಅವರು ನವ ಭಾರತದ ನಿರ್ಮಾಣಕ್ಕೆ ಶ್ರಮಿಸಿದವರಲ್ಲಿ ಅಗ್ರ ಪಂಕ್ತಿಯಲ್ಲಿ ನಿಲ್ಲುತ್ತಾರೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ, ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಗರದ ಎಂಪ್ರೆಸ್ ಶಾಲಾ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಭಾರತ ಸಂವಿಧಾನ ದಿನಾಚರಣೆ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ದೇಶದಲ್ಲಿ ಅಸ್ಪಶ್ಯತೆಯೆಂಬ ಸಾಮಾಜಿಕ ಪಿಡುಗಿನಿಂದ ಜಡ್ಡುಗಟ್ಟಿದ ಸಮಾಜವನ್ನು ಪುನರ್ ನಿರ್ಮಾಣ ಮಾಡಲು ಸಮಾಜ ಸುಧಾರಕರಾಗಿ, ಅರ್ಥಶಾಸ್ತ್ರಜ್ಞರಾಗಿ ಅಂಬೇಡ್ಕರ್ ಅವರು ತೊಡಗಿಸಿಕೊಂಡಿದ್ದನ್ನು ಯಾರೂ ಅಲ್ಲಗಳೆಯುವಂತಿಲ್ಲ. ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠ ಸಂವಿಧಾನವನ್ನು ರಚಿಸಿ ಎಲ್ಲರ ಮನಸ್ಸಿನಲ್ಲಿ ಉಳಿಯುವಂತಹ ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು.ಸಂವಿಧಾನದ ಕರಡು ಸಮತಿಯ ಅಧ್ಯಕ್ಷರಾಗಿ ಅಂಬೇಡ್ಕರ್ ರಚಿಸಿದ ಭಾರತದ ಸಂವಿಧಾನವು 1949ರ ನವೆಂಬರ್ 26ರಂದು ಅಂಗೀಕರಿಸಿದ ಸವಿನೆನಪಿಗಾಗಿ ಭಾರತ ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ. ನಮ್ಮ ಸಂವಿಧಾನವು ಸಮಾಜದ ಎಲ್ಲ ವರ್ಗಗಳಿಗೆ ಶಿಕ್ಷಣ, ಅಧಿಕಾರ, ಉನ್ನತ ಸ್ಥಾನಮಾನವನ್ನು ದೊರಕಿಸಿಕೊಟ್ಟಿದೆ ಎಂದರು. ಅನ್ಯ ದೇಶಗಳ ಭಾಷೆ, ಧರ್ಮ, ಸಂವಿಧಾನವನ್ನು ಅಧ್ಯಯನ ಮಾಡಿ ಭಾರತ ಸಂವಿಧಾನ ರಚಿಸಿ ದೇಶಕ್ಕೆ ಕೊಡುಗೆ ನೀಡಿದ್ದಾರೆ. ಆಳುವ ವರ್ಗ, ಪರಕೀಯರ ಕಪಿಮುಷ್ಟಿಯಲ್ಲಿದ್ದ ಅಧಿಕಾರ, ಸಂಪತ್ತು, ನ್ಯಾಯವನ್ನು ಪ್ರತಿಯೊಬ್ಬರಿಗೂ ದಕ್ಕುವಂತೆ ಈ ಸಂವಿಧಾನ ಅವಕಾಶ ಕಲ್ಪಿಸಿದೆ. ಸಂವಿಧಾನ ನಮಗೆ ನೀಡಿದ ಹಕ್ಕು ಮತ್ತು ಸ್ವಾತಂತ್ರ್ಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಜಿಲ್ಲಾ ಉಸ್ತುವಾರಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ. ನಾಗಣ್ಣ ಮಾತನಾಡಿ, ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳು, ಸಾಂವಿಧಾನಿಕ ತತ್ವಗಳು ಮಹಿಳೆಯರ ಬದುಕಿನ ಘನತೆಯನ್ನು ಹೆಚ್ಚಿಸಿವೆ. ಎಲ್ಲಾ ಜಾತಿ, ಧರ್ಮ, ವರ್ಣ, ತಾರತಮ್ಯಗಳನ್ನು ಹೋಗಲಾಡಿಸಲು ಭಾರತ ಸಂವಿಧಾನ ರಚಿಸಿ ಜನರ ಮನದಲ್ಲಿ ಮನೆ ಮಾಡಿರುವ ಅಂಬೇಡ್ಕರ್ ಅವರು ಆಧುನಿಕ ಭಾರತದ ಅವತಾರ ಪುರುಷ ಎಂದರೆ ತಪ್ಪಾಗಲಾರದು ಎಂದು ಭಾವಿಸಿದರು. ಉಪನ್ಯಾಸ ನೀಡಿದ ಗೌರಿಬಿದನೂರು ತಾಲೂಕು ಕದಲವೇಣಿ ಸರ್ಕಾರಿ ಪ್ರೌಢಶಾಲೆ ಸಹ ಶಿಕ್ಷಕ ಸುಧಾಕರ್ ರೆಡ್ಡಿ, ಭಾರತದ ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯಾ ಒದಗಿಸಿದ ವಿಶ್ವದ ಶ್ರೇಷ್ಠ ಸಂವಿಧಾನಗಳಲ್ಲಿ ಒಂದಾಗಿದೆ. ಸಂವಿಧಾನದ ಮಹತ್ವದ ಬಗ್ಗೆ ಎಲ್ಲರಿಗೂ ಅರಿವು ಮೂಡಿಸಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವುದರ ಜೊತೆಗೆ ಅವರ ಸಾಧನೆಯ ಬಗ್ಗೆ ತಿಳಿಸಿ ಕೊಡುವುದು ಭಾರತ ಸಂವಿಧಾನ ದಿನಾಚರಣೆಯ ವಿಶೇಷತೆಯಾಗಿದೆ ಎಂದು ತಿಳಿಸಿದರು.ಚಿತ್ರದುರ್ಗ ಜಿಲ್ಲೆ ಸರ್ಕಾರಿ ಕಲಾ ಕಾಲೇಜು ಸಹಾಯಕ ಪ್ರಾಧ್ಯಾಪಕ ಡಾ: ಪಿ.ಎಸ್. ಗಂಗಾಧರ ಉಪನ್ಯಾಸ ನೀಡುತ್ತಾ ಸಂವಿಧಾನವು ದೇಶದ ಜನರನ್ನು ಸಶಕ್ತಗೊಳಿಸಿದೆ. ಸಂವಿಧಾನದಿಂದ ದೊರೆತಿರುವ ಮೂಲಭೂತ ಹಕ್ಕುಗಳಿಂದ ಪ್ರಗತಿ ಸಾಧಿಸಲು ಸಾಧ್ಯವಾಗಿದೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಸಂವಿಧಾನದ ಪೀಠಿಕೆಯನ್ನು ಬೋಧಿಸಲಾಯಿತು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ತಹಶೀಲ್ದಾರ್ ರಾಜೇಶ್ವರಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ತ್ಯಾಗರಾಜು, ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಶಬ್ಬೀರ್ ಅಹಮ್ಮದ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಮಂಜುನಾಥ್, ಮತ್ತಿತರರು ಇದ್ದರು.

ಇದಕ್ಕೂ ಮುನ್ನ ಭಾರತ ಸಂವಿಧಾನ ದಿನಾಚರಣೆ ಅಂಗವಾಗಿ ಮಹಾನಗರ ಪಾಲಿಕೆಯ ಟೌನ್ ಹಾಲ್ ವೃತ್ತದಿಂದ ಚರ್ಚ್ ವೃತ್ತ, ಜಿಲ್ಲಾಧಿಕಾರಿಗಳ ಕಚೇರಿ ಮೂಲಕ ಎಂಪ್ರೆಸ್ ಕಾಲೇಜು ಆವರಣದವರೆಗೆ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರದ ಭವ್ಯ ಮೆರವಣಿಗೆಯನ್ನು ಏರ್ಪಡಿಸಲಾಗಿತ್ತು.